ರಾಜ್ಯ ಸರಕಾರದ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ
ಮೈಸೂರು, ಫೆಬ್ರವರಿ 17: ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೈಸೂರಿನಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರಕಾರ ಮೌಲ್ಯಮಾಪನ ಬಹಿಷ್ಕರಿಸುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಜರುಗಿಸುವ ಕಾಯ್ದೆಯನ್ನು ತರಲು ಮುಂದಾಗಿರುವುದು ತೊಘಲಕ್ ದರ್ಬಾರಿನಂತಾಗಿದೆ. ಪಠ್ಯಪುಸ್ತಕ ಬದಲಾವಣೆಯಲ್ಲಿಯೂ ಅನಗತ್ಯ ಗೊಂದಲ ಸೃಷ್ಟಿಸಿ ವಿದ್ಯಾರ್ಥಿಗಳಿಗೆ ಪೋಷಕರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಹರಿಹಾಯ್ದರು.[ವಿಧಾನಸಭೆ ಚುನಾವಣೆಗೆ ಜೆಡಿಎಸ್ ನಲ್ಲಿ ಈಗಲೇ ಕಾರ್ಯೋತ್ಸಾಹ]
ಕಾಂಗ್ರೆಸ್ ಸೇರ್ಪಡೆಗೊಂಡ ಕಳಲೆ ಕೇಶವಮೂರ್ತಿ ವಿಚಾರಕ್ಕೆ ಹೊರಳಿ ಅವರಂತಹ ಅಪಾಯಕಾರಿ ಮನುಷ್ಯ ಮತ್ತೊಬ್ಬರಿಲ್ಲ. ಅವರನ್ನು ಕಾಂಗ್ರೆಸ್ಸಿಗೆ ಹೋಗಿ ಎಂದು ನಾವ್ಯಾರು ಹೇಳಿರಲಿಲ್ಲ ಉಪಚುನಾವಣೆಗೆ ಅವರನ್ನೇ ಕಣಕ್ಕಿಳಿಸಲು ತೀರ್ಮಾನಿಸಲಾಗಿತ್ತು. ಅದರೆ ಇದ್ದಕ್ಕಿದ್ದಂತೆ ಕಾಂಗ್ರೆಸ್ಸಿಗೆ ಸೇರ್ಪಡೆಗೊಂಡು ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿದ್ದಾರೆ ಎಂದು ಜರಿದರು.
ಮುಂಬರುವ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಉಪಚುನಾವಣೆಯಲ್ಲಿ ಹಣದ ಹೊಳೆಯನ್ನು ಹರಿಸಲು ಸಿದ್ಧವಾಗಿವೆ. ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯದಿದ್ದರೆ ಜನ ಗೊಂದಲಕ್ಕೀಡಾಗುತ್ತಾರೆ ಎಂದರು.
ಇದು ಮುಂಬರುವ ಸಾರ್ವತ್ರಿಕ ಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಶತಸಿದ್ಧ ಎಂದರು.