ಸಚಿವರ ನಿಧನಕ್ಕೆ ಕಂಬನಿ ಮಿಡಿದ ಜೆಎಸ್ಎಸ್ ಕಾಲೇಜು
ಮೈಸೂರು, ಜನವರಿ 3 : ಮೈಸೂರಿನ ಬಿ.ಎನ್ ರಸ್ತೆಯಲ್ಲಿರುವ ಜೆ.ಎಸ್.ಎಸ್. ಪದವಿ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಅಗಲಿದ ಸಕ್ಕರೆ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿ ಮೌನ ಆಚರಿಸಲಾಯಿತು.
ರಾಜ್ಯ ಸಹಕಾರ, ಸಕ್ಕರೆ ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಮಹದೇವ ಪ್ರಸಾದ್ ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾಗಿರುವುದು ತುಂಬಾ ನೋವಿನ ಸಂಗತಿಯಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಜನಪ್ರಿಯ ರಾಜಕಾರಣಿಯನ್ನು ನೆನೆದರು.
ಕಾಲೇಜಿನ ದಿನಗಳಲ್ಲಿಯೇ ವಿದ್ಯಾರ್ಥಿ ಸಂಘದ ಚುನಾವಣೆಗಳಲ್ಲಿ ಸ್ಪರ್ಧಿಸಿ ಅಧ್ಯಕ್ಷರಾಗಿ ಆಯ್ಕೆಯಾಗುವುದರ ಮೂಲಕ ತಮ್ಮ ಸಂಘಟನಾ ಶಕ್ತಿಯನ್ನು ಸಾಬೀತು ಪಡಿಸಿದ್ದರು. ಗುಂಡ್ಲುಪೇಟೆ ಕ್ಷೇತ್ರದಿಂದ ಸತತವಾಗಿ 5 ಬಾರಿ ರಾಜ್ಯ ವಿಧಾನಸಭೆಗೆ ಆಯ್ಕೆಯಾಗುವ ಮೂಲಕ ಜನಪ್ರಿಯ ನಾಯಕರಾಗಿದ್ದರು ಎಂದು ಅವರನ್ನು ಬಣ್ಣಿಸಿದರು. [ಎಚ್ಎಸ್ಎಂ ನಿಧನ : ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ]
ಆಹಾರ ಮತ್ತು ನಾಗರೀಕ ಪೂರೈಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಚಿವರಾಗಿಯೂ ಸಾರ್ಥಕ ಸೇವೆಯನ್ನು ಸಲ್ಲಿಸಿದ್ದರು. 'ಸಂಗಮ ಪ್ರತಿಷ್ಠಾನ'ವನ್ನು ಸ್ಥಾಪಿಸಿ ಅದರ ಮೂಲಕ ಉಚಿತ ಸಾಮೂಹಿಕ ವಿವಾಹ, ಆರೋಗ್ಯ ತಪಾಸಣಾ ಶಿಬಿರ ಹಾಗೂ ಉದ್ಯೋಗ ಮೇಳಗಳನ್ನು ಆಯೋಜಿಸಿದ್ದರು ಎಂದು ಅವರನ್ನು ಕೊಂಡಾಡಿದರು.
ಅವರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ಕರುಣಿಸಲಿ ಮತ್ತು ಅವರ ಕುಟುಂಬ ವರ್ಗದವರಿಗೆ ಇವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಕಾಲೇಜಿನ ಪ್ರಾಂಶುಪಾಲರು ಆಶಿಸಿದರು. ಮುಖ್ಯ ಕಾರ್ಯನಿರ್ವಾಹಕರು, ಅಧ್ಯಾಪಕರು, ಅಧ್ಯಾಪಕೇತರರು ಮತ್ತು ವಿದ್ಯಾರ್ಥಿವೃಂದ ಸಚಿವರ ನಿಧನಕ್ಕೆ ಕಂಬನಿ ಮಿಡಿದಿದೆ. [ವ್ಯಕ್ತಿಚಿತ್ರ : ಸಜ್ಜನ ರಾಜಕಾರಣಿ ಎಚ್ ಎಸ್ ಮಹದೇವ ಪ್ರಸಾದ್]