ಸಿದ್ದರಾಮಯ್ಯನವರಿಂದ ಅಧಿಕಾರ ದುರುಪಯೋಗ: ಶೋಭಾ ಕರಂದ್ಲಾಜೆ
ಸಿಎಂ ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆಯಲ್ಲಿ ಗೆಲುವು ಸಾಧಿಸುವ ಉದ್ದೇಶದಿಂದ ಅಧಿಕಾರಿಗಳನ್ನು ಹೆದರಿಸುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಮೈಸೂರು, ಮಾರ್ಚ್ 21: ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತದೆಂಬ ಹತಾಶೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ಮಾಡಿಸಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.[ನಾಮಪತ್ರ ಸಲ್ಲಿಕೆ: ಚಿತ್ರಗಳಲ್ಲಿ ಉಪಚುನಾವಣೆ ರಂಗು]
ಸೋಮವಾರ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣೆಗೂ ಮುನ್ನವೇ ಸೋಲೊಪ್ಪಿಕೊಂಡಿದ್ದಾರೆ ಎಂದರು.
ಇದರಿಂದ ಹತಾಶರಾಗಿ ಬಿಜೆಪಿ ಕಾರ್ಯಕರ್ತರನ್ನು ಹೆದರಿಸಿ ಹಿಂದೆ ಸರಿಯುವಂತೆ ಮಾಡುವ ಸಲುವಾಗಿ ಗುಂಡ್ಲುಪೇಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಲಾಠಿ ಚಾರ್ಜ್ ಮಾಡಿಸಿದ್ದಾರೆ. ಇದರಿಂದ ಮೂವರು ಬಿಜೆಪಿ ಕಾರ್ಯಕರ್ತರಿಗೆ ಗಂಭೀರ ಗಾಯಗಳಾಗಿವೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಸಹ ಹೇಳಿದರು.
ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಲು ಸೆಂಟ್ರಲ್ ಫೋರ್ಸ್ ನಿಯೋಜನೆ ಮಾಡಿ, ಚುನಾವಣಾ ವೀಕ್ಷಕರನ್ನು ನೇಮಿಸುವಂತೆ ಮನವಿ ಮಾಡಲಾಗುವುದು ಎಂದು ಹೇಳಿದರು.[ನಾಮಪತ್ರ ಸಲ್ಲಿಕೆ ವೇಳೆ ಮಾತಿನ ಚಕಮಕಿ-ಲಘುಲಾಠಿ ಪ್ರಹಾರ]
ಸಿಎಂ ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆಯಲ್ಲಿ ಗೆಲುವು ಸಾಧಿಸುವ ಉದ್ದೇಶದಿಂದ ಅಧಿಕಾರಿಗಳನ್ನು ಹೆದರಿಸುತ್ತಿದ್ದಾರೆ. ತಮಗೆ ಬೇಕಾದ ಅಧಿಕಾರಿಗಳನ್ನು ಮೂರು ವರ್ಷ ತುಂಬಿದರೂ ವರ್ಗಾವಣೆ ಮಾಡದೆ ಭ್ರಷ್ಟಾಚಾರದಲ್ಲಿ ತೊಡಗಿಕೊಳ್ಳುವಂತೆ ಮಾಡುತ್ತಿದ್ದಾರೆ.
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಜಾನುವಾರುಗಳು ಮೇವಿಲ್ಲದೆ ಪರದಾಡುತ್ತಿದ್ದರೂ ಗೋಶಾಲೆ ತೆರೆದಿಲ್ಲ.
ಅಲ್ಲದೆ ಮೇವು ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದಾರೆ ಎಂದು ದೂರಿದರು.[ನಂಜನಗೂಡು ಉಪಚುನಾವಣೆ: ಬಿಜೆಪಿ ನಾಯಕರ ಮನೆಯಲ್ಲಿ ಕಾಂಗ್ರೆಸ್ ಸಚಿವರು!]