ರಾಜ್ಯ ಮುಕ್ತ ಮಾನ್ಯತೆಗೆ ಸಚಿವ ಪ್ರಕಾಶ್ ಜಾವ್ಡೇಕರ್ ಗೆ ಮನವಿ
ಮೈಸೂರು, ಅಕ್ಟೋಬರ್ 13: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮಾನ್ಯತೆ ನವೀಕರಣಗೊಳಿಸುವಂತೆ ಒತ್ತಾಯಿಸಿ ಮುಕ್ತ ವಿವಿ ಕುಲಪತಿ ಶಿವಲಿಂಗಯ್ಯ ಅವರು ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ರಿಗೆ ಮನವಿ ಪತ್ರ ಸಲ್ಲಿಸಿದರು.
ಕರಾಮುವಿ ಮಾನ್ಯತೆ ಅಮಾನ್ಯಗೊಂಡಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಜೀವನ ಅತ್ರಂತವಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಗೆ ಮಾನ್ಯತೆ ನೀಡಬೇಕೆಂದು ಮನವಿ ಮಾಡಿದರು.
ಈಗಾಗಲೇ ಮಾನ್ಯತೆಗಾಗಿ ಸಂಬಂಧಪಟ್ಟವರಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದನ್ನು ತಿಳಿಸಿದ ಕುಲಪತಿಗಳು ಹಲವು ದಾಖಲೆಗಳ ಜತೆ ಮಾನ್ಯತೆ ನವೀಕರಣಕ್ಕಾಗಿ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಿವಲಿಂಗಯ್ಯ ಅವರಿಗೆ ಮುಕ್ತ ವಿವಿಯ ಇತರೆ ಅಧಿಕಾರಿಗಳು ಸಾಥ್ ನೀಡಿದರು.
ಕರಾಮುವಿ ಸಮಸ್ಯೆಗಳ ಕುರಿತ ಅಧ್ಯಯನಕ್ಕೆ ಉನ್ನತ ಮಟ್ಟದ ತನಿಖಾ ತಂಡವೊಂದನ್ನು ರಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ 2 ಸಾವಿರಕ್ಕೂ ಹೆಚ್ಚು ಮಂದಿ ಸಚಿವರನ್ನು ಭೇಟಿಯಾಗಿದ್ದು, ಮೈಸೂರಿನಿಂದಲೂ ತಂಡವೊಂದು ಬೆಂಗಳೂರಿಗೆ ತಲುಪಿದೆ.
ಕರಾಮುವಿ ಸಿಬ್ಬಂದಿ, ನೌಕರರ ತಂಡ ಮಾತ್ರವಲ್ಲದೆ ರಾಜ್ಯಾದ್ಯಂತದಿಂದ ವಿದ್ಯಾರ್ಥಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ.
ಈ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತಕುಮಾರ್, ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಮಾಜಿ ಸಚಿವ ಎಸ್.ಎ.ರಾಮದಾಸ್, ಕರಾಮುವಿ ಉಳಿಸಿ ಹೋರಾಟ ವೇದಿಕೆಯ ಕೆ.ಎಸ್.ಶಿವರಾಮು ಇತರರು ಉಪಸ್ಥಿತರಿದ್ದರು.