ಪಕ್ಷ ವಿರೋಧಿ ಚಟುವಟಿಕೆ ಕಾರಣಕ್ಕೆ ಸಿದ್ದರಾಮಯ್ಯ ಉಚ್ಚಾಟನೆ: ಎಚ್ಡಿಕೆ
ಮೈಸೂರು, ಏಪ್ರಿಲ್ 26: ಚುನಾವಣೆಯಲ್ಲಿ ಹೆಚ್ಚಿನ ಪಾಲು ಮತಗಳು ನಮಗೇ ಹಂಚಿಕೆಯಾಗಲಿವೆ. ದಲಿತರಲ್ಲಿ ಮಾತ್ರವಲ್ಲ ಬುದ್ದಿಜೀವಿಗಳೂ ನಮ್ಮನ್ನು ಶ್ಲಾಘಿಸುತ್ತಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಏನು ಮಾಡಿವೆ ಎಂಬುದನ್ನು ಕರ್ನಾಟಕದ ಜನರು ನೋಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
ಈ ಬಾರಿ ಸಿದ್ದರಾಮಯ್ಯ ಆಟ ನಡೆಯೋಲ್ಲ: ಎಚ್ ಡಿ ಕುಮಾರಸ್ವಾಮಿ
ಈ ಎರಡು ಪಕ್ಷಗಳ ಕಾರ್ಯವೈಖರಿಯಿಂದ ತೀರಾ ಬೇಸೆತ್ತಿರುವ ಜನರು ನಮಗೆ ಮತ ಚಲಾಯಿಸಲು ನಿರ್ಧರಿಸಿದ್ದಾರೆ. ಈ ಕಾರಣಕ್ಕೇ ಜನರು ಜೆಡಿಎಸ್ ಮತ್ತು ಬಹುಜನ ಸಮಾಜಪಕ್ಷದ ಬಗ್ಗೆ ಒಲವು ಹೊಂದಿದ್ದಾರೆ ಎಂದರು.
ತಾವಾಗಿಯೇ ಜೆಡಿಎಸ್ಅನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿಲ್ಲ. ಬದಲಾಗಿ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರೇ ತಮ್ಮನ್ನು ಪಕ್ಷದಿಂದ ಹೊರಹಾಕಿದರು ಎಂಬ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ, ಪಕ್ಷ ವಿರೋಧಿ ಚಟುವಟಿಕೆಗಳ ಕಾರಣ ಅವರನ್ನು ಅಮಾನತು ಮಾಡಲಾಗಿತ್ತು ಎಂದರು.
ಸಿದ್ದರಾಮಯ್ಯ ಅವರನ್ನು ದೇವೇಗೌಡ ಅವರು ಅಮಾನತು ಮಾಡಲಿಲ್ಲ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಅವರನ್ನು ಉಚ್ಚಾಟನೆ ಮಾಡಿದ್ದರು. ಜೆಡಿಎಸ್ ಮುಖಂಡರಾಗಿ ಅವರು ತಮ್ಮ ಕಾಂಗ್ರೆಸ್ ಸ್ನೇಹಿತರ ಜತೆ ಪ್ರತ್ಯೇಕ ಸಭೆಗಳನ್ನು ನಡೆಸುತ್ತಿದ್ದರು. ಹೀಗಾಗಿ ಪಕ್ಷ ಅವರನ್ನು ಅಮಾನತು ಮಾಡಲು ನಿರ್ಧರಿಸಿತು ಎಂದು ವಿವರಣೆ ನೀಡಿದರು.
ಕಾಂಗ್ರೆಸ್ ಮತ್ತು ಬಿಜೆಪಿಗಳು ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿವೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ವಾಗ್ದಾಳಿ ನಡೆಸಿದರು.