ಸಿದ್ದರಾಮಯ್ಯ ಸೋಲಿಗಾಗಿ ಕಾದು ಕುಳಿತ ನಾಯಕರ ಪಟ್ಟಿ!
Recommended Video
ಮೈಸೂರು, ಏಪ್ರಿಲ್ 13 : ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಕ್ಷೇತ್ರ ಚಾಮುಂಡೇಶ್ವರಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆಯಿಂದ ಕ್ಷೇತ್ರದಲ್ಲಿ ಕುತೂಹಲ ಹೆಚ್ಚಾಗಿದೆ, ಸಿದ್ದರಾಮಯ್ಯ ಅವರನ್ನು ಸೋಲಿಸಲೇಬೇಕೆಂದು ಹಲವಾರು ನಾಯಕರು ಪಣ ತೊಟ್ಟಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಸಿದ್ದರಾಮಯ್ಯ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಕ್ಷೇತ್ರದ ಹಾಲಿ ಶಾಸಕ, ಜೆಡಿಎಸ್ ನಾಯಕ ಜಿ.ಟಿ.ದೇವೇಗೌಡ ಅವರು ಪ್ರಬಲ ಪೈಪೋಟಿ ನೀಡಲಿದ್ದಾರೆ. ಬಿಜೆಪಿ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಬಿಜೆಪಿಯೂ ಸಿದ್ದರಾಮಯ್ಯ ಸೋಲಿಸಲು ತಂತ್ರ ರೂಪಿಸುತ್ತಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಟಿಕೆಟ್ ರಾಜಕೀಯ
ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ 5 ಬಾರಿ ಗೆಲುವು ಕಂಡಿದ್ದಾರೆ. ಆದರೆ, ಈ ಬಾರಿಯ ಚುನಾವಣೆ ಉಳಿದ ಚುನಾವಣೆಗಿಂತ ಭಿನ್ನ. ಸಿದ್ದರಾಮಯ್ಯ ಸೋಲಿಸಲು ಹಲವು ನಾಯಕರು ಕಾದು ಕುಳಿತಿದ್ದಾರೆ. ವರುಣಾ ಕ್ಷೇತ್ರವನ್ನು ಮಗನಿಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿಗೆ ಆಗಮಿಸಿರುವ ಸಿದ್ದರಾಮಯ್ಯ ಅವರಿಗೆ ಗೆಲುವ ಸುಲಭದ ತುತ್ತಲ್ಲ.
ಚಾಮುಂಡೇಶ್ವರಿ ಚಕ್ರವ್ಯೂಹ: ಮಹತ್ವದ ಕ್ಷೇತ್ರದ ಹಿನ್ನೋಟ
ಈಗಾಗಲೇ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಮತ್ತೊಂದು ಕಡೆ 'ಮುಖ್ಯಮಂತ್ರಿಗಳನ್ನು ಸೋಲಿಸುವುದು ಖಂಡಿತ' ಎಂದು ಜಿ.ಟಿ.ದೇವೇಗೌಡ ಘೋಷಣೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಸೋಲಿಗೆ ಕಾದು ಕುಳಿತ ನಾಯಕರು ಯಾರು?ನೋಡೋಣ..
ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ದೇವೇಗೌಡರು!
ಶಾಸಕ ಜಿ.ಟಿ.ದೇವೇಗೌಡ
ಚಾಮುಂಡೇಶ್ವರಿ ಕ್ಷೇತ್ರದ ಹಾಲಿ ಶಾಸಕ ಜಿ.ಟಿ.ದೇವೇಗೌಡ ಅವರು ಸಿದ್ದರಾಮಯ್ಯ ಅವರನ್ನು ಸೋಲಿಸಲು ಕಾದು ಕುಳಿತಿದ್ದಾರೆ. '5 ಬಾರಿ ಗೆದ್ದ ಕ್ಷೇತ್ರವನ್ನು ಸಿದ್ದರಾಯ್ಯ ಕಡೆಗಣಿಸಿದ್ದಾರೆ. ಈ ಬಾರಿ ದಲಿತ ಸಂಘಟನೆಗಳು ಅವರ ವಿರುದ್ಧ ತಿರುಗಿ ಬಿದ್ದಿದೆ. ಈ ಬಾರಿಯ ಚುನಾವಣೆಯಲ್ಲಿ ಅವರನ್ನು ಸೋಲಿಸುತ್ತೇವೆ' ಎಂದು ಜಿ.ಟಿ.ದೇವೇಗೌಡರು ಹೇಳಿದ್ದಾರೆ.
ಜಿ.ಟಿ.ದೇವೇಗೌಡ ಅವರ ಬೆಂಬಲಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ನಿಂತಿದ್ದಾರೆ. 'ಸಿದ್ದರಾಮಯ್ಯ ಸೋಲಿಸುವುದು ಖಂಡಿತ' ಎಂದು ಕುಮಾರಸ್ವಾಮಿ ಅವರು ಈಗಾಲೇ ಘೋಷಣೆ ಮಾಡಿದ್ದಾರೆ.
ವಿ.ಶ್ರೀನಿವಾಸ ಪ್ರಸಾದ್
ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಅವರು ಸಿದ್ದರಾಮಯ್ಯ ಅವರನ್ನು ಸೋಲಿಸಲು ಪಣ ತೊಟ್ಟಿದ್ದಾರೆ. ನಂಜನಗೂಡು ಉಪ ಚುನಾವಣೆ ಸೋಲು, ಸಚಿವ ಸ್ಥಾನ ಕೈತಪ್ಪಿದ ಸೇಡು ಎಲ್ಲವನ್ನೂ ತೀರಿಸಿಕೊಳ್ಳಲು ವಿ.ಶ್ರೀನಿವಾಸ ಪ್ರಸಾದ್ ಕಾದು ಕುಳಿತಿದ್ದಾರೆ.
'ನಾವು ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿಯೇ ಸೋಲಿಸುತ್ತೇವೆ. ಆದರೆ, ಯಾವ ರೀತಿ ಸೋಲಿಸುತ್ತೇವೆ ಎಂಬ ರಾಜಕೀಯ ತಂತ್ರಗಾರಿಕೆ ಗುಟ್ಟು ಬಿಟ್ಟುಕೊಡುವುದಿಲ್ಲ' ಎಂದು ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.
ಎಚ್.ವಿಶ್ವನಾಥ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಾಗಿಯೇ ಕಾಂಗ್ರೆಸ್ ಪಕ್ಷ ಬಿಟ್ಟು ಜೆಡಿಎಸ್ ಸೇರಿರುವ ಮಾಜಿ ಸಂಸದ, ಸಚಿವ ಎಚ್.ವಿಶ್ವನಾಥ್ ಸಿದ್ದರಾಮಯ್ಯ ಸೋಲಿಸಲು ಪಣ ತೊಟ್ಟಿದ್ದಾರೆ. ಜಿ.ಟಿ.ದೇವೇಗೌಡ ಅವರಿಗೆ ಸಂಪೂರ್ಣ ಬೆಂಬಲ ನೀಡಲಿದ್ದಾರೆ. ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಚಾರವನ್ನು ನಡೆಸಲಿದ್ದಾರೆ.
ಎಚ್.ವಿಶ್ವನಾಥ್ ಅವರು ಹುಣಸೂರು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಅವರ ವಿಚಾರ ಬಂದಾಗ ಎಲ್ಲಾ ಜೆಡಿಎಸ್ ನಾಯಕರು ಒಂದಾಗಿ ಅವರ ವಿರುದ್ಧ ಪ್ರಚಾರ ನಡೆಸಿ, ಸೋಲಿಸಲು ಪ್ರಯತ್ನ ನಡೆಸಲಿದ್ದಾರೆ.
ಬಿಜೆಪಿ ಅಭ್ಯರ್ಥಿ ಯಾರು?
'ಸಿದ್ದರಾಮಯ್ಯ ಮತ್ತು ಅವರ ಪುತ್ರ ಡಾ.ಯತೀಂದ್ರ ಅವರನ್ನು ಸೋಲಿಸುವುದು ನಮ್ಮ ಗುರಿ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಈಗಾಗೇ ಘೋಷಣೆ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಇನ್ನೂ ಪ್ರಕಟಿಸಿಲ್ಲ. ಪಕ್ಷದ 2ನೇ ಪಟ್ಟಿಯಲ್ಲಿ ಅಭ್ಯರ್ಥಿಯನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.
ಮತ್ತೊಂದು ಕಡೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಸಿದ್ದರಾಮಯ್ಯ ಸೋಲಿಲು ಕಾದು ಕುಳಿತಿದ್ದಾರೆ. ಹುಣಸೂರಿನ ಹನುಮ ಜಯಂತಿ ವಿವಾದ ಸೇರಿದಂತೆ ಹಲವು ಬಾರಿ ಪ್ರತಾಪ್ ಸಿಂಹ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರನ್ನು ಸೋಲಿಸಲು ತಂತ್ರ ರೂಪಿಸುತ್ತಿದ್ದಾರೆ.
ಸಿದ್ದರಾಮಯ್ಯ ಎರಡು ಕಡೆ ಸ್ಪರ್ಧೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿನ ಭಯ ಕಾಡುತ್ತಿದೆಯೇ?. ಸದ್ಯದ ಬೆಳವಣಿಗೆಗಳನ್ನು ನೋಡಿದರೆ ಹೌದು. ಅದಕ್ಕಾಗಿಯೇ ಅವರು ಬಾಗಲಕೋಟೆಯ ಬಾದಾಮಿ ಕ್ಷೇತ್ರದಿಂದಲೂ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ 5 ಬಾರಿ ಗೆದ್ದಿರುವ ಸಿದ್ದರಾಮಯ್ಯ ಅವರು, 'ಇದು ನನ್ನ ಕೊನೆಯ ಚುನಾವಣೆ' ಎಂದು ಹೇಳುತ್ತಾ ಕ್ಷೇತ್ರದಲ್ಲಿ ಪ್ರಚಾರವನ್ನು ನಡೆಸುತ್ತಿದ್ದಾರೆ. ಚಾಮುಂಡೇಶ್ವರಿಯ ಆಶೀರ್ವಾದ ಯಾರ ಮೇಲಿದೆ? ಎಂಬುದಕ್ಕೆ ಕಾಲವೇ ಉತ್ತರಿಸಬೇಕು.