ಡಿಕೆಶಿ ಮೇಲಿನ ಐಟಿ ದಾಳಿಗೆ ಮೋದಿ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಸಿಟ್ಟು
ಮೈಸೂರು, ಆಗಸ್ಟ್ 3: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂಧನ ಸಚಿವ ಡಿಕೆ ಶಿವಕುಮಾರ್ ಮೇಲೆ ನಡೆಸಿರುವ ದಾಳಿ ವಿಚಾರವನ್ನು ಕಾಂಗ್ರೆಸ್ ಕಾರ್ಯಕರ್ತರು ವೈಯಕ್ತಿಕ ದಾಳಿ ಎಂಬಂತೆ ತೆಗೆದುಕೊಂಡಿದ್ದು, ಈ ವಿಚಾರವನ್ನೇ ಮುಂದೆ ಮಾಡಿಕೊಂಡು ಮೈಸೂರಿನಲ್ಲಿ ಗುರುವಾರ ಭಾರೀ ಪ್ರತಿಭಟನೆಯನ್ನು ನಡೆಸಿದ್ದಾರೆ.
ಡಿಕೆ ಶಿವಕುಮಾರ್ ಮೇಲೆ ಐಟಿ ದಾಳಿ : ಗುರುವಾರದ ಬೆಳವಣಿಗೆಗಳು
ಮೈಸೂರಿನ ಗಾಂಧಿ ವೃತ್ತದಲ್ಲಿ ನಗರ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿದರು. ರಾಜಕೀಯ ದುರುದ್ದೇಶದಿಂದಲೇ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಆದಾಯ ತೆರಿಗೆ ದಾಳಿ ನಡೆಸುವಂತೆ ಸೂಚನೆ ನೀಡಿದೆ ಎಂದು ಇದೇ ಸಂದರ್ಭದಲ್ಲಿ ಪ್ರತಿಭಟನಾನಿರತರು ಆರೋಪಿಸಿದರು.
ಗುರುವಾರವೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ. ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಹೆದ್ದಾರಿ ಕೂಡ ತಡೆಯಲಾಗಿದೆ.
ಕಾಂಗ್ರೆಸ್ ನಗರಾಧ್ಯಕ್ಷ ಮೂರ್ತಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಧ್ಯಕ್ಷ ವಿಜಯಕುಮಾರ್, ಪಾಲಿಕೆಯ ಸದಸ್ಯರು, ಮಾಜಿ ಮೇಯರ್ ಪುಷ್ಪಲತಾ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.