ಎರಡನೇ ಆಷಾಢ ಶುಕ್ರವಾರ: ಚಾಮುಂಡಿಬೆಟ್ಟಕ್ಕೆ ಹರಿದುಬಂದ ಭಕ್ತ ಸಾಗರ
ಮೈಸೂರು, ಜುಲೈ 27 : 2ನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಪೂಜೆ ಸಂಭ್ರಮ ಮನೆಮಾಡಿತ್ತು.
ಚಾಮುಂಡೇಶ್ವರಿ ದೇವಿಗೆ ನಾಗಲಕ್ಷ್ಮಿ ಅಲಂಕಾರ ಮಾಡಲಾಗಿದ್ದು, ರುದ್ರಾಭಿಷೇಕ, ಪಂಚಾಮೃತ ಅಭಿಷೇಕಗಳು ದೇವಿಗೆ ಸಂಪನ್ನಗೊಂಡವು. ಇನ್ನು ಪ್ರತಿಬಾರಿ ಬೆಳಗ್ಗೆ 5.30ಕ್ಕೆ ದರ್ಶನ ಕಲ್ಪಿಸಲಾಗುತ್ತಿತ್ತು. ಆದರೆ ಇಂದು ಚಂದ್ರಗ್ರಹಣ ಹಿನ್ನೆಲೆಯಲ್ಲಿ ಬೆಳಗ್ಗೆ 5 ಗಂಟೆಯಿಂದಲೇ ಭಕ್ತರಿಗೆ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿತ್ತು.
ಮೈಸೂರು: ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಚಾಲೆಂಜಿಂಗ್ ಸ್ಟಾರ್
ಕೆಂಪುಬಣ್ಣದ ಸೀರೆಯನ್ನುಟ್ಟು ಶೇಷ ಲಕ್ಷ್ಮೀ ಅಲಂಕಾರಲ್ಲಿ ತಾಯಿ ಚಾಮುಂಡೇಶ್ವರಿ ಕಂಗೊಳಿಸುತ್ತಿದ್ದಳು. ಇನ್ನು ಸಂಜೆ 6 ಕ್ಕೆ ಅಭಿಷೇಕ, ಮಹಾಮಂಗಳಾರತಿ ನಂತರ ಚಂದ್ರಗ್ರಹಣ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ಅವಕಾಶವಿಲ್ಲವೆಂದು ದೇವಸ್ಥಾನದ ಪ್ರಧಾನ ಅರ್ಚಕ ಡಾ.ಶಶಿಶೇಖರ್ ದೀಕ್ಷಿತ್ ತಿಳಿಸಿದ್ದಾರೆ.
ದೇವಿಯ ದರ್ಶನಕ್ಕೆ ಬೆಳಗ್ಗೆಯಿಂದಲೇ ಭಕ್ತರು ಸಾಗರೋಪಾದಿಯಲ್ಲಿ ಬರುತ್ತಿದ್ದಾರೆ. ಸಣ್ಣ, ನೀರಾವರಿ ಸಚಿವ ಸಿ.ಎಸ್ ಪುಟ್ಟರಾಜು ಅವರ ಪತ್ನಿ ಸಮೇತ ಆಗಮಿಸಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪುನೀತರಾದರು.
ಇತ್ತ ಸಂಸದೆ ಶೋಭಾ ಕರಂದ್ಲಾಜೆ ಮೆಟ್ಟಿಲುಗಳನ್ನು ಏರಿ ತಾಯಿಯ ದರ್ಶನ ಪಡೆದರು. ಇತ್ತ ಸಚಿವ ರೇವಣ್ಣ ಕೂಡ ಚಾಮುಂಡೇಶ್ವರಿಯ ದರ್ಶನಕ್ಕೆ ಆಗಮಿಸಿದ್ದರು.