ದಸರಾಕ್ಕೆ ಮೈಸೂರು ಸಜ್ಜು, ಶನಿವಾರ ಉದ್ಘಾಟನೆ
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಶನಿವಾರ ಬೆಳಗ್ಗೆ 10.44 ರಿಂದ 11.07ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ದಸರಾಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್, ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಪ್ರಕಾಶ್ ಹುಕ್ಕೇರಿ, ಶಾಸಕ ಜಿ.ಟಿ.ದೇವೇಗೌಡ ಮುಂತಾದವರು ಈ ಸಂದರ್ಭದಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಶನಿವಾರ ಸಂಜೆ 6 ಗಂಟೆಗೆ ಅರಮನೆ ಆವರಣದಲ್ಲಿ ರಂಗಕರ್ಮಿ ನಾಡೋಜ ಡಾ.ಏಣಗಿ ಬಾಳಪ್ಪ ಅವರು ದಸರಾ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ. ಇದೇ ವೇದಿಕೆಯಲ್ಲಿ ರಾಜ್ಯ ಸಂಗೀತ ವಿದ್ವಾನ ಪ್ರಶಸ್ತಿ ಪ್ರಧಾನ ಸಮಾರಂಭವೂ ನಡೆಯಲಿದೆ.
ದಸರಾ ಉತ್ಸವದ ಹಿನ್ನಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಆಗಮಿಸಲಿದ್ದಾರೆ. 10 ದಿನಗಳ ದಸರಾ ಉತ್ಸವ ಆಚರಿಸಲು ನಗರ ಸಕಲ ರೀತಿಯಲ್ಲಿ ಸಜ್ಜಾಗಿ ನಿಂತಿದೆ.
ಗುರುವಾರ ರಾತ್ರಿಯ ವರೆಗೂ ಅರಮನೆ ಸುತ್ತಲಿನ ರಾಜಪಥ ಕಾಮಗಾರಿ ನಡೆಯುತ್ತಿತ್ತು. ಕೆಲವು ರಸ್ತೆಗಳ ಡಾಂಬರೀಕರಣ ಕಾಮಗಾರಿಯನ್ನು ಗುರುವಾರ ತಡರಾತ್ರಿ ಪೂರ್ಣಗೊಳಿಸಲಾಗಿದೆ. ಶುಕ್ರವಾರ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳುವ ನಿರೀಕ್ಷೆ ಇದೆ.
ದಸರಾ ಹಿನ್ನೆಲೆಯಲ್ಲಿ ಗುರುವಾರ ಮೈಸೂರು ನಗರ ಸ್ಪತ್ಛತಾ ಆಂದೋಲನ ಹಮ್ಮಿಕೊಳ್ಳಲಾಗಿತ್ತು. ಚಾಮುಂಡಿ ಬೆಟ್ಟದಲ್ಲಿ ಆರಂಭವಾದ ಆಂದೋಲನದಲ್ಲಿ ಪರಿಸರವಾದಿ ಸುರೇಶ್ ಹೆಬ್ಳಿಕರ್, ಮೇಯರ್ ರಾಜೇಶ್ವರಿ, ಶಾಸಕ ಜಿ.ಟಿ.ದೇವೇಗೌಡ ಪಾಲ್ಗೊಂಡಿದ್ದರು.