ಮೋದಿ ಅಗ್ನಿಪರೀಕ್ಷೆ ಗೆದ್ದಿದ್ದಾರೆ: ವಿ.ಶ್ರೀನಿವಾಸ್ ಪ್ರಸಾದ್
ಉತ್ತರ ಪ್ರದೇಶದಲ್ಲಿ ಚುನಾವಣೆ ಫಲಿತಾಂಶ ಯಾರೂ ನಿರೀಕ್ಷೆ ಮಾಡದ ರೀತಿಯಲ್ಲಿ ಬಂದಿದೆ ಎಂದು ಬಿಜೆಪಿ ಮುಖಂಡ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಪಕ್ಷಗಳು ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದವು. ಆದರೆ ಫಲಿತಾಂಶದಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಪಡೆದಿದೆ ಎಂಬುದನ್ನು ಹುಡುಕಬೇಕಿದೆ. ಉತ್ತರಪ್ರದೇಶ ಚುನಾವಣೆ ಮೋದಿಗೆ ಅಗ್ನಿ ಪರೀಕ್ಷೆಯಾಗಿತ್ತು. ಅವರ ನಾಯಕತ್ವವನ್ನು ಜನ ಒಪ್ಪಿಕೊಂಡಿದ್ದಾರೆ ಎಂದು ಬಂದಿರುವ ಫಲಿತಾಂಶವೇ ತಿಳಿಸುತ್ತದೆ ಎಂದರು.
ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ತಲೆ ಎತ್ತದಂತಾಗಿದ್ದು, ದುರ್ಬಲವಾಗಿದೆ. ರಾಹುಲ್ ಗಾಂಧಿ ಪ್ರತಿನಿಧಿಸುವ ಅಮೇಥಿ ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಮೇಲುಗೈ ಸಾಧಿಸಿದೆ. ಉತ್ತರಪ್ರದೇಶ ಮತ್ತು ಉತ್ತರಾಖಂಡ ಫಲಿತಾಂಶ ಕರ್ನಾಟಕದ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದು ತಿಳಿಸಿದರು.
ನಂಜನಗೂಡಿನಲ್ಲಿ ಕಾಂಗ್ರೆಸ್ ನೈತಿಕವಾಗಿ ದಿವಾಳಿಯಾಗಿದೆ. ನಂಜನಗೂಡು ಮತ್ತು ಗುಂಡ್ಲುಪೇಟೆ ಕಾಂಗ್ರೆಸ್ ಭದ್ರಕೋಟೆ ಎಂದು ಹೇಳುತ್ತಿದ್ದೀರಿ. ಆದರೆ ನಿಮ್ಮ ಭದ್ರಕೋಟೆಯನ್ನು ನೀವು ಉಳಿಸಿಕೊಳ್ಳಿ ನೋಡೋಣ ಎಂದು ಮುಖ್ಯಮಂತ್ರಿ ಸಿದರಾಮಯ್ಯಗೆ ಟಾಂಗ್ ನೀಡಿದರು.