ಮೈಸೂರಿನಲ್ಲಿ ಪೊಲೀಸ್ ಭದ್ರತೆ ನಡುವೆ ಟಿಪ್ಪುಜಯಂತಿ
ಮೈಸೂರು ನವೆಂಬರ್ 4: ಟಿಪ್ಪುಜಯಂತಿ ಆಚರಣೆಗೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆ ಮೈಸೂರಿನಲ್ಲಿ ಪೊಲೀಸ್ ಬಂದೋಬಸ್ತ್ ನಡುವೆ ಜಯಂತಿ ಅಚರಿಸಲು ಮುಂದಾಗಿದೆ.
ಟಿಪ್ಪು ಜಯಂತಿಗೆ ದಿನಗಣನೆ ಆರಂಭವಾಗಿದ್ದು, ಸರ್ಕಾರದ ನಿರ್ದೇಶನದಂತೆ ಮೈಸೂರು ಜಿಲ್ಲಾಡಳಿತ ವ್ಯಾಪಕ ಸಿದ್ಧತೆ ನಡೆಸಿದೆ. ಪೊಲೀಸ್ ಬಂದೋಬಸ್ತ್ ನಲ್ಲಿ ಸುಸೂತ್ರವಾಗಿ ನಡೆಸಲು ಕಾರ್ಯತಂತ್ರರೂಪಿಸಿದೆ.
ಈಗಾಗಲೇ ಅಲ್ಲಲ್ಲಿ ಆಚರಣೆಗೆ ವಿರೋಧಗಳು ವ್ಯಕ್ತವಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಂಡಿದ್ದು, ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಶಾಂತಿಯುತವಾಗಿ ಟಿಪ್ಪು ಜಯಂತಿ ಆಚರಿಸಲು ಬೇಕಾದ ವ್ಯವಸ್ಥೆ ಮಾಡಲಾಗುತ್ತಿದೆ.
ಈ ಕುರಿತಂತೆ ಮಾತನಾಡಿರುವ ಮೈಸೂರು ನಗರದ ಪೊಲೀಸ್ ಕಮೀಷನರ್ ಡಾ. ಎ. ಸುಬ್ರಹ್ಮಣ್ಯೇಶ್ವರ ರಾವ್, "ನಗರದಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯ ಇಲ್ಲ' ಎಂದಿದ್ದಾರೆ.[ಕೊಡಗು: ಪೊಲೀಸ್ ಭದ್ರತೆಯಲ್ಲಿ ಟಿಪ್ಪು ಜಯಂತಿ]
ಈಗಾಗಲೇ ಒಟ್ಟು 36 ಸಮಾಜ ಘಾತುಕ ವ್ಯಕ್ತಿಗಳ ವಿರುದ್ಧ (ರೌಡಿ ಶೀಟರ್, ಗೂಂಡಾ ಮತ್ತು ಕಮ್ಯೂನಲ್ ಗೂಂಡಾಗಳು) ಭದ್ರತಾ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಇನ್ನೂ ಕೆಲವರ ವಿರುದ್ದ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಕೋಮು ಸೌಹಾರ್ಧತೆಗೆ ಧಕ್ಕೆತರುವ ಕೃತ್ಯಗಳಲ್ಲಿ ಭಾಗಿಯಾಗುವ ವ್ಯಕ್ತಿಗಳನ್ನು, ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ.[ಟಿಪ್ಪು ಸುಲ್ತಾನ್ ನಿಜ ಇತಿಹಾಸ, ರಾಜಕಾರಣ ಹಾಗೂ ಸತ್ಯಾನ್ವೇಷಣೆ]
ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ ನಗರಕ್ಕೆ ಒಳ ಪ್ರವೇಶಿಸುವ ಮತ್ತು ಹೊರ ಹೋಗುವವರ ಮೇಲೆ ನಿಗಾ ವಹಿಸಲಾಗುತ್ತಿದೆ. ಅಲ್ಲದೆ ಸಶಸ್ತ್ರ ಮೀಸಲು ಪಡೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೌಹಾರ್ಧಯುತವಾಗಿ ವರ್ತಿಸಿ ನಗರದ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರೊಂದಿಗೆ ಸಹಕರಿಸುವಂತೆಯೂ ಅವರು ಮನವಿ ಮಾಡಿದ್ದಾರೆ.