ಮೈಸೂರಿನಲ್ಲಿ ಅಪರಿಚಿತ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ
ಮೈಸೂರು, ಫೆಬ್ರವರಿ 17 : ಉದಯಗಿರಿ ಮುಖ್ಯರಸ್ತೆಯಲ್ಲಿ ಗುರುವಾರ ರಾತ್ರಿ ಅಪರಿಚಿತ ವ್ಯಕ್ತಿಯೋಬ್ಬರನ್ನು ಯಾರೋ ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ.
ಶುಕ್ರವಾರ ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ ಮಂದಿಗೆ ಶವದ ಗುರುತು ಸಿಗದಾಗಿದೆ. ಮುಖವನ್ನು ಸಂಪೂರ್ಣ ಕಲ್ಲಿನಿಂದ ಜಜ್ಜಲಾಗಿದೆ. ಕೂಡಲೇ ಉದಯಗಿರಿ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕಾಗಮಿಸಿದ ಉದಯಗಿರಿ ಠಾಣೆ ಇನ್ಸಪೆಕ್ಟರ್ ಅಶೋಕ್ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ, ಹಾಗೂ ಶ್ವಾನದಳ ಭೇಟಿ ನೀಡಿತು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.
ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಮಾಡಿರುವುದು ಯಾರು? ಕೊಲೆಯಾದಾತ ಯಾರು? ಯಾಕಾಗಿ ಕೊಲೆ ಮಾಡಿದರು ಎನ್ನುವುದು ಹೆಚ್ಚಿನ ತನಿಖೆಯಿಂದ ತಿಳಿದುಬರಬೇಕಿದೆ. ಆರ್ಎಸ್ಎಸ್ ಕಾರ್ಯಕರ್ತ ರಾಜು ಎನ್ನುವವರನ್ನು ಇದೇ ಜಾಗದಲ್ಲಿ ಕೊಲ್ಲಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಕೋಮಾದಲ್ಲಿದ್ದ ವ್ಯಕ್ತಿ ಸಾವು
ಮೈಸೂರು: ಮೈಸೂರಿನಲ್ಲಿ ಅಪಘಾತದಿಂದ ಚೇತರಿಸಿಕೊಳ್ಳದೆ ಕೋಮಾದಲ್ಲಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತನನ್ನು ಜಯಪುರ ಹೋಬಳಿಯ ದೂರ ಗ್ರಾಮದ ನಿವಾಸಿ ಗುರುಮಲ್ಲಪ್ಪ(56) ಎನ್ನಲಾಗಿದೆ. ಕಳೆದ ಅಕ್ಟೋಬರ್ ನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಗುರುಮಲ್ಲಪ್ಪ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.
ಆದರೆ ಚಿಕಿತ್ಸೆಯಿಂದ ಚೇತರಿಸಿಕೊಳ್ಳದೆ ಕೋಮಾ ಸ್ಥಿತಿಯಲ್ಲಿದ್ದ ಗುರುಮಲ್ಲಪ್ಪ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಕಳುಹಿಸಲಾಗಿತ್ತು. ಗುರುವಾರ ಮಧ್ಯರಾತ್ರಿ ಗುರುಮಲ್ಲಪ್ಪ ಮೃತರಾಗಿದ್ದಾರೆ.