ಮೈಸೂರಿನ ಬೆಟ್ಟದಪುರ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು
ಮೈಸೂರು, ಮಾರ್ಚ್ 30; ಕೊರೊನಾ ಎರಡನೇ ಅಲೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಎಸ್. ಎಂ. ಎಸ್. ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ವಿದ್ಯಾರ್ಥಿಗಳು, ಪೋಷಕರಲ್ಲಿ ಆತಂಕ ತಂದಿದೆ.
ಕಾಲೇಜಿನ ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಸದ್ಯ ಎರಡು ದಿನಗಳ ಕಾಲ ಕಾಲೇಜಿಗೆ ರಜೆ ನೀಡಿ, ಸ್ಯಾನಿಟೈಸ್ ಮಾಡಲಾಗಿದೆ. ಆದರೆ ಸೋಂಕಿತ ವಿದ್ಯಾರ್ಥಿಗಳ ಸಂಪರ್ಕದಲ್ಲಿರುವವರು ಈಗ ಭಯಪಡುವಂತಾಗಿದೆ. ಸದ್ಯ ಸೋಂಕಿತ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಐಸೋಲೇಷನ್ ಮಾಡಲಾಗಿದ್ದು, ಆರೋಗ್ಯ ಇಲಾಖೆ ನಿಗಾವಹಿಸಿ ಚಿಕಿತ್ಸೆ ನೀಡುತ್ತಿದೆ.
ಭಾರತದಲ್ಲಿ ಹೊಸದಾಗಿ 56,211 ಕೋವಿಡ್ 19 ಪ್ರಕರಣಗಳು ಪತ್ತೆ
ಈ ವಿದ್ಯಾರ್ಥಿಗಳಿಗೆ ಸೋಂಕು ಹರಡಲು ಅವರು ಕ್ರೀಡಾಕೂಟಕ್ಕೆಂದು ಮೈಸೂರಿಗೆ ತೆರಳಿದ್ದೇ ಕಾರಣ ಎಂದು ಹೇಳಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಶರತ್ ಬಾಬು ಹಾಗೂ ಸಿಬ್ಬಂದಿ ವರ್ಗ ಕಾಲೇಜಿಗೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಅಲ್ಲದೆ ಸುಮಾರು 215 ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆ ಮಾಡಲಾಗಿದೆ.
ಕೋವಿಡ್ 2ನೇ ಅಲೆ; ರಾಮನಗರ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ
ಈ ಕುರಿತಂತೆ ಮಾಹಿತಿ ನೀಡಿರುವ ಬೆಟ್ಟದಪುರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಚನ್ ರಾಜ್, "ಈಗಾಗಲೇ ಸೋಂಕಿತ ವಿದ್ಯಾರ್ಥಿಗಳಿಗೆ ಅವರ ಮನೆಯಲ್ಲಿಯೇ ಐಸೊಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಸೋಂಕಿತರ ಪ್ರಾಥಮಿಕ ಸಂಪರ್ಕದಲಿದ್ದವರನ್ನು ಕೂಡ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ" ಎಂದು ಹೇಳಿದ್ದಾರೆ.
ಯಲ್ಲಾಪುರದ ಖಾಸಗಿ ಶಾಲೆಯ 21 ವಿದ್ಯಾರ್ಥಿಗಳು, 2 ಶಿಕ್ಷಕರಿಗೆ ಕೊರೊನಾ ಸೋಂಕು
ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸೋಂಕು ಹರಡಿರುವ ವಿಷಯ ತಿಳಿಯುತ್ತಿದ್ದಂತೆಯೇ ಇತರೆ ವಿದ್ಯಾರ್ಥಿಗಳು ಮತ್ತು ಪೋಷಕರು ಭಯಪಡುತ್ತಿದ್ದಾರೆ. ಬಹಳಷ್ಟು ಶಾಲಾ ಕಾಲೇಜುಗಳಲ್ಲಿ ಮೊದಲಿದ್ದ ಕಟ್ಟುನಿಟ್ಟಿನ ಕ್ರಮಗಳು ಸಡಿಲಗೊಂಡಿದ್ದು, ಶಾಲಾ ಕಾಲೇಜುಗಳಲ್ಲಿ ಕೋವಿಡ್ ನಿಯಮ ಜಾರಿಯಾಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದೆ.
Recommended Video
ಪೋಷಕರು ಈ ನಿಟ್ಟಿನಲ್ಲಿ ಜಾಗ್ರತೆ ವಹಿಸಿ ತಮ್ಮ ಮಕ್ಕಳಿಗೆ ಅಗತ್ಯ ತಿಳುವಳಿಕೆ ನೀಡಬೇಕಿದೆ. ಶಾಲಾ ಕಾಲೇಜುಗಳ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸದೆ ವಿದ್ಯಾರ್ಥಿಗಳ ಆರೋಗ್ಯದತ್ತ ಗಮನಹರಿಸುವುದು ಅಗತ್ಯವಾಗಿದೆ.