ಗಜಪಯಣಕ್ಕೆ ಚಾಲನೆ; ಕಾಡಿನಿಂದ ನಾಡಿಗೆ ಹೊರಟ ದಸರಾ ಆನೆಗಳು
ಮೈಸೂರು, ಆಗಸ್ಟ್, 07: ನಾಡಹಬ್ಬ ಮೈಸೂರು ದಸರಾ 2022ಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಚಾಲನೆ ನೀಡಿದರು.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆಯ ವೀರನಹೊಸಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಕನ್ಯಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವುದರ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಯಿತು.
ಅಭಿಮನ್ಯು, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಚೈತ್ರಾ, ಗೋಪಾಲಸ್ವಾಮಿ, ಕಾವೇರಿ, ಲಕ್ಷ್ಮೀ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಫಲತಾಂಬೂಲ ನೀಡಲಾಯಿತು. ಕಲಾ ತಂಡಗಳು, ಮಂಗಳವಾದ್ಯಗಳ ಜೊತೆಗೆ ವರುಣನ ಸಿಂಚನದ ನಡುವೆ ಗಜಪಡೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಿದವು.
ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಸರಳ ಮತ್ತು ಸಾಂಪ್ರದಾಯಿಕವಾಗಿ ದಸರಾ ಆಯೋಜಿಸಲಾಗಿತ್ತು. ಈ ಬಾರಿ ಅದ್ಧೂರಿಯಾಗಿ ಗಜಪಯಣಕ್ಕೆ ಚಾಲನೆ ನೀಡಲಾಯಿತು. ಸುತ್ತ-ಮುತ್ತಲಿನ ಗ್ರಾಮಗಳ ಮತ್ತು ಹಾಡಿಗಳ ನೂರಾರು ಮಹಿಳೆ ಗಜಪಡೆಗೆ ಪೂರ್ಣಕುಂಭ ಸ್ವಾಗತ ಕೋರಿದರು.

ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವ ಎಸ್. ಟಿ. ಸೋಮಶೇಖರ್, "ಗಜಪಯಣಕ್ಕೆ ವಿಜೃಂಭಣೆಯಿಂದ ಚಾಲನೆ ನೀಡಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ನೇತೃತ್ವದಲ್ಲಿ ಆನೆಗಳನ್ನು ಮೈಸೂರಿಗೆ ಕರೆತರಲಾಗುವುದು. ದಸರಾ ಯಶಸ್ವಿಯಾಗಲಿ" ಎಂದು ಶುಭ ಹಾರೈಸಿದರು.
ಆಗಸ್ಟ್ 10ರಂದು ಅರಮನೆಗೆ ಗಜಪಡೆಗಳ ಆಗಮನವಾಗಲಿದ್ದು, ಅಂದು ಬೆಳಗ್ಗೆ 9.20ರಿಂದ 10ರವರೆಗೆ ಕನ್ಯಾ ಲಗ್ನದಲ್ಲಿ ಗಜಪಡೆಗಳನ್ನು ಬರಮಾಡಿಕೊಳ್ಳಲಾಗುತ್ತದೆ.

ಗಜಪಯಣಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಶಾಸಕರಾದ ಮಂಜುನಾಥ್, ವಿಧಾನಪರಿಷತ್ ಸದಸ್ಯರಾದ ವಿಶ್ವನಾಥ್, ಮಂಜೇಗೌಡ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಲ್ಲಾ ಪಂಚಾಯತಿ ಸಿಇಒ ಪೂರ್ಣಿಮಾ, ಎಸ್. ಪಿ. ಚೇತನ್ ಸೇರಿದಂತೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications