ಕೊರೊನಾ ಸೋಂಕಿನಿಂದ ವೈದ್ಯ ಸಾವು; ಮೈಸೂರಿನಲ್ಲಿ ಸದ್ಯದ ಪ್ರಕರಣಗಳೆಷ್ಟು?
ಮೈಸೂರು, ಸೆಪ್ಟೆಂಬರ್ 23: ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮತ್ತೊಬ್ಬ ವೈದ್ಯರು ಮೃತಪಟ್ಟಿದ್ದಾರೆ. ಡಾ. ವೆಂಕಟೇಶ್ (66) ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ವೈದ್ಯ.
ವೆಂಕಟೇಶ್ ಅವರು ನಂಜನಗೂಡಿನ ಪ್ರಗತಿ ಲೇಔಟ್ ನಲ್ಲಿ ವಾಸವಾಗಿದ್ದರು. ನಂಜನಗೂಡಿನ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದ ವೆಂಕಟೇಶ್ ಅವರು ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದರು.
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ವೆಂಕಟೇಶ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವೆಂಕಟೇಶ್ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದರು.

ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ನಿನ್ನೆ ಒಂದೇ ದಿನ 6,974 ಹೊಸ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5 ಲಕ್ಷ 33 ಸಾವಿರದ ಗಡಿ ದಾಟಿದೆ. ಮೈಸೂರು ಜಿಲ್ಲೆಯಲ್ಲಿಯೂ ನಿನ್ನೆ 443 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಕೊರೊನಾ ಪ್ರಕರಣಗಳ ಸಂಖ್ಯೆ 30,751ಕ್ಕೇರಿದೆ. ಕೊರೊನಾ ಸೋಂಕಿನಿಂದ ಗುಣಮುಖರಾದ 936 ಮಂದಿ ಡಿಸ್ಚಾಜ್೯ ಆಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ 26,051 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ನಿನ್ನೆ 9 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 715 ಮಂದಿ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.












Click it and Unblock the Notifications