ಪ್ರವಾಹದಲ್ಲಿ ಮನೆ ಕಳೆದುಕೊಂಡಿದ್ದಕ್ಕೆ ಬೇಸರಗೊಂಡು ಆತ್ಯಹತ್ಯೆಗೆ ಶರಣಾದ ವ್ಯಕ್ತಿ
ಮಡಿಕೇರಿ, ಆಗಸ್ಟ್ 26: ಪ್ರವಾಹದಲ್ಲಿ ಮನೆ ಕಳೆದುಕೊಂಡು ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಬಳಿ ನಡೆದಿದೆ.
ಕೊಪ್ಪದ ಎಸ್ಎಲ್ಎನ್ ಲೇಔಟ್ ನಿವಾಸಿ ಎನ್.ಕೆ.ಕಾರ್ಯಪ್ಪ (57) ಆತ್ಮಹತ್ಯೆ ಮಾಡಿಕೊಂಡವರು. ಇವರು ಈ ಹಿಂದೆ ಪಿರಿಯಾಪಟ್ಟಣ ತಾಲೂಕು ಕೊಪ್ಪ ಗ್ರಾಮದಲ್ಲಿ ವಾಸವಾಗಿದ್ದು, ಎಸ್ಎಲ್ಎನ್ ಲೇಔಟ್ ನಲ್ಲಿ ಸೈಟ್ ಕೊಂಡುಕೊಂಡು ಲಕ್ಷಾಂತರ ರೂಪಾಯಿ ಖರ್ಚುಮಾಡಿ ಮನೆ ನಿರ್ಮಿಸಿದ್ದರು.

ಇತ್ತೀಚೆಗೆ ಅತಿವೃಷ್ಟಿಯಿಂದ ಕಾವೇರಿ ನದಿಯಲ್ಲಿ ಪ್ರವಾಹ ಉಂಟಾಗಿ ರಾತ್ರೋರಾತ್ರಿ ಇವರ ಮನೆ ಸಂಪೂರ್ಣ ಜಲಾವೃತಗೊಂಡಿತ್ತು. ಇವರ ಕುಟುಂಬ ಅಪಾಯದಿಂದ ಪಾರಾಗಿ ಕೊಪ್ಪ ಗ್ರಾಮದ ಕಾಳಜಿ ಕೇಂದ್ರಕ್ಕೆ ಬಂದು ಆಶ್ರಯ ಪಡೆದಿತ್ತು. ಆದರೆ ಪ್ರವಾಹದಲ್ಲಿ ಮನೆ ಕಳೆದುಕೊಂಡು ಆಘಾತಗೊಂಡಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಾರ್ಯಪ್ಪ ಅವರ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.
ಕುಶಾಲನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಯಿತು. ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications