ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸಲು ಮುಂದಾದ ಸಣ್ಣ ಕೈಗಾರಿಕಾ ಇಲಾಖೆ
ಮೈಸೂರು, ಫೆಬ್ರವರಿ 11: ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸಲು ಸಣ್ಣ ಕೈಗಾರಿಕಾ ಇಲಾಖೆ ಮುಂದಾದಗಿದ್ದು, ಕೊರೊನಾ ಲಾಕ್ ಡೌನ್ ನಂತರ ಸಣ್ಣ ಕೈಗಾರಿಕೆ ಕ್ಷೇತ್ರ ಚೇತರಿಕೆ ಕಂಡು ಬರುತ್ತಿದೆ ಎಂದು ಸಚಿವ ಸಿ.ಸಿ ಪಾಟೀಲ್ ಹೇಳಿದರು.
ಮೈಸೂರಿನಲ್ಲಿ ಮಾತನಾಡಿದ ಸಣ್ಣ ಕೈಗಾರಿಕಾ ಸಚಿವ ಸಿ.ಸಿ ಪಾಟೀಲ್, ಕೇಂದ್ರದ ಆತ್ಮ ನಿರ್ಭರ್ ಭಾರತ ಯೋಜನೆ ಮುಖಾಂತರ ಯುವ ಉದ್ಯಮಿಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಸಣ್ಣ ಕೈಗಾರಿಕೆಗಳನ್ನು ಮತ್ತಷ್ಟು ಬಲಗೊಳಿಸಲು ಮುಂದಾಗಿದ್ದೇವೆ ಎಂದರು.
ವಿದ್ಯಾವಂತ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಂಡು ಮತ್ತಷ್ಟು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿಕೊಡುವ ಉದ್ಯೋಗಶೀಲ ತರಬೇತಿಗಳನ್ನು ನೀಡಲಾಗುವುದು. ದಕ್ಷಿಣ ಏಷ್ಯಾದಲ್ಲಿ ಅತಿ ಹೆಚ್ಚು ಕೈಗಾರಿಕಾ ಉದ್ಯೋಗಿಗಳು ಇರುವ ಬೆಂಗಳೂರಿನ ಪೀಣ್ಯ ಕೈಗಾರಿಕೋದ್ಯಮದಲ್ಲಿ ಅತಿ ಹೆಚ್ಚು ಕೈಗಾರಿಕಾ ನೌಕರರಿದ್ದಾರೆ. ಅವರೆಲ್ಲರ ಹಿತ ಕಾಪಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿ ಕೊಡುವುದು ನಮ್ಮ ಮೂಲ ಉದ್ದೇಶವಾಗಿದ್ದು, ಕೇಂದ್ರದ ಆತ್ಮ ನಿರ್ಭರ್ ಯೋಜನೆ ಮುಖಾಂತರ ಆರ್ಥಿಕ ನೆರವು ಪಡೆದು ಸಣ್ಣ ಕೈಗಾರಿಕೆಗಳನ್ನು ಪುನಶ್ಚೇತನಗೊಳಿಸಲಾಗುವುದು. ದೇಶಾದ್ಯಂತ ಪೆಟ್ರೋಲ್ ಬೆಲೆ ಏರಿಕೆ ಹಿನ್ನೆಲೆ ಸಣ್ಣ ಕೈಗಾರಿಕೆಗಳ ಮೇಲಿನ ಆರ್ಥಿಕ ಹೊಡೆತ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸದ್ಯ ಈ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕಿದೆ ಎಂದರು.
ಹಂತ ಹಂತವಾಗಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರತಿದಿನ ಸಭೆಗಳನ್ನು ನಡೆಸುತ್ತಿದ್ದೇನೆ, ಸಮಸ್ಯೆಗಳನ್ನು ಬೇಗ ಅರ್ಥ ಮಾಡಿಕೊಳ್ಳುತ್ತೆನೆ. ನನಗೆ ಇಲಾಖೆಯನ್ನು ಅರ್ಥ ಮಾಡಿಕೊಳ್ಳಲು ಇನ್ನೂ 15 ದಿನಗಳ ಕಾಲಾವಕಾಶ ಬೇಕು. ಇಲಾಖೆಯನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡು ಯಾವ ರೀತಿ ಚೈತನ್ಯ ನೀಡಬೇಕು ಎಂಬುದನ್ನು ರಾಜ್ಯ ಬಜೆಟ್ ಮುನ್ನ ಈ ಪ್ರಯತ್ನ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ರಾಜ್ಯ ಕಾರ್ಯನಿರತ ಪತ್ರಕರ್ತರ ಜೀವ ವಿಮಾ ಯೋಜನೆ ವಿಚಾರದ ಬಗ್ಗೆ ಮಾತನಾಡಿದ ಅವರು, ರಾಜ್ಯದ ಕಾರ್ಯನಿರತ ಪತ್ರಕರ್ತರಿಗೆ ಈಗಾಗಲೇ ನಗರ ಪ್ರದೇಶದಲ್ಲಿ ನೋಂದಣಿಗೊಂಡ ಪತ್ರಕರ್ತರಿಗೆ ಜೀವ ವಿಮಾ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕು ಪತ್ರಕರ್ತರಿಗೆ ಅನುಷ್ಠಾನಗೊಳಿಸಲು ಇಲಾಖೆ ಮುಂದಾಗಿದೆ ಎಂದು ಹೇಳಿದರು. ಇದಕ್ಕೂ ಮುನ್ನ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ ಸಚಿವರು, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.












Click it and Unblock the Notifications