ನಟ ರಮೇಶ್ ಅರವಿಂದ ನಿರೂಪಣೆಯಲ್ಲಿ "ದಸರಾ ಕ್ವಿಜ್"
ಮೈಸೂರು, ಸೆಪ್ಟೆಂಬರ್ 26: ಈ ಬಾರಿಯ ಮೈಸೂರು ದಸರಾದಲ್ಲಿ ದಸರಾ ಕ್ವಿಜ್ ಕಾರ್ಯಕ್ರಮ ವಿಶೇಷ ಆಕರ್ಷಣೆ ಆಗಲಿದೆ. ಕಾರಣವೇನು ಗೊತ್ತೇ? ಇದೇ ಮೊದಲ ಬಾರಿಗೆ ಚಿತ್ರ ನಟ ರಮೇಶ್ ಅರವಿಂದ್ ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
ಮೈಸೂರು ದಸರಾ ಮಹೋತ್ಸವ ಹಾಗೂ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಇದೇ ಮೊದಲ ಬಾರಿಗೆ ಸೆ.27ರಂದು ದಸರಾ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿದ್ದು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ದಸರಾ ಕುಸ್ತಿ, ದಸರಾ ಕ್ರೀಡೆಗಳ ಮಾದರಿಯಲ್ಲಿ ದಸರಾ ಕ್ವಿಜ್ ಅನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನೂತನ ಸಭಾ ಭವನದಲ್ಲಿ ಆಯೋಜಿಸಲಾಗಿದೆ.

ಮೈಸೂರು ದಸರಾ, ವಿಶ್ವ ಪ್ರವಾಸೋದ್ಯಮ ದಿನಾಚರಣೆ ಮತ್ತು ಕರ್ನಾಟಕ ರಾಜ್ಯದ ಭವ್ಯ ಪರಂಪರೆ, ಸಂಸ್ಕೃತಿ ಮತ್ತು ಇತಿಹಾಸಕ್ಕೆ ಸಂಬಂಧಿಸಿದಂತೆ ಪ್ರಶ್ನಾವಳಿ ಸಿದ್ಧಪಡಿಸಲಾಗಿದೆ. ಅಂದಾಜು 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ಬೆಳಗ್ಗೆ 9.45 ರಿಂದ ಮಧ್ಯಾಹ್ನ 3ರವರೆಗೆ ಕಾರ್ಯಕ್ರಮ ನಡೆಯಲಿದೆ. 8,9,10ನೇ ತರಗತಿ ಹಾಗೂ ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡು ಭಾಗವಹಿಸಬಹುದು. ನೋಂದಣಿ ಅರ್ಜಿಗಳನ್ನು ಹಾಗೂ ಹೆಚ್ಚಿನ ಮಾಹಿತಿಯನ್ನು ಸಂಬಂಧಪಟ್ಟ ಇಲಾಖೆಯಲ್ಲಿ ಪಡೆದುಕೊಳ್ಳಬಹುದು ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆಸಕ್ತ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಪ್ರೇಕ್ಷಕರಾಗಿ ದಸರಾ ಕ್ವಿಜ್ನಲ್ಲಿ ಭಾಗವಹಿಸಬಹುದು.
ವಿದ್ಯಾರ್ಥಿಗಳಿಗೆ ಅನುಕೂಲ: ಈಗ ವಿದ್ಯಾರ್ಥಿಗಳಿಗೆ ಅರ್ಧ ವಾರ್ಷಿಕ ಪರೀಕ್ಷೆ ನಡೆಯುತ್ತಿರುವುದರಿಂದ ಕ್ವಿಜ್ ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ಶಿಕ್ಷಣ ಇಲಾಖೆಯೂ ಮುಂದಾಗಿದೆ. ಜಿಲ್ಲಾ ಶಿಕ್ಷಣಾಧಿಕಾರಿ ಪಾಂಡುರಂಗ ಅವರು,''ವಿದ್ಯಾರ್ಥಿಗಳಿಗೆ ದಸರಾ ಕ್ವಿಜ್ನಲ್ಲಿ ಭಾಗವಹಿಸಲು ಅವಕಾಶವಿದೆ. ಸದ್ಯ ನಡೆಯುತ್ತಿರುವುದು ಅರ್ಧ ವಾರ್ಷಿಕ ಪರೀಕ್ಷೆಯಾಗಿರುವುದರಿಂದ ಕ್ವಿಜ್ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ಮಾಡಿಕೊಡಲಾಗುವುದು' 'ಎಂದು ತಿಳಿಸಿದ್ದಾರೆ.












Click it and Unblock the Notifications