ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರಕ್ಕೆ ಜಿಲ್ಲಾಡಳಿದಿಂದ ವಿಶೇಷ ಸಿದ್ಧತೆ
ಮೈಸೂರು, ಜೂನ್ 19: ನಾಡ ಅಧಿದೇವತೆ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2019ನೇ ಸಾಲಿನ ಜುಲೈನಲ್ಲಿ ನಡೆಯುವ ಆಷಾಢ ಶುಕ್ರವಾರಗಳು ಹಾಗೂ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ಅನನುಕೂಲ ಉಂಟಾಗದಂತೆ ಕ್ರಮ ವಹಿಸಲು ಅಪರ ಜಿಲ್ಲಾಧಿಕಾರಿ ಬಿ.ಆರ್. ಪೂರ್ಣಿಮಾ ಅವರು ಸೂಚನೆ ನೀಡಿದರು.
ಈ ವರ್ಷ ಜುಲೈ 5ರಂದು ಮೊದಲನೇ ಆಷಾಢ ಶುಕ್ರವಾರ, ಜುಲೈ 12ರಂದು ಎರಡನೇ ಆಷಾಢ ಶುಕ್ರವಾರ, ಜುಲೈ 19ರಂದು ಮೂರನೇ ಆಷಾಢ ಶುಕ್ರವಾರ, ಜುಲೈ 26 ಕೊನೆಯ ಆಷಾಢ ಶುಕ್ರವಾರಗಳಂದು ಹಾಗೂ ಜುಲೈ 24ರಂದು ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವ ವರ್ಧಂತಿ ಕಾರ್ಯಕ್ರಮಕ್ಕೆ ದೇವಸ್ಥಾನಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದ್ದು, ಸೂಕ್ತ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ತಿಳಿಸಿದರು.
ಎರಡನೇ ಆಷಾಢ ಶುಕ್ರವಾರ: ಚಾಮುಂಡಿಬೆಟ್ಟಕ್ಕೆ ಹರಿದುಬಂದ ಭಕ್ತ ಸಾಗರ
ಚಾಮುಂಡಿ ಬೆಟ್ಟಕ್ಕೆ ಬರುವ ಎಲ್ಲ ಖಾಸಗಿ ವಾಹನಗಳನ್ನು ಹೆಲಿಪ್ಯಾಡ್ ಬಳಿ ನಿಲ್ಲಿಸಿ, ಅಲ್ಲಿಂದ ಬೆಟ್ಟಕ್ಕೆ ಉಚಿತವಾಗಿ ಕೆಎಸ್.ಆರ್.ಟಿಸಿ ಬಸ್ ಗಳ ಮೂಲಕ ಬರುವ ವ್ಯವಸ್ಥೆ ಮಾಡುವುದು, ಬಿಸಿಲು ಹಾಗೂ ಮಳೆಯಿಂದ ರಕ್ಷಣೆ ಪಡೆಯಲು ಎರಡು ವಾಟರ್ ಪ್ರೂಫ್ ತಾತ್ಕಾಲಿಕ ಪೆಂಡಾಲ್ ಹಾಕುವುದು, ಭಕ್ತರ ಅನುಕೂಲಕ್ಕಾಗಿ ಹೆಲಿಪ್ಯಾಡ್ ಬಳಿ ತಾತ್ಕಾಲಿಕ ಶೌಚಾಲಯ ನಿರ್ಮಿಸುವುದು, ದ್ವಿಚಕ್ರ ಹಾಗೂ ನಾಲ್ಕು ಚಕ್ರಗಳ ಖಾಸಗಿ ವಾಹನಗಳ ನಿಲುಗಡೆಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡುವುದು ಸೇರಿದಂತೆ ಹಲವು ಸಿದ್ಧತೆಗಳ ಕುರಿತು ಚರ್ಚಿಸಿದರು.
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬರುವುದರಿಂದ ಸರಗಳ್ಳತನ, ಜೇಬು ಕಳ್ಳತನ ಇತ್ಯಾದಿ ಅಹಿತಕರ ಘಟನೆಗಳನ್ನು ತಡೆಯಲು ಪ್ರಮುಖ ಸ್ಥಳಗಳಲ್ಲಿ ಸಿ.ಸಿ. ಕ್ಯಾಮರಾಗಳನ್ನು ಹಾಗೂ ವಿದ್ಯುದ್ದೀಪಗಳ ವ್ಯವಸ್ಥೆಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಾಡಬೇಕೆಂದು ತಿಳಿಸಿದರು. ವೈದ್ಯಕೀಯ ಚಿಕಿತ್ಸೆಗಾಗಿ ಅಗತ್ಯ ಔಷಧಗಳೊಂದಿಗೆ ಸಾಕಷ್ಟು ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ನಿಯೋಜಿಸುವುದರೊಂದಿಗೆ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಬೇಕೆಂದು ಆರೋಗ್ಯ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ಮೈಸೂರು: ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಚಾಲೆಂಜಿಂಗ್ ಸ್ಟಾರ್
ಚಾಮುಂಡೇಶ್ವರಿ ಬೆಟ್ಟದಲ್ಲಿ ದಾಸೋಹ ಭವನದಲ್ಲಿ ನಡೆಯುವ ಪ್ರಸಾದ ವಿತರಣಾ ಕಾರ್ಯಕ್ರಮದ ಜೊತೆಗೆ ಅಲ್ಲಲ್ಲಿ ಪ್ರಸಾದ ವಿತರಣೆ ಮಾಡುವುದರಿಂದ ಆಹಾರದ ಸುರಕ್ಷತೆಗೆ ಗಮನ ನೀಡಬೇಕು. ಆಹಾರ ಸುರಕ್ಷತಾ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅವರು ತಿಳಿಸಿದರು.