ಮೈಸೂರು ಅತ್ಯಾಚಾರ ಪ್ರಕರಣದ ತನಿಖೆಗೆ ಎಡಿಜಿಪಿ ಪ್ರತಾಪ್ ರೆಡ್ಡಿ ನೇಮಕ
ಮೈಸೂರು, ಆಗಸ್ಟ್ 26: "ಮೈಸೂರು ಅತ್ಯಾಚಾರ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣ ಪತ್ತೆಗೆ ಎಡಿಜಿಪಿ ಪ್ರತಾಪ್ ರೆಡ್ಡಿ ನೇತೃತ್ವದ ತಂಡ ರಚಿಸಲಾಗಿದೆ," ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
"ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಎಡಿಜಿಪಿ ಪ್ರತಾಪ್ ರೆಡ್ಡಿಯನ್ನು ಅತ್ಯಾಚಾರ ತನಿಖೆ ನಡೆಸಲು ನೇಮಿಸಿದ್ದಾರೆ. ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಮತ್ತು ಪೊಲೀಸ್ ಇಲಾಖೆಯ ವೈಫಲ್ಯ ಕಾರಣವೇ ಎಂದು ಪರಾಮರ್ಶಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ," ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ನಗರದ ಜನರನ್ನು ಆತಂಕಕ್ಕೆ ದೂಡಿದ್ದು, ಈ ನಡುವೆ ಘಟನೆಗೆ ಪೊಲೀಸ್ ಇಲಾಖೆ ವೈಫಲ್ಯ ಕಾರಣವೆಂಬ ಆರೋಪಗಳು ಕೇಳಿ ಬಂದಿರುವ ಬೆನ್ನಲ್ಲೇ, ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ತಲೆದಂಡವಾಗುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಸುಳಿವು ನೀಡಿದರು.

ಗುರುವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, "ಅತ್ಯಾಚಾರ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕೇಸ್ ಪರಿಶೀಲನೆಗೆ ಎಡಿಜಿಪಿ ಪ್ರತಾಪ್ ರೆಡ್ಡಿಯನ್ನು ಸರ್ಕಾರ ನಿಯೋಜಿಸಿದೆ. ಖುದ್ದು ಗೃಹ ಸಚಿವರೇ ಮೈಸೂರಿಗೆ ಆಗಮಿಸಿ ಪರಿಶೀಲನೆ ನಡೆಸಲಿದ್ದಾರೆ," ಎಂದರು.
"ಮೈಸೂರಿನ ಶೂಟ್ ಔಟ್, ಗ್ಯಾಂಗ್ರೇಪ್ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಎಡಿಜಿಪಿ ವರದಿ ನಂತರ ಪೊಲೀಸರ ನಿರ್ಲಕ್ಷ್ಯ ಕಂಡುಬಂದರೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ," ಎಂದು ಹೇಳಿದರು.

"ಸಾರ್ವಜನಿಕರ ಭಾವನೆಗೆ ಸರ್ಕಾರ ಸ್ಪಂದಿಸಬೇಕಾಗುತ್ತದೆ. ನಗರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಅನಿವಾರ್ಯವಾಗಿದೆ," ಎನ್ನುವ ಮೂಲಕ ಕಮಿಷನರ್ ಹಾಗೂ ಡಿಸಿಪಿಗಳ ವರ್ಗಾವಣೆ ಬಗ್ಗೆ ಸುಳಿವು ಬಿಟ್ಟುಕೊಟ್ಟರು.












Click it and Unblock the Notifications