ಮೈಸೂರು ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯಾ ತಂಡ ಭೇಟಿ
ಮೈಸೂರು, ಆಗಸ್ಟ್ 6 : ಬೆಂಗಳೂರು-ಮೈಸೂರು ನಡುವೆ ವಿಮಾನ ಸಂಚಾರ ಶೀಘ್ರದಲ್ಲೇ ಆರಂಭವಾಗುವ ಸಾಧ್ಯತೆ ಇದೆ. ಏರ್ ಇಂಡಿಯಾ ಅಧಿಕಾರಿಗಳ ತಂಡ ಮೈಸೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿಮಾನ ಹಾರಾಟ ಆರಂಭಿಸಲು ಸೂಕ್ತ ಸೌಲಭ್ಯಗಳಿವೆ ಎಂದು ಅಭಿಪ್ರಾಯಪಟ್ಟಿದೆ.
ಪ್ರವಾಸೋದ್ಯಮ ಸಚಿವರಾಗಿದ್ದ ಆರ್.ವಿ.ದೇಶಪಾಂಡೆ ಅವರು ಏರ್ ಇಂಡಿಯಾ ಬೆಂಗಳೂರು-ಮೈಸೂರು ನಡುವೆ ವಿಮಾನಯಾನ ಸೇವೆ ಆರಂಭಿಸಲಿದ್ದು, ಈ ಕುರಿತು ಒಂದು ಸುತ್ತಿನ ಮಾತುಕತೆ ನಡೆದಿದೆ ಎಂದು ಹೇಳಿದ್ದರು. ಬುಧವಾರ ಮಂಡಕಳ್ಳಿಯಲ್ಲಿರುವ ವಿಮಾನ ನಿಲ್ದಾಣಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದರು. [ಮೈಸೂರು-ಬೆಂಗಳೂರು ನಡುವೆ ಏರ್ ಇಂಡಿಯಾ ಹಾರಾಟ]

ಬೆಂಗಳೂರು-ಮೈಸೂರು ನಡುವೆ ಎಟಿಆರ್ 72 ಮಾದರಿಯ ವಿಮಾನದ ಹಾರಾಟ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ನಿಲ್ದಾಣದ ಸೌಲಭ್ಯಗಳ ಕುರಿತು ತೃಪ್ತಿ ವ್ಯಕ್ತಪಡಿಸಿರುವ ಅಧಿಕಾರಿಗಳು ವಿಮಾನ ಹಾರಾಟಕ್ಕೆ ಅನುಮತಿ ನೀಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಹೇಳಿದ್ದಾರೆ. [ಮಂಡಕಳ್ಳಿ ವಿಮಾನ ನಿಲ್ದಾಣದ ಬಗ್ಗೆ ಓದಿ]
ಮೈಸೂರು ವಿಮಾನ ನಿಲ್ದಾಣದ ನಿರ್ದೇಶಕ ಮನೋಜ್ ಕುಮಾರ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, ಅಗತ್ಯವಾದ ಎಲ್ಲಾ ಸೌಲಭ್ಯಗಳನ್ನು ನೀಡಲು ನಾವು ಸಿದ್ಧರಾಗಿದ್ದೇವೆ. ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ವಿಮಾನ ಹಾರಾಟ ಆರಂಭವಾಗುವ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಹೇಳಿದ್ದಾರೆ.
ಏರ್ ಪೆಗಾಸಸ್ ಹಾರಾಟ : ಈಗಾಗಲೇ ಹುಬ್ಬಳ್ಳಿಗೆ ವಿಮಾನ ಸಂಪರ್ಕ ಕಲ್ಪಿಸಿರುವ ಏರ್ ಪೆಗಾಸಸ್ ಮೈಸೂರಿನಿಂದ ಕೇರಳ ಸೇರಿದಂತೆ ಇತರ ರಾಜ್ಯಗಳಿಗೆ ವಿಮಾನ ಸಂಪರ್ಕ ಕಲ್ಪಿಸಲು ಮುಂದಾಗಿದೆ. ಈ ಕುರಿತು ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ಈಗಾಗಲೇ ಮನವಿ ಸಲ್ಲಿಸಿದೆ.
2014ರಲ್ಲಿ ಸ್ಥಗಿತಗೊಂಡಿತ್ತು : ಬೆಂಗಳೂರು-ಮೈಸೂರು ನಡುವಿನ ವಿಮಾನ ಸಂಚಾರ 2014 ಸೆಪ್ಟೆಂಬರ್ನಲ್ಲಿ ಸ್ಥಗಿತಗೊಂಡಿತ್ತು. ಸ್ಪೈಸ್ ಜೆಟ್ ಸೆ.5ರಿಂದ ಸೇವೆಯನ್ನು ಸ್ಥಗಿತಗೊಳಿಸಿತ್ತು. ಇದಕ್ಕೂ ಮೊದಲು ಕಿಂಗ್ ಫಿಷರ್ ವಿಮಾನ ಹಾರಾಟ ಪ್ರಾರಂಭಿಸಿತ್ತು. ಸಂಸ್ಥೆ ನಷ್ಟ ಅನುಭವಿಸಿದ ನಂತರ ಹಾರಾಟ ನಿಲ್ಲಿಸಲಾಗಿತ್ತು.












Click it and Unblock the Notifications