Amit Shah: ಸುತ್ತೂರಿಗೆ ಗೃಹ ಸಚಿವ ಮಿತ್ ಶಾ ಭೇಟಿ: ಬಿಗಿ ಪೊಲೀಸ್ ಭದ್ರತೆ
ಮೈಸೂರು: ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸುತ್ತಿದ್ದಾರೆ.
ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನದ ಹಿನ್ನಲೆಯಲ್ಲಿ ಮೈಸೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಕೈಗೊಳ್ಳಲಾಗಿದೆ. ಸಚಿವರು ಮೈಸೂರು ನಗರದಲ್ಲಿ ವಾಸ್ತವ್ಯ ಹೂಡುವ ಹೋಟೆಲ್, ಸಂಚರಿಸುವ ಮಾರ್ಗ ಸೇರಿದಂತೆ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಭದ್ರತೆ ಕೈಗೊಳ್ಳಲಾಗಿದೆ.

ಶನಿವಾರ ರಾತ್ರಿಯೇ ಗೃಹ ಸಚಿವ ಅಮಿತ್ ಶಾ ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಎಂಜಿ ರಸ್ತೆಯಲ್ಲಿನ ರ್ಯಾಡಿಶನ್ ಬ್ಲೂ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಚಾಮುಂಡಿ ಬೆಟ್ಟಕ್ಕೆ ಭೇಟಿ
ಫೆ. 11ರಂದು ಬೆಳಗ್ಗೆ 11 ಗಂಟೆಗೆ ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲಿದ್ದಾರೆ. ಹಾಗಾಗಿ ಬೆಳಗ್ಗೆ 10 ಗಂಟೆಯಿಂದ 11. 30 ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಕೇಂದ್ರ ಸಚಿವರ ನಿರ್ಗಮನದ ಬಳಿಕ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಮಾಹಿತಿ ನೀಡಿದ್ದಾರೆ.
ಬಿಜೆಪಿ ನಾಯಕರ ಜೊತೆ ಸಭೆ
ಸುತ್ತೂರು ಜಾತ್ರಾ ಮಹೋತ್ಸವದ ಬಳಿಕ ಮತ್ತೇ ಮೈಸೂರು ನಗರಕ್ಕೆ ಆಗಮಿಸಲಿರುವ ಗೃಹ ಸಚಿವರು, ಬಿಜೆಪಿ ಪ್ರಮುಖ ನಾಯಕರ ಸಭೆ ನಡೆಸಲಿದ್ದು, ಹೋಟೆಲ್ ಆವರಣ ಸೇರಿದಂತೆ ಸುತ್ತ ಮುತ್ತ ಶ್ವಾನ ದಳದೊಂದಿಗೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈಗಾಗಲೇ ಎಸ್ಪಿಜಿ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ನಗರದಲ್ಲಿ ಮೊಕ್ಕಾಂ ಹೂಡಿದ್ದು, ಭದ್ರತಾ ಲೋಪವಾಗದಂತೆ ಎಚ್ಚರಿಕೆ ವಹಿಸಿದ್ದಾರೆ.
ಬಿಜೆಪಿ ನಗರ ಅಧ್ಯಕ್ಷ ಎಲ್.ನಾಗೇಂದ್ರ ಮಾತನಾಡಿ, "ಮಧ್ಯಾಹ್ನ 12 ಗಂಟೆಗೆ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ, ಮೈಸೂರಿಗೆ ವಾಪಸಾಗುವರು. ಮಧ್ಯಾಹ್ನ 2.35ಕ್ಕೆ ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್ನಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು, ಹಾಸನ, ಮಂಡ್ಯ ಹಾಗೂ ಚಾಮರಾಜನಗರ ಕೋರ್ ಕಮಿಟಿ ಸದಸ್ಯರೊಂದಿಗೆ ಸಭೆ ನಡೆಸಲಿದ್ದಾರೆ," ಎಂದು ಮಾಹಿತಿ ನೀಡಿದರು.
"ಈ ಸಭೆಯಲ್ಲಿ ರಾಜ್ಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಕೋಟಾ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ಸಂಜೆ 4.55ಕ್ಕೆ ಮೈಸೂರಿನಿಂದ ಅಮಿತ್ ಶಾ ತೆರಳಲಿದ್ದಾರೆ," ಎಂದು ತಿಳಿಸಿದರು.












Click it and Unblock the Notifications