ಮೇ 30ಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ಮೈಸೂರು, ಮೇ 27 : ಅಂಗನವಾಡಿ ಕೇಂದ್ರಗಳ ಬದಲು ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಅಂಗನವಾಡಿ ನೌಕರರ ಸಂಘದ ವತಿಯಿಂದ ಮೇ.30ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಸುನಂದಾ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಿರ್ಧಾರದಿಂದ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ 70 ಸಾವಿರ ಅಂಗನವಾಡಿ ಕಾರ್ಯಕರ್ತೆಯರ ಹಿತಾಸಕ್ತಿಗೆ ಧಕ್ಕೆಯಾಗಿದೆ. ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಗಣಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಅಂಗನವಾಡಿಗಳಲ್ಲೇ ಎಲ್.ಕೆ ಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸಬೇಕು. ಇದರಿಂದ ಕಾರ್ಯಕರ್ತರ ಹಿತಾಸಕ್ತಿಯನ್ನು ಕಾಯ್ದುಕೊಂಡಂತಾಗುತ್ತದೆ ಎಂದು ಒತ್ತಾಯಿಸಿದರು.
ಮಂಗಳೂರಲ್ಲೊಂದು ಅಂದವಾದ ಅಂಗನವಾಡಿ, ಇದು ಚಿಣ್ಣರ ಅರಮನೆ
ಅಂಗನವಾಡಿ ಕಾರ್ಯಕರ್ತೆಯರು ಕಳೆದ 44 ವರ್ಷಗಳಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ನೆರವಾಗುತ್ತಿದ್ದಾರೆ. ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಅಂಗನವಾಡಿಗಳಲ್ಲೂ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಖಾಸಗಿ ವಿದ್ಯಾಸಂಸ್ಥೆಗಳಲ್ಲಿ ಸಿಗುವ ಸೌಲಭ್ಯಗಳು ಅಂಗನವಾಡಿಗಳಲ್ಲೂ ಸಿಗುವಂತೆ ಸರ್ಕಾರ ನೋಡಿಕೊಳ್ಳಬೇಕು. ಅಂಗನವಾಡಿಗಳಲ್ಲಿ ಎಲ್.ಕೆಜಿ, ಯು.ಕೆ.ಜಿ ಪ್ರಾರಂಭಿಸಿ, ಅಂಗನವಾಡಿ ನೌಕರರಿಗೆ ಈ ಕೆಲಸವನ್ನು ಅಧಿಕೃತವಾಗಿ ವಹಿಸಬೇಕು. ಅಲ್ಲದೇ ಮಾತೃಪೂರ್ಣ ಯೋಜನೆ ಕೆಲಸಕ್ಕೆ ಹೆಚ್ಚುವರಿ ಸಹಾಯಕಿಯನ್ನು ನೇಮಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಬೆಂಗಳೂರಿನಲ್ಲಿ ಮತ್ತೆ ಧರಣಿ ಕುಳಿತ ಅಂಗನವಾಡಿ ಕಾರ್ಯಕರ್ತೆಯರು
ಮೇ 30ರ ಬೆಳಿಗ್ಗೆ 11.30ರಿಂದ ಬೆಂಗಳೂರಿನ ಕೇಂದ್ರೀಯ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ರಾಲಿ ನಡೆಸಲಿದ್ದು, ರಾಜ್ಯದ ಸುಮಾರು 50 ಸಾವಿರಕ್ಕೂ ಹೆಚ್ಚು ಕಾರ್ಯಕರ್ತೆಯರು ಭಾಗಿಯಾಗಲಿದ್ದಾರೆ. ತಮ್ಮ ಮನವಿಗೆ ಸರ್ಕಾರ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.