MUDA Case: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಒಂದರ ಹಿಂದೊಂದು ಸಂಕಷ್ಟ ಎದುರಾಗುತ್ತಿದೆ. ಸಿದ್ದರಾಮಯ್ಯ ಹಾಗೂ ಅವರ ಪತ್ನಿ ವಿರುದ್ಧ ಲೋಕಾಯುಕ್ತ ಹಾಗೂ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸುತ್ತಿದ್ದು, ಈಗ ಮತ್ತೊಂದು ಕಂಟಕ ಎದುರಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸೇರಿದಂತೆ 12 ಮಂದಿ ವಿರುದ್ಧ ಮೈಸೂರಿನ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ.
ಸಿಎಂ ಪತ್ನಿ ಪಾರ್ವತಿ ಅವರ ಸೋದರ ಮಲ್ಲಿಕಾರ್ಜುನಸ್ವಾಮಿ ಅವರಿಗೆ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ಸೋದರ ಮೈಲಾರಯ್ಯ ಅವರ ಪುತ್ರಿ ಜಮುನಾ ಕಳೆದ ಅಕ್ಟೋಬರ್ 21ರಂದು ಕೋರ್ಟ್ ಮೆಟ್ಟಿಲೇರಿದ್ದು, ಈಗ ಮೊಕದ್ದಮೆಯನ್ನು ದಾಖಲಿಸಿಕೊಂಡಿರುವ ನ್ಯಾಯಾಧೀಶರು, ಜನವರಿ 10ರಂದು ವಿಚಾರಣೆ ನಿಗದಿಪಡಿಸಿದ್ದಾರೆ.

ಏನಿದು ವಿವಾದ?
ವಿವಾದಿತ ಕೆಸರೆಯಲ್ಲಿನ ಸರ್ವೆ ನಂ. 464ರ 3.16 ಎಕರೆ ಜಮೀನು ಪಿತ್ರಾರ್ಜಿತ ಆಸ್ತಿಯಾಗಿದ್ದು, ನಮ್ಮ ದೊಡ್ಡಪ್ಪ ದೇವರಾಜು ಅವರು ನಮ್ಮ ಗಮನಕ್ಕೆ ತಾರದೆ ಮಾರಾಟ ಮಾಡಿದ್ದು, ವಂಚನೆ ಮಾಡಲಾಗಿದೆ ಎಂದು ಆರೋಪಿಸಿ ಸಿಎಂ ಪತ್ನಿ ಪಾರ್ವತಿ, ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ, ಜಮೀನು ಮಾರಾಟ ಮಾಡಿದ್ದ ಜೆ.ದೇವರಾಜು ಸೇರಿದಂತೆ ಜಿಲ್ಲಾಧಿಕಾರಿ ಮತ್ತು ಮುಡಾ ಆಯುಕ್ತರನ್ನು ಎದುರು ಕಕ್ಷಿದಾರರು ಎಂದು ಉಲ್ಲೇಖ ಮಾಡಿ ಕೋರ್ಟ್ನಲ್ಲಿ ಮೊಕದ್ದಮೆ ಹೂಡಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ತಮ್ಮ ಸೋದರ ಖರೀದಿಸಿದ್ದ ಜಮೀನನ್ನು ತವರು ಮನೆಯಿಂದ ಉಡುಗೊರೆಯಾಗಿ ಪಡೆದಿದ್ದರು. ಈ ಜಮೀನನ್ನು ಮುಡಾ ಭೂ ಸ್ವಾಧೀನ ಪಡಿಸಿಕೊಂಡು ಅವರಿಗೆ ಪರ್ಯಾಯವಾಗಿ ವಿಜಯ ನಗರದಲ್ಲಿ 14 ನಿವೇಶನಗಳನ್ನು ಸಹ ನೀಡಿತ್ತು. ವಿವಾದ ತೀವ್ರವಾದ ಬಳಿಕ ಪಾರ್ವತಿ ತಮಗೆ ಬಂದಿದ್ದ 14 ನಿವೇಶನಗಳನ್ನು ಮುಡಾಗೆ ವಾಪಸ್ ಕೊಟ್ಟಿದ್ದರು.
ಮೈಲಾರಯ್ಯ ಅವರ ಪುತ್ರಿ ಜಮುನಾ ಹೂಡಿರುವ ಅಸಲು ದಾವೆಯ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ, ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ ಸೇರಿದಂತೆ 12 ಮಂದಿ ವಿರುದ್ಧ ಏಕಪಕ್ಷೀಯ ತಾತ್ಕಾಲಿಕ ಪ್ರತಿಬಂಧಕ ಆದೇಶ ನೀಡಲು ಕೋರ್ಟ್ ನಿರಾಕರಿಸಿದೆ. ಆದರೆ, ಪ್ರಕರಣ ಸಂಬಂಧ 12 ಪ್ರತಿವಾದಿಗಳಿಗೆ ಸಮನ್ಸ್ ಮತ್ತು ತುರ್ತು ನೋಟಿಸ್ ಜಾರಿ ಮಾಡಿದೆ.
ಜನವರಿ 10ರಂದು ಪ್ರಕರಣದ ವಿಚಾರಣೆ ನಡೆಸಲಿದೆ. ಇದಕ್ಕೂ ಮುನ್ನ ಲೋಕಾಯುಕ್ತ ಪೊಲೀಸರು ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.












Click it and Unblock the Notifications