ತಿ.ನರಸೀಪುರದ ತಂಬಲದಲ್ಲಿ ಮತ್ತೊಂದು ಚಿರತೆ ಬೋನಿಗೆ
ಮೈಸೂರು, ಮಾರ್ಚ್ 04: ತಿ.ನರಸೀಪುರ ತಾಲೂಕಿನ ತುಂಬಲ ಗ್ರಾಮ ಬಟ್ಟಳಿಗೆ ಹುಂಡಿಯಲ್ಲಿ ಬೆಳ್ಳಂಬೆಳಗ್ಗೆ ಮತ್ತೊಂದು ಚಿರತೆ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯು ಚಿರತೆಯನ್ನು ಬೋನಿಗೆ ಕೆಡವಲು ಯಶಸ್ವಿಯಾಗಿದ್ದಾರೆ.
ಹಲವು ದಿನಗಳಿಂದ ಬಟ್ಟಳಿಗೆ ಹುಂಡಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿತ್ತು. ಚಿರತೆ ಕಾಣಿಸಿಕೊಂಡಿದ್ದರಿಂದ ಭಯಭೀತರಾಗಿದ್ದ ಬಟ್ಟಳಿಗೆ ಗ್ರಾಮದ ಜನರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ವಿಷಯ ತಿಳಿದ ಅರಣ್ಯಾಧಿಕಾರಿಗಳು ಗ್ರಾಮದ ಮಹದೇವ್ ಅವರ ಮನೆ ಬಳಿ ಬೋನು ಇರಿಸಿದ್ದರು. ಹೀಗಾಗಿ 2 ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ ಕಂಡ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸೆರೆಯಾದ ಚಿರತೆಯನ್ನು ಡಿಆರ್ಎಫ್ಒ ಮಂಜುನಾಥ್ ಮತ್ತು ಸಿಬ್ಬಂದಿ ಚಿರತೆಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ.

ತುಂಬಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ನೆನ್ನೆಯಷ್ಟೇ ತುಂಬಲ ಗ್ರಾಮದ ಕಬ್ಬಿನ ಗದ್ದೆಯಲ್ಲಿ 8 ದಿನದ ಮೂರು ಚಿರತೆ ಮರಿಗಳು ಪ್ರತ್ಯಕ್ಷವಾಗಿದ್ದವು. ಅರಣ್ಯಾಧಿಕಾರಿಗಳು ಮರಿ ಚಿರತೆಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದರು. ಇದಲ್ಲದೇ ಕೆಲ ತಿಂಗಳುಗಳಿಂದ ಈ ಭಾಗದಲ್ಲಿ ಬರೋಬ್ಬರಿ ಆರನೇ ಚಿರತೆ ಬೋನಿಗೆ ಬಿದ್ದಿದೆ ಎನ್ನಲಾಗುತ್ತಿದೆ.












Click it and Unblock the Notifications