ನಾಡ ದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಗೃಹ ಸಚಿವರು
ಮೈಸೂರು, ಆಗಸ್ಟ್ 27; ಕರ್ನಾಟಕದಲ್ಲಿ ಸದ್ಯ ಚರ್ಚೆ ನಡೆಯುತ್ತಿರುವ ವಿಚಾರ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ. ಬುಧವಾರ ಪ್ರಕರಣ ಬೆಳಕಿಗೆ ಬಂದಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ಈವರೆಗೂ ಯಾವುದೇ ಆರೋಪಿಗಳ ಪತ್ತೆಯಾಗಿಲ್ಲ.
ಶುಕ್ರವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು, "ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಚುರುಕಾಗಿದ್ದು, ಇನ್ನೂ ಆರೋಪಿಗಳು ಪತ್ತೆಯಾಗಿಲ್ಲ. ಅಲ್ಲದೇ ಯಾವ ಹಂತದಲ್ಲಿ ತನಿಖೆ ನಡೆಯುತ್ತಿದೆ? ಎಂದು ಹೇಳಲಾಗುವುದಿಲ್ಲ" ಎಂದರು.
ಮೈಸೂರು ಅತ್ಯಾಚಾರ ಪ್ರಕರಣದ ತನಿಖೆಗೆ ಎಡಿಜಿಪಿ ಪ್ರತಾಪ್ ರೆಡ್ಡಿ ನೇಮಕ
"ಖಂಡಿತವಾಗಲೂ ಈ ಪ್ರಕರಣವನ್ನು ಬೇಧಿಸಲಿದ್ದು, ಇದಕ್ಕಾಗಿ ಸ್ವಲ ಸಮಯ ಬೇಕಿದೆ. ವಿಚಾರಣೆಗೆ ತೊಂದರೆ ಆಗುವ ದೃಷ್ಟಿಯಿಂದ ನಾನು ಹೆಚ್ಚಿನ ವಿವರ ನೀಡುವುದಿಲ್ಲ. ಸಂತ್ರಸ್ತೆ ತಮ್ಮ ಹೇಳಿಕೆಯನ್ನು ಪೊಲೀಸರಿಗೆ ತಿಳಿಸಿಲ್ಲ" ಎಂದು ಹೇಳಿದರು.
ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ವಿದ್ಯಾರ್ಥಿನಿಯ ಗೆಳೆಯ ಹೇಳಿದ್ದೇನು?
"ಸದ್ಯ ಎದುರಾಗಿರುವ ಸಂದಿಗ್ಧತೆಯನ್ನು ನಿವಾರಣೆ ಮಾಡಿಕೊಳ್ಳುವ ಶಕ್ತಿಯನ್ನು ಪೊಲೀಸರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದೇನೆ. ಎಲ್ಲರ ಮನಸ್ಸಿಗೂ ಒಳ್ಳೆಯ ಭಾವನೆ ಕೊಡಲೆಂದು ಕೇಳಿಕೊಂಡಿದ್ದೇನೆ" ಎಂದು ತಿಳಿಸಿದರು.
ಮೈಸೂರು ಅತ್ಯಾಚಾರ ಪ್ರಕರಣ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ
"ಗೃಹ ಸಚಿವರ ಹೇಳಿಕೆಗೆ ನನ್ನ ಸಹಮತವಿಲ್ಲ" ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವ ಆರಗ ಜ್ಞಾನೇಂದ್ರ, "ಅವರು ಸಿಎಂ ಅವರಿಗೆ ಅದನ್ನು ಹೇಳುವ ಅಧಿಕಾರ ಇದೆ, ಅದಕ್ಕೆ ಹೇಳಿದ್ದಾರೆ" ಎಂದರು.
ಶಕ್ತಿಕೊಡುವಂತೆ ಪ್ರಾರ್ಥನೆ; "ನಾನು ಗೃಹ ಸಚಿವನಾದ ಬಳಿಕ ಇದೇ ಮೊದಲ ಬಾರಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದಿದ್ದು, ದೇವಿಯ ದರ್ಶನ ಮಾಡಿ ನನಗೆ ತುಂಬಾ ಸಂತೋಷವಾಗಿದೆ. ಅಲ್ಲದೇ ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನನಗೆ, ನಮ್ಮ ಪೊಲೀಸ್ ಇಲಾಖೆಗೆ ಶಕ್ತಿಕೊಡುವಂತೆ ದೇವರಲ್ಲಿ ಪ್ರಾರ್ಥನೆ ಮಾಡಿ ಕೇಳಿಕೊಂಡಿದ್ದೇನೆ" ಎಂದು ಹೇಳಿದರು.
"ರಾಜ್ಯದ ಜನತೆಗೆ ಒಳ್ಳೆಯದು ಮಾಡಲಿ, ಒಳ್ಳೆಯ ಮನಸ್ಸು ಕೊಡಲಿ ಎಂದು ಪ್ರಾರ್ಥಿಸಿದ್ದೇನೆ. ಕಾನೂನು ಸುವ್ಯವಸ್ಥೆ ಹತೋಟಿಗೆ ಬರುವಂತೆ ಹಾಗೂ ರಾಜ್ಯದಲ್ಲಿ ಕ್ರೈಂ ರೇಟ್ ಕಡಿಮೆ ಆಗೋದಲ್ಲ, ಕ್ರೈಂ ಆಗದಂತೆ ಚಾಮುಂಡೇಶ್ವರಿ ಕೇಳಿಕೊಂಡಿದ್ದೇನೆ" ಎಂದರು. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಆರಗ ಜ್ಞಾನೇಂದ್ರಗೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಸಾಥ್ ನೀಡಿದರು.
ಹಿರಿಯ ಅಧಿಕಾರಿಗಳ ಮೀಟಿಂಗ್; ಮೈಸೂರಿನಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣ ದೇಶ ಹಾಗೂ ರಾಜ್ಯಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಘಟನೆ ಖಂಡಿಸಿ ಈಗಾಗಲೇ ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆ ಸದಸ್ಯರು ಬೀದಿಗಿಳಿದು ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ಮೈಸೂರಿಗೆ ಆಗಮಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಬೆಳಗ್ಗೆ 11ಗಂಟೆಗೆ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಲಿದ್ದಾರೆ, ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಐಜಿ ಕಚೇರಿಗೆ ಭೇಟಿ ನೀಡಲಿರುವ ಗೃಹ ಸಚಿವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳಿಂದ ವಿವರಣೆ ಪಡೆಯಲಿದ್ದಾರೆ. ಅಲ್ಲದೇ ಘಟನೆ ನಡೆದ ಸ್ಥಳ ಹಾಗೂ ಸಂತ್ರಸ್ತೆಯನ್ನು ಭೇಟಿ ಮಾಡುವ ಸಾಧ್ಯತೆ ಸಹ ಇದೆ.
ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಎಡಿಜಿಪಿ ಪ್ರತಾಪ್ ರೆಡ್ಡಿ ತನಿಖೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದು, ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡುವ ಮೂಲಕ ಪ್ರಕರಣದ ಮಾಹಿತಿ ಪಡೆದಿದ್ದಾರೆ. ಇವರೊಂದಿಗೆ ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಸಹ ಸ್ಥಳಕ್ಕೆ ಭೇಟಿ ನೀಡಿ, ಮತ್ತಷ್ಟು ಸಾಕ್ಷ್ಯ ಸಂಗ್ರಹಕ್ಕೆ ಮುಂದಾಗಿದ್ದಾರೆ.