ಬಿಜೆಪಿಯವರಿಂದ ಕನ್ನಡಿಗರ ಎಟಿಎಂ ಲೂಟಿ, ಅಮಿತ್ ಶಾ ಆಟ ನನ್ನ ಬಳಿ ನಡೆಯಲ್ಲ: ಎಚ್.ಡಿ.ಕುಮಾರಸ್ವಾಮಿ ಆಕ್ರೋಶ
ಮೈಸೂರು, ಜನವರಿ, 02: ಕೇಂದ್ರ ಗೃಹ ಸಚಿವ ಅಮಿತ್ ಶಾ ಆಟ ನನ್ನ ಮುಂದೆ ನಡೆಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ತಿರುಗೇಟು ನೀಡಿದ್ದಾರೆ. ಹಾಗಯೇ ಬಿಜೆಪಿಗೆ ಇಡೀ ಕರ್ನಾಟಕವೇ ಎಟಿಎಂ ಆಗಿದೆ. ಎಲ್ಲೆಲ್ಲೂ ಪರ್ಸಂಟೇಜ್ ವ್ಯವಹಾರ ನಡೆಯುತ್ತಿದೆ. 40% ಪರ್ಸಂಟ್ ವ್ಯವಹಾರ ಇಡೀ ಜಗತ್ತಿಗೆ ಗೊತ್ತಿರುವ ಸಂಗತಿಯಾಗಿದೆ. ಇದು ಅಮಿತ್ ಶಾ ಅವರಿಗೆ ಗೊತ್ತಿಲ್ಲವೆ? ಎಂದು ಪ್ರಶ್ನಿಸುವ ಮೂಲಕ ಕುಟುಕಿದರು.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಂಡ್ಯ ಭೇಟಿ ವೇಳೆ ಜೆಡಿಎಸ್ ಪಕ್ಷ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ಧ ಮಾತನಾಡಿದ್ದ ಅಮಿತ್ ಶಾ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದರು. ಜೆಡಿಎಸ್ ಗೆದ್ದರೆ ಕುಟುಂಬದ ಎಟಿಎಂ ಆಗುತ್ತದೆ ಎನ್ನುವ ಶಾ ಹೇಳಿಕೆ ಬಗ್ಗೆ ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಅವರು, ಗೃಹ ಸಚಿವರ ಹೇಳಿಕೆಗೆ ಉತ್ತರ ನೀಡಿದ್ದೇನೆ. ಆದರೆ ನಾನು ಕೇಳಿದ್ದ ಪ್ರಶ್ನೆಗಳಿಗೆ ಅವರು ಉತ್ತರ ಕೊಡಲಿಲ್ಲ. ಯಾವುದಾದರೂ ಒಂದು ಪ್ರಕರಣದಲ್ಲಿ ನಾಡಿನ ಸಂಪತ್ತುನ್ನು ಎಟಿಎಂ ಆಗಿ ದುರ್ಬಳಕೆ ಮಾಡಿಕೊಂಡಿದ್ದರೆ ರಾಜ್ಯದ ಜನತೆ ಮುಂದಿಡಿ ಎಂದು ಸವಾಲು ಹಾಕಿದರು.

ಬಿಜೆಪಿಯವರಿಂದ ಕನ್ನಡಿಗರ ಎಟಿಎಂ ಲೂಟಿ
ಅಮಿತ್ ಶಾ ಮಗ ಜೈ ಶಾಗೆ ಭಾರತೀಯ ಕ್ರಿಕೆಟ್ ಮಂಡಳಿಯಲ್ಲಿ ಇದ್ದಾರೆ. ಕ್ರಿಕೆಟ್ಗೆ ಅವರ ಕೊಡುಗೆ ಏನು? ಎಂದು ಪ್ರಶ್ನಿಸಿದ ಕುಮಾರಸ್ವಾಮಿ ಅವರು, ಬಿಸಿಸಿಐನಲ್ಲಿ ಬಂದು ಕೂರಲು ಜೈ ಶಾಗೆ ಏನು ಅರ್ಹತೆ ಇದೆ ಎನ್ನುವುದನ್ನು ಎಟಿಎಂ ಆರೋಪ ಮಾಡಿರುವ ಅಮಿತ್ ಶಾ ದೇಶಕ್ಕೆ ಹೇಳಬೇಕು. ಇವರು ಎಚ್.ಡಿ.ದೇವೇಗೌಡರ ಉಗುರಿಗೆ ಸಮ ಆಗಲ್ಲ. ದೇವೇಗೌಡರ ಬಗ್ಗೆ ಮಾತನಾಡುವ ನೈತಿಕತೆ ಅಮಿತ್ ಶಾಗೆ ಇಲ್ಲ. ಆದರೂ ಸುಖಾಸುಮ್ಮನೆ ನಮ್ಮ ಕುರಿತು ಮಾತನಾಡುತ್ತಿದ್ದಾರೆ. ಕನ್ನಡಿಗರ ಎಟಿಎಂ ಅನ್ನು ಬಿಜೆಪಿ ಲೂಟಿ ಮಾಡಿದ್ದಾರೆ. ಈ ಬಗ್ಗೆ ಅಮಿತ್ ಶಾ ಮಾತನಾಡಲಿ ಎಂದು ಚಾಟಿ ಬೀಸಿದರು.

ಸರ್ಕಾರ ಮಾಡೋಣ ಎಂದು ಬೆನ್ನು ಬಿದ್ದಿದ್ದರು
ಬಿಜೆಪಿ ಜೊತೆ ಸರ್ಕಾರ ಮಾಡಲು ನಾನೇನು ಅರ್ಜಿ ಹಾಕಿಕೊಂಡು ಇವರ ಮನೆ ಮುಂದೆ ಹೋಗಿದ್ದೇನಾ? ಹೊಂದಾಣಿಕೆ ಮಾಡಿಕೊಳ್ಳಿ ಅಂತಾ ಕಾಂಗ್ರೆಸ್ ಮತ್ತು ಬಿಜೆಪಿ ಮನೆ ಬಾಗಿಲಿಗೆ ಹೋಗಿದ್ದೇನಾ?. ಇವರೇ ಬಂದು ಸರ್ಕಾರ ಮಾಡೋಣ ಎಂದು ದುಂಬಾಲು ಬಿದ್ದರು ಎಂದು ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದರು. ನನ್ನ ಗುರಿ ಸ್ಪಷ್ಟವಾಗಿದೆ. 123 ಸಂಖ್ಯೆ ದಾಟಲು ದಿನದ 20 ಗಂಟೆ ದುಡಿಯುತ್ತೇನೆ. ನನ್ನ ಪಂಚರತ್ನ ರಥಯಾತ್ರೆ ಹೇಗೆ ಆಗುತ್ತಿದೆ ಎನ್ನುವುದು ಬಿಜೆಪಿಗೆ ಗೊತ್ತಾಗಿದೆ. ಜೆಡಿಎಸ್ ಪಕ್ಷದ ಬಗ್ಗೆ ಅವರಿಗೆ ಹೆದರಿಕೆ ಆರಂಭವಾಗಿದೆ. ಅದಕ್ಕೆ ಹೀಗೆ ಮಾತನಾಡುತ್ತಿದ್ದಾರೆ. ಅವರು ವಿನಾಕಾರಣ ಕಂಠ ಶೋಷಣೆ ಮಾಡಿಕೊಂಡರೆ ನನಗೇನು? ಎಂದು ವಾಗ್ದಾಳಿ ನಡೆಸಿದರು. ಅಮಿತ್ ಶಾ ಏನು ಎನ್ನುವುದು ಕನ್ನಡಿಗರಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ಅರ್ಥವಾಗಿದೆ. ಈ ತನಕ 800 ಶಾಸಕರು, ನಾಯಕರನ್ನು ಆಪರೇಷನ್ ಕಮಲ ಮಾಡಿದ್ದಾರೆ. ಐಟಿ, ಇಡಿ ಗುಮ್ಮನನ್ನು ಬಿಟ್ಟು ಹೆದರಿಸುತ್ತಾರೆ. ಹೀಗೆ ನನ್ನನ್ನು ಹೆದರಿಸಲು ಅವರಿಗೆ ಸಾಧ್ಯ ಇಲ್ಲ. ನಾನು ಹಾಗೆ ಹೆದರುವವನೂ ಅಲ್ಲ ಎಂದು ನೇರ ಮಾತುಗಳಲ್ಲಿ ತಿವಿದರು.

ಅಮಿತ್ ಶಾ ವಿರುದ್ಧ ಎಚ್ಡಿಕೆ ವಾಗ್ದಾಳಿ
ಅಮಿತ್ ಶಾ ಅವರು ಐಟಿ, ಇಡಿ ತೆಗೆದುಕೊಂಡು ಬರಲಿ. ಐಟಿ, ಇಡಿ ಗದಾಪ್ರಹಾರದೊಂದಿಗೆ ಕರೆದುಕೊಂಡು ಬರಲಿ ನಾನು ಹೆದರುವುದಿಲ್ಲ. ಏಕೆಂದರೆ ನಾನು ಸ್ವಚ್ಛವಾಗಿದ್ದೇನೆ. ಮನೀಷ್ ಸಿಸೋಡಿಯಾ, ಕೆ.ಚಂದ್ರಶೇಖರ ರಾವ್ ಮುಂತಾದವರ ಮೇಲೆ ಇದೇ ಗದಾಪ್ರಹಾರ ಮಾಡುತ್ತಿದ್ದಾರೆ. ಇಲ್ಲಿಗೂ ಬರಲಿ, ನಾನೇನು ಹೆದರುವುದಿಲ್ಲ. ಭ್ರಷ್ಟ ಕುಟುಂಬ ಅಂತಾ ಹೇಳುವುದಕ್ಕೆ ಯಾವುದಾದರೂ ನಿದರ್ಶನ ನೀಡಲಿ. ಬಿಜೆಪಿಯಲ್ಲಿ ಎಷ್ಟು ಕುಟುಂಬಗಳಿವೆ, ಎಷ್ಟು ಎಟಿಎಂಗಳಿವೆ ಎನ್ನುವುದು ನನಗಿಂತ ಜನರಿಗೆ ಚೆನ್ನಾಗಿ ಗೊತ್ತಿದೆ. ನಮ್ಮ ಎಟಿಎಂ ಜನತೆಯ ಕಷ್ಟಕ್ಕೆ ಕೊಟ್ಟಿದ್ದೇವೆ. ಅದು ಅಮಿತ್ ಶಾ ತಿಳಿದುಕೊಳ್ಳಲಿ. ಬಿಜೆಪಿಯವರ ಎಟಿಎಂ ಕ್ರಿಪ್ಟೊ ಕರೆನ್ಸಿ, ಡಾಲರ್ ಆಗಿದೆ. ಅವರು ಏನೆಲ್ಲಾ ಮಾಡುತ್ತಿದ್ದಾರೆ ಎನ್ನುವುದು ನನಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು.

2023ರಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತೇವೆ
ಅಮಿತ್ ಶಾ ಅವರು ನನ್ನ ಪಕ್ಷವನ್ನು ಕೆಣಕಿದ್ದಾರೆ. ಉತ್ತರ ಕೊಡದೆ ಬಿಡುವುದಿಲ್ಲ. 2018ರಲ್ಲಿ ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ಮಾಡಿದ್ದಾಗ, ಕಾಂಗ್ರೆಸ್ ಜೊತೆ ಸರ್ಕಾರ ಮಾಡುವುದು ಬೇಡ. ಹೊಸದಾಗಿ ಚುನಾವಣೆಗೆ ಹೋಗಿ ಎಂದು ಪ್ರಧಾನಿ ಮೋದಿ ಹೇಳಿದ್ದರು. ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಜೆಡಿಎಸ್ ಮನೆ ಬಾಗಿಲು ತಟ್ಟಿದ್ದವು ಎಂದು ಅಮಿತ್ ಶಾ ಅವರಿಗೆ ನೆನಪು ಮಾಡಿಕೊಟ್ಟರು. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ, ಕಾಂಗ್ರೆಸ್ಗಿಂತ ಜೆಡಿಎಸ್ ಪ್ರಬಲವಾಗಿದೆ. ಅಮಿತ್ ಶಾ ಮಾತುಗಳನ್ನು ನೋಡಿದರೆ ಇದು ವೇದ್ಯವಾಗುತ್ತದೆ. ವಿಧಾನಸೌದದ ಮೊಗಸಾಲೆಯಲ್ಲಿ ಬಿಜೆಪಿ ಶಾಸಕರೇ ಹೀಗೆ ಮಾತನಾಡುತ್ತಿದ್ದಾರೆ. ಬೇಕಾದರೆ ಅಮಿತ್ ಶಾ ಕೇಳಿಕೊಳ್ಳಲಿ ಎಂದು ಕಾಲೆಳೆದರು.
ಕರ್ನಾಟಕದಲ್ಲಿ ಕಮಲದ ಆಯುಸ್ಸು ಮುಗಿಯುತ್ತಾ ಬಂತು, ಕಮಲ ಮುದುಡುತ್ತಿದೆ. ಈ ಹತಾಶೆಯಿಂದ ಅಮಿತ್ ಶಾ ಹೀಗೆ ಮಾತನಾಡುತ್ತಿದ್ದಾರೆ. ಜೆಡಿಎಸ್ ಎಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತದೆಯೋ ಎಂದು ಹೆದರಿದ್ದಾರೆ. ಇದು ಅಮಿತ್ ಶಾ ಡಬಲ್ ಸ್ಟ್ಯಾಂಡರ್ಡ್ ತೋರಿಸುತ್ತದೆ. 2023ರಲ್ಲಿ ನಾವೇ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತೇವೆ. ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರ ಬರಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಸವರಾಜ ಬೊಮ್ಮಾಯಿ ಹೆಸರಿಗೆ ಮಾತ್ರ ಸಿಎಂ
ಈಗಾಗಲೇ ನಾವು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದೇವೆ. ಅಮಿತ್ ಶಾ ಅವರ ಪಕ್ಷ ಪಟ್ಟಿ ಮಾಡಲು ಇನ್ನೂ ತಿಣುಕಾಡುತ್ತಿದೆ. ಸಂಕ್ರಾಂತಿ ನಂತರ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇನೆ ಎಂದು ಇದೇ ವೇಳೆ ಹೇಳಿದರು. ಬಸವರಾಜ ಬೊಮ್ಮಾಯಿ ಅವರು ಹೆಸರಿಗೆ ಮಾತ್ರ ಮುಖ್ಯಮಂತ್ರಿ ಆಗಿದ್ದಾರೆ. ಆದರೆ ಅಧಿಕಾರ ಚಲಾಯಿಸುವುದು ದೆಹಲಿ ಬಿಜೆಪಿ ಹೈಕಮಾಂಡ್ ಆಗಿದೆ. ಅವರು ಕೇವಲ ನಾಮಕಾವಸ್ತೆ ಸಿಎಂ ಎಂದು ಕುಟುಕಿದ ಮಾಜಿ ಮುಖ್ಯಮಂತ್ರಿ ಅವರು, ವೀರಶೈವ, ಒಕ್ಕಲಿಗ ಸಮಾಜಕ್ಕೆ ಮೀಸಲಾತಿಯ ಹೂ ಮುಡಿಸಿದ್ದಾರೆ. ಅದು ಮುಂದೆ ಬಿಜೆಪಿಗೆ ತಿರುಗುಬಾಣ ಆಗಲಿದೆ ಎಂದು ತಿಳಿಸಿದರು.












Click it and Unblock the Notifications