ರಾಜ್ಯಕ್ಕೆ ಬಾಂಗ್ಲಾ ಮೂಲದ ಉಗ್ರರ ನುಸುಳುವಿಕೆ; ಕಠಿಣ ಕ್ರಮಕ್ಕೆ ಗೃಹ ಸಚಿವರ ಸೂಚನೆ
ಮೈಸೂರು, ಅಕ್ಟೋಬರ್ 18: "ರಾಜ್ಯಕ್ಕೆ ಬಾಂಗ್ಲಾ ಮೂಲದ ಉಗ್ರಗಾಮಿ ಸಂಘಟನೆ ಸದಸ್ಯರು ನುಸುಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಾಜ್ಯಕ್ಕೆ ನುಸುಳಿರುವ ಬಾಂಗ್ಲಾ ಮುಜಾಯಿದ್ದೀನ್ ಸಂಘಟನೆಯ ಉಗ್ರರನ್ನು ಸದೆಬಡಿಯಲು ರಾಜ್ಯ ಪೊಲೀಸ್ ಕಾರ್ಯೋನ್ಮುಖವಾಗಿದೆ" ಎಂದು ಮಾಹಿತಿ ನೀಡಿದ್ದಾರೆ ಗೃಹ ಸಚಿವ ಬಸವರಾಜ ಬೊಮ್ಮಾಯಿ.
ಇಂದು ಮೈಸೂರಿನ ಅಕಾಡೆಮಿಯ ಕವಾಯತು ಮೈದಾನದಲ್ಲಿ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, "ಜಮ್ಮು ಕಾಶ್ಮೀರ ಹಾಗೂ ಬಾಂಗ್ಲಾದೇಶದ ಗಡಿ ಮೂಲಕ ಉಗ್ರರು ದೇಶವನ್ನು ಪ್ರವೇಶಿಸಿದ್ದಾರೆ. ಬಾಂಗ್ಲಾ ದೇಶದವರು ಹೆಚ್ಚಾಗಿ ರಾಜ್ಯಕ್ಕೆ ಪ್ರವೇಶ ಮಾಡಿದ್ದಾರೆಂದು ಕೇಂದ್ರ ಗೃಹ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಕರಾವಳಿ ಪ್ರದೇಶದಲ್ಲಿ ಉಗ್ರರು ಸಕ್ರಿಯರಾಗಿದ್ದರೆಂಬ ಮಾಹಿತಿಯಿದೆ. ಈಗಾಗಲೇ ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇಡಲಾಗಿದೆ. ಬಾಂಗ್ಲಾ ಮೂಲದ ಉಗ್ರರು ಹೆಚ್ಚಾಗಿ ನಮ್ಮ ರಾಜ್ಯಕ್ಕೆ ನುಸುಳುವ ಕೆಲಸ ಮಾಡ್ತಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಅಂತಹ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಆ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಕೆಲವೊಮ್ಮೆ ಹರಡುವ ವದಂತಿಗಳಿಗೆ ರಾಜ್ಯದ ಜನತೆ ಕಿವಿಗೊಡುವ ಅಗತ್ಯವಿಲ್ಲ" ಎಂದರು.
ಬೆಂಗಳೂರಿನ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಉಗ್ರರ ಅಡಗುದಾಣಗಳು ಪತ್ತೆಯಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ "ಈ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಜನರ ಸುರಕ್ಷತೆ ದೃಷ್ಟಿಯಿಂದ ಕೆಲವೊಂದು ಮಾಹಿತಿಗಳನ್ನು ತಿಳಿಸಲು ಸಾಧ್ಯವಿಲ್ಲ" ಎಂದರು.

ರಾಜ್ಯದಿಂದ ಮಹಾರಾಷ್ಟ್ರದ ಹಲವು ಗ್ರಾಮಗಳಿಗೆ ನೀರು ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭರವಸೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, "ಮುಖ್ಯಮಂತ್ರಿಯವರು ಮಹಾರಾಷ್ಟ್ರದ ಚುನಾವಣಾ ಪ್ರಚಾರಕ್ಕೆ ಹೋಗಿದ್ದಾಗ, ಅಲ್ಲಿ ನೆರೆದಿದ್ದ ಜನರ ಕೋರಿಕೆಗೆ ಸ್ಪಂದಿಸಿ ಆ ರೀತಿ ಹೇಳಿದ್ದಾರೆ. ಅಲ್ಲದೇ ಅಲ್ಲಿನ ಜನರು ಕುಡಿಯಲು ನೀರು ಕೇಳುತ್ತಿದ್ದಾರೆ. ಕೊಡುಕೊಳ್ಳುವಿಕೆಯ ಆಧಾರದಲ್ಲಿ ಮಹಾರಾಷ್ಟ್ರ ನೀರು ಕೇಳಿದೆ. ನೀರು ಬಿಡುವ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ, ಅಲ್ಲಿನ ಜನ ಮುಖ್ಯಮಂತ್ರಿಗಳನ್ನು ಪ್ರಶ್ನೆ ಮಾಡಿದಾಗ ಇಲ್ಲ ಎನ್ನಲಾಗದೆ ಸಿಎಂ ಹಾಗೆ ಉತ್ತರಿಸಿದ್ದಾರೆ ಅಷ್ಟೇ. ಮಹಾರಾಷ್ಟ್ರ ಕರ್ನಾಟಕದ ನಡುವೆ ಕೊಡು ಕೊಳ್ಳುವಿಕೆ ಬಹಳ ಕಾಲದಿಂದಲೂ ಮುಂದುವರೆಸಿಕೊಂಡು ಬಂದಿದೆ" ಎಂದು ಮಾರ್ಮಿಕವಾಗಿ ನುಡಿದರು.
"ಔರಾದ್ಕರ್ ವರದಿ ಅನುಷ್ಠಾನಕ್ಕೆ ಯಾವುದೇ ರೀತಿಯ ತೊಂದರೆಯಿಲ್ಲ. ಈ ವರದಿಗೆ ಅಗ್ನಿಶಾಮಕ, ಜೈಲರ್ ಹಾಗೂ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಪೊಲೀಸರನ್ನು ಸೇರಿಸಲಾಗಿದೆ. ಹೀಗಾಗಿ ಇದನ್ನು ಅಂತಿಮಗೊಳಿಸಲು ಹಣಕಾಸು ವಿಭಾಗಕ್ಕೆ ವರ್ಗಾಯಿಸಲಾಗಿದೆ. ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದ ಬಳಿಕ ಮುಖ್ಯಮಂತ್ರಿಗಳ ಒಪ್ಪಿಗೆ ಪಡೆದು ಅನುಷ್ಠಾನಕ್ಕೆ ತರಲಾಗುವುದು" ಎಂದರು.












Click it and Unblock the Notifications