Bengaluru-Mysuru Expressway: ಕಾಮಗಾರಿ ಪೂರ್ಣಗೊಳ್ಳುವವರೆಗೂ ವಾಹನ ಸಂಚಾರ ನಿರ್ಬಂಧಿಸಿ: ರೈತ ಸಂಘ ಆಗ್ರಹ
ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ವೇ ಕಾಮಗಾರಿ ಪೂರ್ಣಗೊಳ್ಳುವವರೆಗೂ ಇಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಬೇಕೆಂದು ರಾಜ್ಯ ರೈತ ಸಂಘ ಸರ್ಕಾರಕ್ಕೆ ಒತ್ತಾಯಿಸಿದೆ.
ಮೈಸೂರು, ಮಾರ್ಚ್, 21: ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ವೇ ಕಾಮಗಾರಿ ಪೂರ್ಣಗೊಳ್ಳುವವರೆಗೂ ವಾಹನ ಸಂಚಾರವನ್ನು ಸ್ಥಗಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮೈಸೂರಿನಲ್ಲಿ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಮೊನ್ನೆ ಮಳೆ ಸುರಿದಿದ್ದು, ಆಗಿನಿಂದ ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ವೇನಲ್ಲಿ ಸಂಚಾರ ಮಾಡಲು ಸಾಧ್ಯವಾಗದಂತಾಗಿದೆ. ಈ ಹೆದ್ದಾರಿಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದ ಪರಿಣಾಮ ಅಪಘಾತ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿವೆ. ಮತ್ತೊಂದೆಡೆ ಹೆದ್ದಾರಿಯುದ್ದಕ್ಕೂ ಯಾವುದೇ ಪೆಟ್ರೋಲ್ ಬಂಕ್ ಸೇರಿದಂತೆ ಒಂದು ಶೌಚಾಲಯದ ವ್ಯವಸ್ಥೆಯೂ ಇಲ್ಲದಾಂಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದುಪ್ಪಟ್ಟು ಟೋಲ್ ವಸೂಲಿ ಆರೋಪ
ಇದರ ಜೊತೆಗೆ ದುಪ್ಪಟ್ಟು ಟೋಲ್ ವಸೂಲಿ ಮಾಡುತ್ತಿದ್ದು, ಇದರಿಂದ ಸಾರ್ವಜನಿಕರು ನಿತ್ಯವೂ ಕಿರಿಕಿರಿ ಅನುಭವಿಸುವಂತಾಗಿದೆ. ಆದ್ದರಿಂದ ರಸ್ತೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ಸಂಚಾರವನ್ನು ಸ್ಥಗಿತಗೊಳಿಸಬೇಕು. ಒಂದು ವೇಳೆ ನಮ್ಮ ಮನವಿಯನ್ನು ಪುರಸ್ಕರಿಸದಿದ್ದರೆ 101 ವಾಹನಗಳ ಜೊತೆ ಚಳವಳಿ ನಡೆಸಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅಪಘಾತ ಪ್ರಕರಣಗಳ ವಿವರ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಆದಾಗಿನಿಂದ ಒಂದಲ್ಲ ಒಂದು ರೀತಿಯಲ್ಲಿ ಇಲ್ಲಿ ಅಪಘಾತಗಳು ಸಂಭವಿಸುತ್ತಲೇ ಇವೆ. ಹಾಗೆಯೇ ಮಾರ್ಚ್ 19ರಂದು ಕಣಮಿಣಕಿ ಟೋಲ್ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಗುದ್ದಿದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ. ಇನ್ನಯ ಬೈಕ್ನಲ್ಲಿದ್ದ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿತ್ತು.
ಟೋಲ್ ಕಟ್ಟುವುದನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಈ ಘಟನೆ ರಾಜರಾಜೇಶ್ವರಿ ಆಸ್ಪತ್ರೆ ಬಳಿ ನಡೆದಿದೆ ಎನ್ನಲಾಗಿದೆ. ಮತ್ತೊಂದೆಡೆ ಬೆಂಗಳೂರು-ಮೈಸೂರು ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆ ನಡೆಯುತ್ತಲೇ ಇವೆ. ಹೆದ್ದಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹ ಮಾಡುತ್ತಿದ್ದಾರೆ ಎಂದು ಹಲವು ಸಂಘಟನೆಗಳು ಪ್ರತಿಭಟನೆ ಮಾಡುವ ಮೂಲಕ ಆಕ್ರೋಶವನ್ನು ಹೊರಹಾಕುತ್ತಲೇ ಇವೆ.

ಉದ್ಘಾಟನೆಗೂ ಮುನ್ನವೇ ಈ ಹೆದ್ದಾರಿಯಲ್ಲಿ ಹಲವು ಅಪಘಾತಗಳು ಸಂಭವಿಸಿರುವ ಬಗ್ಗೆ ವರದಿಯಾಗಿತ್ತು. ಅಪಘಾತದಲ್ಲಿ ಸಾವು, ನೋವುಗಳು ಸಂಭವಿಸಿರುವ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ವಾಹನ ಸಂಚಾರ ಆರಂಭವಾಗಿ ಆರು ತಿಂಗಳಿನೊಳಗೆ ಅಪಘಾತಗಳ ಸಂಖ್ಯೆ ಏರಿಕೆ ಆಗಿದೆ. ಒಟ್ಟು 84ಕ್ಕೂ ಹೆಚ್ಚು ಮಂದಿ ಸಾವನ್ನಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿತ್ತು.
2022ರ ಸೆಪ್ಟೆಂಬರ್ನಿಂದ ನೂತನ ಹೆದ್ದಾರಿಯಲ್ಲಿ ವಾಹನ ಸಂಚಾರ ಆರಂಭವಾಗಿದ್ದು, ಅಲ್ಲಿಂದ ಇಲ್ಲಿಯವರೆಗೂ 335ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಎಕ್ಸ್ಪ್ರೆಸ್ ವೇ ಕಾಮಗಾರಿ ಅಂತಿಮ ಹಂತದ ಡಿಸೆಂಬರ್ ಮತ್ತು ಜನವರಿ ತಿಂಗಳಿನಲ್ಲಿ ಹೆಚ್ಚು ಅಪಘಾತಗಳು ಸಂಭವಿಸಿವೆ ಎನ್ನುವ ಮಾಹಿತಿ ದೊರೆತಿದೆ.
ರೈತರಿಗೆ ಶಾಕ್ ನೀಡುತ್ತಿರುವ ಸೆಸ್ಕ್
ಮತ್ತೊಂದೆಡೆ ಬೇಸಿಗೆ ಸಮಯದಲ್ಲಿ ರೈತರಿಗೆ ಸೆಸ್ಕ್ ಶಾಕ್ ನೀಡುತ್ತಿದೆ. ಇದರಿಂದ ರೈತರಿಗೆ ತುಂಬಾ ತೊಂದರೆಯಾಗುತ್ತಿದೆ. ಆದ್ದರಿಂದ ಹತ್ತು ಗಂಟೆ ಗುಣಾತ್ಮಕ ವಿದ್ಯುತ್ ಪೂರೈಕೆ, 75 ಗಂಟೆ ಒಳಗೆ ಟ್ರಾನ್ಸ್ಫಾರ್ಮರ್ ರಿಪೇರಿ ಮಾಡಬೇಕು. ವಿದ್ಯುತ್ ಪೂರೈಕೆಯಲ್ಲಿ ತಾರತಮ್ಯ ಮಾಡಬಾರದು. ಮತ್ತು ಭಾಗ್ಯಜ್ಯೋತಿಯನ್ನು ಡಿಸ್ ಕನೆಕ್ಟ್ ವಾಡಬಾರದು ಎಂದು ಒತ್ತಾಯಿಸಿದರು. ಇನ್ನು ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ಮಾರ್ಚ್ 26ರಂದು ಸೆಸ್ಕ್ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ ಎಂದರು.
ಬಿಜೆಪಿಯವರು ಸಾಮರಸ್ಯ ಕದಡುವ ವಿಚಾರಗಳನ್ನು ಬಿಟ್ಟು ಜನರ ಸಮಸ್ಯೆಗಳ ಕಡೆಗೆ ಗಮನಹರಿಸಿ," ಎಂದು ಬಡಗಲಪುರ ನಾಗೇಂದ್ರ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಮಂಡಕಳ್ಳಿ ಮಹೇಶ್, ಮರಂಕಯ್ಯ ಸೇರಿದಂತೆ ಮತ್ತಿತರರು ಇದ್ದರು.












Click it and Unblock the Notifications