ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ: ಮುರಳೀಧರ ರಾವ್ ಸ್ಪಷ್ಟನೆ
ಮೈಸೂರು, ಮೇ 2: ಜನಾರ್ದನ ರೆಡ್ಡಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಅವರು ಬಿಜೆಪಿ ಪ್ರಚಾರಕರೂ ಅಲ್ಲ ಎಂದು ಬಿಜೆಪಿಯ ಕರ್ನಾಟಕ ಉಸ್ತುವಾರಿ ಮುರಳೀಧರ ರಾವ್ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪರ ಪ್ರಚಾರ ನಡೆಸಲು ಜನಾರ್ದನ ರೆಡ್ಡಿಗೆ ಯಾರೂ ಹೇಳಿಲ್ಲ. ವೈಯಕ್ತಿವಾಗಿ ಶ್ರೀರಾಮುಲು ಸ್ನೇಹಿತರಾದ ಕಾರಣ ಅವರ ಪರ ಜನಾರ್ದನ ರೆಡ್ಡಿ ಪ್ರಚಾರ ಕೈಗೊಂಡಿದ್ದಾರೆ ಅಷ್ಟೇ. ನಮಗೂ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಫಷ್ಟಪಡಿಸಿದರು.
ಇಂದು ಬೆಳಿಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ್ದ ಯಡಿಯೂರಪ್ಪ ಅವರು, 'ಜನಾರ್ದನ ರೆಡ್ಡಿ ಅವರು ಬಿಜೆಪಿ ಪರ ಪ್ರಚಾರ ಮಾಡಲು ಅಮಿತ್ ಶಾ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ' ಎಂದಿದ್ದರು ಆದರೆ ಮುರಳಿಧರ ರಾವ್ ಅವರು ಹಾಗೇನು ಆಗಿಲ್ಲ ಎಂದಿದ್ದಾರೆ, ಇದು ಪಕ್ಷದ ಆಂತರಿಕ ರಾಜಕೀಯದ ಬಗ್ಗೆ ಅನುಮಾನ ಮೂಡಿಸಿದೆ.

ಮುಂದೆ ಮಾತನಾಡಿದ ಮುರಳೀಧರ ರಾವ್ ಅವರು, ನಿನ್ನೆ ಪ್ರಧಾನಿ ಮೋದಿ ಅವರು ಚಾಮರಾಜನಗರಕ್ಕೆ ಆಗಮಿಸಿದ್ದರು. ಅಲ್ಲಿ ಅವರಿಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಕಾಂಗ್ರೆಸ್ ಆಡಳಿತದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಡಿಯೂರಪ್ಪನವರು ಅಧಿಕಾರಕ್ಕೆ ಬಂದ ನಂತರ ರೈತರ ಸಾಲ ಮನ್ನಾ ಮಾಡುವುದು ಬಿಜೆಪಿಯ ಅಜೆಂಡಾ ಆಗಿದೆ ಎಂದರು.
ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಮುಂಚೂಣಿಯಲ್ಲಿದೆ. ಕಾಂಗ್ರೆಸ್ಸನ್ನು ಕರ್ನಾಟಕದಿಂದ ಕಿತ್ತೊಗೆಯುವುದು ಖಚಿತ. ಕರ್ನಾಟಕದಲ್ಲಿ ಬಿಜೆಪಿ ಚುನಾವಣಾ ಕ್ಯಾಂಪೇನ್ ನಲ್ಲಿ ಸದೃಢವಾಗಿದೆ. ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ರಾಜ್ಯ ಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಯಡಿಯೂರಪ್ಪ ಇದುವರೆಗೂ ನೂರಕ್ಕೂ ಹೆಚ್ಚು ಬಹಿರಂಗ ಸಭೆಗಳನ್ನು ನಡೆಸಿದ್ದಾರೆ. ಬಿಜೆಪಿಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.
ಬಿಜೆಪಿ ಪರ ಜನಾರ್ದನ ರೆಡ್ಡಿ ಪ್ರಚಾರ : ಯಡಿಯೂರಪ್ಪ ಹೇಳಿದ್ದೇನು?
ಕರ್ನಾಟಕದ ಜಾತಿ ರಾಜಕೀಯ ಹಾಗೂ ಅಧಿಕಾರಕ್ಕೆ ತೆರೆಬೀಳಲಿದೆ. ಜೆಡಿಎಸ್ ಗೆ ಮತ ನೀಡಿದರೆ ಅದು ಕಾಂಗ್ರೆಸ್ ಗೆ ಮತ ನೀಡಿದಂತೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮಹಾನಗರ ಪಾಲಿಕೆಯಲ್ಲಿ ಮೈತ್ರಿಗೆ ಅಧಿಕಾರ ನಡೆಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ದುರಾಡಳಿತವನ್ನು ಬಿಜೆಪಿ ತೊಲಗಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಲಿನ ಭೀತಿಯಿಂದ ಬಾದಾಮಿಗೆ ಹೋಗಿದ್ದಾರೆ. ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡೂ ಕ್ಷೇತ್ರದಲ್ಲಿ ಸೋಲುತ್ತಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ. ಶ್ರೀರಾಮುಲು ಸಿದ್ದರಾಮಯ್ಯನವರಿಗೆ ಬಾದಾಮಿಯಲ್ಲಿ ಪ್ರಬಲ ಪೈಪೋಟಿ ನೀಡಿ ಅವರನ್ನು ಸೋಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications