ಹಣಬಲದಿಂದ ಚುನಾವಣೆ ಗೆಲ್ಲಲು ಬಿಜೆಪಿ ಮುಂದಾಗಿದೆ: ಸಿದ್ದರಾಮಯ್ಯ
ಮೈಸೂರು, ಮೇ 10: ಜನರಿಗೆ ತೋರಿಸಲು ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲದ ಕಾರಣ ಆಡಳಿತಾರೂಢ ಬಿಜೆಪಿಯು ಹಣಬಲದಿಂದ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಬಯಸಿದೆ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬುಧವಾರ ಆರೋಪಿಸಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರಣಿ ಸಾರ್ವಜನಿಕ ಸಭೆಗಳಲ್ಲಿ ರಾಜ್ಯದಲ್ಲಿ ಬೆಲೆ ಏರಿಕೆ, ನಿರುದ್ಯೋಗ ಮತ್ತು ಭ್ರಷ್ಟಾಚಾರದ ಬಗ್ಗೆ ಮೌನವಾಗಿದ್ದರು ಎಂದು ಆರೋಪಿಸಿದರು.

ಈ ಚುನಾವಣೆಯಲ್ಲಿ ಬಿಜೆಪಿಯಿಂದ ಹಣದ ಹೊಳೆ ಹರಿದಿದೆ. ಈಗ ಬಿಜೆಪಿಯವರು ಮತದಾರರ ಬಳಿಗೆ ಹಣ ನೀಡುವುದನ್ನು ಬಿಟ್ಟು ಇನ್ನೇನು (ಮಾಡಿದ್ದಾರೆ)? ತಮ್ಮ ಬಳಿ ಹಣವಿದೆ ಎಂಬುದನ್ನು ಬಿಟ್ಟು ರಾಜ್ಯದ ಬಗ್ಗೆ ಏನು ಹೇಳಲು ಸಾಧ್ಯ? ಅವರು ಏನು ಅಭಿವೃದ್ಧಿ ಮಾಡಿದ್ದಾರೆ? ಎಂದು ಸಿದ್ದರಾಮಯ್ಯ ಅವರು ಹೇಳಿದರು.
ಬಿಜೆಪಿಯಿಂದ ಒಂದೇ ಒಂದು ಮನೆ ನೀಡಲು ಸಾಧ್ಯವಾಗಿಲ್ಲ. ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಅನ್ನ ಭಾಗ್ಯ ಯೋಜನೆಯಡಿ ತಿಂಗಳಿಗೆ 7 ಕೆಜಿಯಿಂದ 4 ಕೆಜಿಗೆ ಉಚಿತ ಅಕ್ಕಿಯನ್ನು ಕಡಿಮೆ ಮಾಡಿದ್ದಾರೆ. ನಾಲ್ಕು ವರ್ಷಗಳಲ್ಲಿ ಬಿಜೆಪಿಯ ಸಾಧನೆ ಶೂನ್ಯ. ಹೀಗಾಗಿ ಅವರು ಹಣದ ಮೂಲಕ ಚುನಾವಣೆ ಗೆಲ್ಲಲು ಬಯಸಿದ್ದಾರೆ ಎಂದು ಹೇಳಿದರು.
ಪ್ರಧಾನಿ ರ್ಯಾಲಿಯಿಂದ ಯಾವುದೇ ಪರಿಣಾಮ ಬೀರಿಲ್ಲ, ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ ಅದರಲ್ಲೂ ಶೇ.40 ಕಮಿಷನ್ ಬಗ್ಗೆ ಏನಾದರೂ ಮಾತನಾಡಿದ್ದಾರಾ? ಎರಡು ವರ್ಷಗಳ ಹಿಂದೆ ಶೇ.40 ಕಮಿಷನ್ ಬಗ್ಗೆ ಮನವಿ ಮಾಡಲಾಗಿತ್ತು. ಈ ಬಗ್ಗೆ ಕೈಗೊಂಡ ಕ್ರಮದ ಬಗ್ಗೆ ಏನಾದರೂ ಹೇಳಿದ್ದಾರಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ವರುಣಾದಲ್ಲಿ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. 75ರ ವರ್ಷದ ಸಿದ್ದರಾಮಯ್ಯ ಇದು ತಮ್ಮ ಕೊನೆಯ ಚುನಾವಣೆಯಾಗಿದ್ದು, ನಂತರ ಚುನಾವಣಾ ರಾಜಕೀಯದಿಂದ ದೂರ ಉಳಿಯುವುದಾಗಿ ಹೇಳಿದ್ದಾರೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಯವರೆಗೆ ನಡೆಯಲಿದೆ. 224 ಸದಸ್ಯ ಬಲದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮೇ 13 ರಂದು ನಡೆಯಲಿದೆ.












Click it and Unblock the Notifications