ಬಿಜೆಪಿಯ 6 ಮಂದಿ ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ : ಸಾ ರಾ ಮಹೇಶ್
ಮೈಸೂರು, ಜನವರಿ 19 : ಮೈತ್ರಿ ಸರ್ಕಾರ ಸುಭದ್ರವಾಗಿದೆ. ಐದು ವರ್ಷ ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಬಿಜೆಪಿಯ 6 ಮಂದಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಸಾ ರಾ ಮಹೇಶ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಏಳು ತಿಂಗಳಿನಿಂದಲೂ ದೊಂಬರಾಟ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರ ಆಸೆ ಫಲಿಸದು. ಮೈತ್ರಿ ಸರ್ಕಾರದ ಯಾವುದೇ ಶಾಸಕರನ್ನು ಬಿಜೆಪಿಯವರು ಸೆಳೆಯಲು ಸಾಧ್ಯವಿಲ್ಲ. ಸದ್ಯಕ್ಕೆ ಮೈತ್ರಿ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಗೂ ನಮಗೂ ಸಂಬಂಧವಿಲ್ಲ. ಅವರ ಪಕ್ಷದ ಶಾಸಕರನ್ನು ಕಾಪಾಡಿಕೊಳ್ಳುವುದು ಅವರ ಕರ್ತವ್ಯ ಎಂದು ತಿಳಿಸಿದರು.
ಬಿಜೆಪಿಯ 6 ಮಂದಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ರೆಸಾರ್ಟ್ನಿಂದ ಹೊರಬಂದ ನಂತರ ಯಾರೆಲ್ಲ ರಾಜೀನಾಮೆ ನೀಡುತ್ತಾರೆ. ಬಿಜೆಪಿ ತೋಡಿರುವ ಖೆಡ್ಡಕ್ಕೆ ಅವರೇ ಬೀಳಲಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ನಲ್ಲಿ ಯಾವುದೇ ಗೊಂದಲವಿಲ್ಲ. ಕಾಂಗ್ರೆಸ್ ಶಾಸಕರು ರೆಸಾರ್ಟ್ಗೆ ಹೋಗಿರುವುದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ.

ಸಮ್ಮಿಶ್ರ ಸರ್ಕಾರವನ್ನು ಟೀಕಿಸುವ ನೈತಿಕತೆ ಬಿಜೆಪಿಗೆ ಇಲ್ಲ. ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಪಕ್ಷಕ್ಕೆ ಪಾಠ ಮಾಡಿದ್ದಾರೆ. ಅದನ್ನು ತಿಳಿದುಕೊಂಡರೆ ಸಾಕು ಎಂದು ಟಾಂಗ್ ನೀಡಿದರು.
ಮಳೆಗಾಲದೊಳಗೆ ಕೊಡಗಿನ ನಿರಾಶ್ರಿತ ಜನರಿಗೆ 840 ಮನೆಗಳನ್ನು ನಿರ್ಮಾಣ ಮಾಡಲಾಗುವುದು. ಮನೆ ನಿರ್ಮಾಣ ಕಾರ್ಯಭರದಿಂದ ಸಾಗಿದೆ. ಫೆ.1ಕ್ಕೆ ಇನ್ಫೋಸಿಸ್ ನ ಅಧ್ಯಕ್ಷೆ ಸುಧಾಮೂರ್ತಿಯನ್ನ ಮಡಿಕೇರಿಗೆ ಬರಲಿದ್ದಾರೆ. ಮನೆ ನಿರ್ಮಾಣಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪ್ರತಿ ಮನೆ ನಿರ್ಮಾಣಕ್ಕಾಗಿ 1 ಲಕ್ಷ 80 ಸಾವಿರ ಹಣ ಬಿಡುಗಡೆಯಾಗಿದೆ.
ಉಳಿದ ಹಣ ಸಂಘಸಂಸ್ಥೆಗಳ ಆರ್ಥಿಕ ನೆರವಿನಿಂದ ಮನೆಗಳನ್ನು ಪೂರ್ಣಗೊಳಿಸಲಾಗುವುದು. ಹಂಪಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ಮುಂದಾಗಿದೆ. ಅಲ್ಲಿನ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆದು ದಿನಾಂಕ ಘೋಷಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ನಡೆದಾಡುವ ದೇವರು ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ಕುರಿತು ಮಾತನಾಡಿ, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಭಾತರರತ್ನ ನೀಡುವಂತೆ ಕೇಂದ್ರಕ್ಕೆ ಪತ್ರದ ಮೂಲಕ ಒತ್ತಾಯ ಮಾಡಲಿದ್ದಾರೆ. ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಶೀಘ್ರದಲ್ಲಿ ಗುಣಮುಖರಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications