ಸಿ.ಎಚ್.ವಿಜಯಶಂಕರ್ ಮನವೊಲಿಸಿದ ಬಿಜೆಪಿ ನಾಯಕರು!
ಮೈಸೂರು, ಅಕ್ಟೋಬರ್ 22 : ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಅವರ ಮನವೊಲಿಕೆ ಕಾರ್ಯ ಮುಂದುವರೆದಿದೆ. ಪಕ್ಷದಲ್ಲೇ ಉಳಿಯುವಂತೆ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ.
ಶನಿವಾರ ಸಿ.ಎಚ್.ವಿಜಯಶಂಕರ್ ಅವರು 62ನೇ ವರ್ಷಕ್ಕೆ ಕಾಲಿಟ್ಟರು. ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಮುಂತಾದವರು ವಿಜಯಶಂಕರ್ ಅವರನ್ನು ಭೇಟಿ ಮಾಡಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, 'ಪಿರಿಯಾಪಟ್ಟಣ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಗೊಂದಲಕ್ಕೆ ಒಳಗಾಗಿದ್ದಾರೆ. ಈ ಕ್ಷೇತ್ರದಲ್ಲಿ ಪಕ್ಷವನ್ನು ಗೆಲ್ಲಿಸುವ ಶಕ್ತಿ ಇರುವುದು ವಿಜಯಶಂಕರ್ ಅವರಿಗೆ ಮಾತ್ರ. ಪಕ್ಷ ತೊರೆಯದಂತೆ ಮನವಿ ಮಾಡಿದ್ದೇವೆ' ಎಂದರು.
ಪಿರಿಯಾಪಟ್ಟಣ ಕ್ಷೇತ್ರದಿಂದ ಸಿ.ಎಚ್.ವಿಜಯಶಂಕರ್ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆ. ಕಳೆದ ಎರಡು ವರ್ಷಗಳಿಂದ ಅವರು ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಆದರೆ, ಅವರು ಪದೇ ಪದೇ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಪಕ್ಷ ತೊರೆಯಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ಪಕ್ಷ ಬಿಡಲಿದ್ದಾರೆ? : ಸಿ.ಎಚ್.ವಿಜಯಶಂಕರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಹುಣಸೂರು ಕ್ಷೇತ್ರದಿಂದ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.
ಮೊದಲು ಕಾಂಗ್ರೆಸ್ ಪಕ್ಷದಲ್ಲಿದ್ದ ವಿಜಯಶಂಕರ್ ಅವರು, 1990ರಲ್ಲಿ ಬಿಜೆಪಿ ಸೇರಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಅವರು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಹಾಸನದಲ್ಲಿ ಟಿಕೆಟ್ ನೀಡಲಾಗಿತ್ತು.












Click it and Unblock the Notifications