ಸಿಎಂ ಇತರ ಸಚಿವರಿಂದ ರಾಜ್ಯದ ಲೂಟಿ ಆರೋಪ, ಮೈಸೂರಿನಲ್ಲಿ ಪ್ರತಿಭಟನೆ
ಡೊನೇಷನ್ ಗೇಟ್ ಹಗರಣದ ವಿರುದ್ಧ ಕಾಂಗ್ರೆಸ್ ಪಕ್ಷ ಹಾಗೂ ಸಚಿವರ ವಿರುದ್ಧ ರಾಜ್ಯದಾದ್ಯಂತ ಶನಿವಾರ ಪ್ರತಿಭಟನೆ ನಡೆಸಿರುವ ಬಿಜೆಪಿ ಮುಖಂಡರು, ಕಾರ್ಯಕರ್ತರು ಮೈಸೂರಿನ ಸಿದ್ದರಾಮಯ್ಯ ಅವರ ಮನೆ ಎದುರು ಕೂಡ ಭಾರಿ ಪ್ರತಿಭಟನೆ ನಡೆಸಿದ್ದಾರೆ
ಮೈಸೂರು, ಫೆಬ್ರವರಿ 25: ವಿಧಾನಪರಿಷತ್ ಸದಸ್ಯ ಗೋವಿಂದರಾಜ್ ಅವರ ಮನೆಯಲ್ಲಿ ಆದಾಯ ತೆರಿಗೆ ಇಲಾಖೆಗೆ ಸಿಕ್ಕಿದೆ ಎನ್ನಲಾದ ಡೈರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೆ ರಾಜ್ಯದ ಸಚಿವರು ನೀಡಿದ್ದಾರೆ ಎನ್ನಲಾದ ಕಪ್ಪದ ವಿವರಗಳಿವೆ ಎಂಬ ಸುದ್ದಿ ಶನಿವಾರ ಮತ್ತೊಂದು ಮಜಲು ತಲುಪಿದೆ. ರಾಜ್ಯದ ವಿವಿಧೆಡೆ ಕಾಂಗ್ರೆಸ್ ಸಚಿವರು, ಶಾಸಕರ ವಿರುದ್ಧ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ಕ್ರಮಕ್ಕೆ ಆಗ್ರಹಿಸಿ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ಸಿಎಂ ನಿವಾಸದ ಮುಂದೆ ಬಿಜೆಪಿಯಿಂದ ಶನಿವಾರ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು, ಕಪ್ಪ ಕೊಟ್ಟು ಮುಖ್ಯಮಂತ್ರಿ ಪಟ್ಟ ಗಿಟ್ಟಿಸಿಕೊಂಡಿರುವ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಕಾಂಗ್ರೆಸ್ ಗೆ ಕಪ್ಪ ನೀಡಲು ರಾಜ್ಯದ ಖಜಾನೆ ಲೂಟಿ ಮಾಡುತ್ತಿರುವ ಸಿದ್ದರಾಮಯ್ಯನವರಿಗೆ ಧಿಕ್ಕಾರ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದರು.[ಗಂಟುಮೂಟೆ ಕಟ್ಟಲು ಸಿದ್ಧರಾಗಿ : ಬಿಜೆಪಿ, ಕಾಂಗ್ರೆಸ್ಸಿಗೆ ಎಎಪಿ ಎಚ್ಚರಿಕೆ]
2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೆ ರಾಜ್ಯ ಸರಕಾರ ಹಣ ಒದಗಿಸಿದೆ. ಸಿದ್ದರಾಮಯ್ಯ ಸಚಿವ ಸಂಪುಟದ ಮಂತ್ರಿಗಳು ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.['ಡೊನೇಶನ್ ಗೇಟ್' ಹಗರಣದ ಕೇಂದ್ರ ಬಿಂದು, ಯಾರು ಈ ಗೋವಿಂದರಾಜ್?]
ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಬಿಜೆಪಿ ನಗರಾಧ್ಯಕ್ಷ ಮಂಜುನಾಥ್, ಮಾಜಿ ಸಚಿವ ರಾಮದಾಸ್, ಕೋಟೆ ಶಿವಣ್ಣ ಸೇರಿದಂತೆ 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ ಪೊಲೀಸರು, ಸಿಆರ್ ಮೈದಾನಕ್ಕೆ ಕರೆದೊಯ್ದರು. ಎಚ್.ವಿ.ರಾಜೀವ್, ಗೋಮಧುಸೂದನ್, ನಗರಪಾಲಿಕೆಯ ಬಿಜೆಪಿ ಸದಸ್ಯರು ಸೇರಿದಂತೆ 250ಕ್ಕೂ ಅಧಿಕ ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.