ಹುಸಿ ಬಾಂಬ್ ಆಗಲಿದೆ ಬಿಜೆಪಿಯ ಮಿಷನ್ 150: ಸಿದ್ದರಾಮಯ್ಯ
ನಂಜನಗೂಡು ಉಪಚುನಾವಣೆಗೆ ಪ್ರಚಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯ ಮಿಷನ್ 150 ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹುಸಿ ಬಾಂಬ್ ಆಗಲಿದೆ ಎಂದು ವ್ಯಂಗ್ಯವಾಡಿದ್ದಾರೆ.
ಮೈಸೂರು, ಏಪ್ರಿಲ್ 7: ಬಿಜೆಪಿಯ ಮಿಷನ್ 150 ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹುಸಿ ಬಾಂಬ್ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಏಪ್ರಿಲ್ 9 ರಂದು ನಡೆಯಲಿರುವ ನಂಜನಗೂಡು ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಪರ ರೋಡ್ ಶೋ ನಡೆಸಿ, ಮತ ಯಾಚಿಸಿದ ಅವರು, ಕಾರ್ಯಕರ್ತರ ಬೃಹತ್ ಸಭೆ ಉದ್ದೇಶಿಸಿ ಮಾತನಾಡಿದರು.
'ನಮ್ಮದು ಮಿಷನ್ 150, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ನಾನು ಮುಖ್ಯಮಂತ್ರಿ ಆಗುತ್ತೇನೆ' ಎಂಬ ಯಡಿಯೂರಪ್ಪ ಅವರ ಮಾತುಗಳೆಲ್ಲ ಹುಸಿಯಾಗಲಿವೆ. 2018ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಸರ್ಕಾರದ ಕಾರ್ಯಕ್ರಮಗಳನ್ನು ಮೆಚ್ಚಿರುವ ಜನತೆ ನಮಗೇ ಆಶಿರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.[ಉಪಚುನಾವಣೆ ದಿಕ್ಸೂಚಿ ಚುನಾವಣೆಯಲ್ಲ - ಸಿದ್ದರಾಮಯ್ಯ]

"ಸಬ್ ಕಾ ಸಾಥ್, ಸಬ್ ಕಾ ವಿಕಾಸ್" ಎನ್ನುವ ಬಿಜೆಪಿಯವರು ಉತ್ತರ ಪ್ರದೇಶದಲ್ಲಿ ಅಲ್ಪಸಂಖ್ಯಾತರಿಗೆ ಒಂದೇ ಒಂದು ಟಿಕೆಟ್ ಕೊಡಲಿಲ್ಲ. ಈ ಕುರಿತು ವಿಧಾನ ಪರಿಷತ್ತಿನಲ್ಲಿ ನಮ್ಮ ಸದಸ್ಯರೊಬ್ಬರು ಈಶ್ವರಪ್ಪ ಅವರನ್ನು ಪ್ರಶ್ನಿಸಿದರೆ "ನೋ ವೋಟ್, ನೋ ಸೀಟ್" ಎಂದು ಉತ್ತರಿಸಿದರು. ಅಲ್ಪಸಂಖ್ಯಾತರನ್ನು ಹೊರಗಿಡುವುದಾದರೆ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಹೇಗೆ ಆಗುತ್ತದೆ? ಎಂದು ಪ್ರಶ್ನಿಸಿದರು.[ಯಡ್ಡಿಯೂರಪ್ಪನವರದ್ದು ಉತ್ತರ ಕುಮಾರನ ಪೌರುಷ: ಉಗ್ರಪ್ಪ]
ಜನರ ತೆರಿಗೆ ಹಣದಲ್ಲಿ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ನಡೆಸುತ್ತಿದೆ ಎಂದು ಯಡಿಯೂರಪ್ಪ ಆರೋಪಿಸಿದ್ದಾರೆ. ಹೌದು, ರಾಜ್ಯದ ಆರೂವರೆ ಕೋಟಿ ಜನರ ದುಡ್ಡು ಅದಾಗಿದೆ. ಸಾರ್ವಜನಿಕರ ತೆರಿಗೆ ಹಣವನ್ನು ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಹೇಗೆ ಖರ್ಚು ಮಾಡಬೇಕು ಎಂಬುದು ನಮಗೂ ತಿಳಿದಿದೆ. ಆ ಬಗ್ಗೆ ಬಿಜೆಪಿಯವರಿಂದ ಪಾಠ ಕಲಿಯುವ ಅಗತ್ಯ ನಮಗಿಲ್ಲ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದರು.
ಭ್ರಷ್ಟಾಚಾರಕ್ಕೆ ನಾಂದಿ ಹಾಡಿದ್ದೇ ಯಡಿಯೂರಪ್ಪ
ರಾಜ್ಯದಲ್ಲಿ ಭ್ರಷ್ಟಾಚಾರಕ್ಕೆ ನಾಂದಿ ಹಾಡಿದ್ದೇ ಯಡಿಯೂರಪ್ಪ. ಅವರು ಮುಖ್ಯಮಂತ್ರಿಯಾಗಿದ್ದಾಗ ಆಪರೇಷನ್ ಕಮಲದ ಮೂಲಕ ಎಂಟು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುವಂತೆ ಮಾಡಿದರು. ಅಷ್ಟೇ ಅಲ್ಲ, ಚುನಾವಣೆ ಗೆಲ್ಲಲು ಪ್ರತಿ ಕ್ಷೇತ್ರಕ್ಕೆ 25 ಕೋಟಿ ರೂ. ಖರ್ಚು ಮಾಡಿದರು. ಈಗ ಅವರು ಚುನಾವಣಾ ಅಕ್ರಮದ ಬಗ್ಗೆ ಮಾತನಾಡುತ್ತಿರುವುದನ್ನು ಕೇಳಿದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ ಆಗುತ್ತದೆ ಎಂದರು.[ಈ ಬಾರಿ ಗೆಲುವು ನನ್ನದೇ ಬರೆದಿಟ್ಟುಕೊಳ್ಳಿ : ಕಳಲೆ ವಿಶ್ವಾಸ]
ರೈತರ ಸಾಲ ಮನ್ನಾ ಕುರಿತು ಈಗ ಮಾತನಾಡುತ್ತಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿಯವರ ಬಳಿಗೆ ಹೋದಾಗ ಬಾಯಿಗೆ ಬೀಗ ಹಾಕಿಕೊಂಡಿದ್ದು ಏಕೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿಯವರ ಕಚೇರಿಗೆ ಹೋಗಿದ್ದಾಗ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಅವರು ಬಾಯಿಯನ್ನೇ ಬಿಡಲಿಲ್ಲ. ಈಗ ಅವರು ಸಾಲ ಮನ್ನಾ ಕುರಿತು ಮಾತನಾಡುತ್ತಿರುವುದು ನಾಚಿಕೆಗೇಡು ಎಂದು ಸಿಎಂ ವ್ಯಂಗ್ಯವಾಡಿದರು.
ಉಪಚುನಾವಣೆಗೆ ಇನ್ನೆರಡೇ ದಿನ ಬಾಕಿ ಉಳಿಸಿದ್ದು, ಏಪ್ರಿಲ್ 13 ರಂದು ಫಲಿತಾಂಶ ಹೊರಬೀಳಲಿದೆ.












Click it and Unblock the Notifications