ಸಿದ್ದು ವಿರುದ್ಧ ಮೈಸೂರಿನಲ್ಲಿ ಬಿಜೆಪಿ ಆಕ್ರೋಶದ ಕಿಡಿ
ಮೈಸೂರು, ಫೆಬ್ರವರಿ 20 : ಸಿದ್ದರಾಮಯ್ಯ ಸರಕಾರ ಭ್ರಷ್ಟಾಚಾರದಿಂದ ಇನ್ನೂ ಮುಕ್ತವಾಗಿಲ್ಲ, ಬಹುತೇಕ ಪ್ರಕರಣಗಳು ಗಂಭೀರವಾಗಿದ್ದರೂ ಸಿದ್ದರಾಮಯ್ಯನವರು ತೀರ ಹಗುರಾಗಿ ಪರಿಗಣಿಸುತ್ತಾರೆ ಎಂದು ಭಾರತೀಯ ಜನತಾ ಪಕ್ಷ ಕಾಂಗ್ರೆಸ್ ಮೇಲೆ ವಾಗ್ದಾಳಿ ಮಾಡಿದೆ.
ಮೈಸೂರಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ಸಾರ್ವಜನಿಕರ ಮುಂದೆ ಬಿಚ್ಚಿಡುವ ಉದ್ದೇಶದಿಂದ ಸೋಮವಾರ ಬಿಜೆಪಿ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದರು. ರಾಜ್ಯಾದ್ಯಂತ ಎಲ್ಲಾ ಮಂಡಲ ಹಾಗೂ ಜಿಲ್ಲಾ ಮಟ್ಟದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವ ಬದಲು ಬಿಜೆಪಿ ಆರೋಪಗಳನ್ನು ನಿರಾಕರಿಸುತ್ತಲೇ ಕಾಲಹರಣ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಆರೋಪಗಳನ್ನು ತೀರಾ ಹಗುರವಾಗಿ ಕಾಣುತ್ತಿದ್ದಾರೆ. ಇದರಿಂದಾಗಿ ಅನಾಚಾರ ಇನ್ನಷ್ಟು ಜಾಸ್ತಿಯಾಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು.
ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂದು ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಕಳೆದ ಮೂರು ವರ್ಷಗಳಲ್ಲಿ ಭ್ರಷ್ಟಾಚಾರ ಹಾಗೂ ಹಗರಣಗಳ ಸರಮಾಲೆಯನ್ನೇ ನೀಡಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೂತ್ವದ ಆಧಾರದ ಮೇಲೆ ಕೆಲಸ ಮಾಡುವವರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿ ಭ್ರಷ್ಟಾಚಾರ, ಹಗರಣಗಳ ಮುಕ್ತ, ಪಾರದರ್ಶಕ ಆಡಳಿತ ನೀಡುತ್ತೇವೆ ಎಂದು ಆಶ್ವಾಸನೆ ನೀಡಿದ್ದ ಸಿದ್ದರಾಮಯ್ಯನವರೇ ನೀವು ಮೈಸೂರು ಭಾಗಕ್ಕೆ ಯಾವ ಅಭಿವೃದ್ಧಿ ಯೋಜನೆಗಳನ್ನು ನೀಡಿದ್ದೀರಿ? ಎಂದು ಪ್ರಶ್ನಿಸಿದರು. ಭ್ರಷ್ಟಾಚಾರ ಹಾಗೂ ಸಾವಿರಾರು ಕೋಟಿ ಹಗರಣಗಳನ್ನು ಬಯಲಿಗೆಳೆಯಲು ನ್ಯಾಯಾಂಗ ಆಯೋಗ ರಚಿಸಿ ಎಂದು ಒತ್ತಾಯಿಸಿದರು.
ಸಚಿವ ರಮೇಶ್ ಜಾರಕಿ ಹೊಳಿ ಅವರನ್ನು ಸಂಪುಟದಿಂದ ತಕ್ಷಣ ವಜಾ ಮಾಡಿ, ಮೇಲ್ನೋಟಕ್ಕೆ ಹಣಕಾಸು ಅಕ್ರಮಗಳನ್ನು ಎಸಗಿರುವುದು ಸಾಬೀತಾಗಿರುವುದರಿಂದ ಇಬ್ಬರು ಕಾಂಗ್ರೆಸ್ ಶಾಸಕರಿಗೆ ನೋಟೀಸ್ ಜಾರಿ ಮಾಡಿ ಅವರನ್ನು ಶಾಸಕಾಂಗ ಪಕ್ಷದಿಂದ ಅಮಾನತುಗೊಳಿಸಿ. ಎಲ್ಲ ಪ್ರಕರಣಗಳ ಕುರಿತು ನಿಷ್ಪಕ್ಷಪಾತ ತನಿಖೆಗೆ ಆದೇಶಿಸಿ ಪ್ರಕರಣಗಳಿಗೆ ತಾತ್ವಿಕ ಅಂತ್ಯ ಕಾಣಿಸಿ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಸೇರಿದಂತೆ, ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಹೆಚ್.ಮಂಜುನಾಥ್, ಮಾಜಿ ಸಚಿವ ಎಸ್.ಎ.ರಾಮದಾಸ್ ,ಮಾಜಿ ಸಚಿವ ತೋಂಟದಾರ್ಯ, ಮಾಜಿ ಮುಡಾ ಅಧ್ಯಕ್ಷ ಎಲ್.ನಾಗೇಂದ್ರ, ಮಾರುತಿ ರಾವ್ ಪವಾರ್, ಮೈಸೂರು ನಗರ ಪ್ರಧಾನ ಕಾರ್ಯದರ್ಶಿ ಮೈ.ಪ.ಪ್ರಕಾಶ್, ಸತೀಶ್ ಸೇರಿದಂತೆ 500ಕ್ಕೂ ಅಧಿಕ ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.