ಮಾಗಳಿ ರವಿ ಸಾವು ಖಂಡಿಸಿ ಮೈಸೂರಲ್ಲಿ ಬೃಹತ್ ಪ್ರತಿಭಟನೆ
ಮೈಸೂರು, ನವೆಂಬರ್, 7: ಬಿಜೆಪಿ ಕಾರ್ಯಕರ್ತ ಮಾಗಳಿ ರವಿ ಸಾವು ಖಂಡಿಸಿ ಭಾರತೀಯ ಜನತಾ ಪಕ್ಷದ ಮುಖಂಡರು ಸೋಮವಾರ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಭಾಗವಾಗಿ ಬಿಜೆಪಿ ಮುಖಂಡರು ಬೃಹತ್ ಜಾಥಾವನ್ನು ನಡೆಸಲು ಕೂಡ ಉದ್ದೇಶಿಸಿದ್ದರು ಆದರೆ ಪೊಲೀಸರು ಜಾಥಾಗೆ ಅನುಮತಿ ನಿರಾಕರಿಸಿದ್ದರಿಂದ ಪೊಲೀಸರು ಮತ್ತು ಬಿಜೆಪಿ ನಾಯಕರ ನಡುವೆ ಮಾತಿನ ಚಕಮಕಿಯೂ ಸಹ ನಡೆಯಿತು.

ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕರಾಂದ್ಲಾಜೆ ಮತ್ತು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಅವರ ನೇತೃತ್ವದ್ಲಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಬಿಜೆಪಿ ನಾಯಕರು ಇಲ್ಲಿಯ ಕೋಟೆ ಆಂಜನೇಯ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜಾಥಾ ನಡೆಸಿ ಜಿಲ್ಲಾಧಿಕಾರಿಗೆ ಪತ್ರ ಸಲ್ಲಿಸಲು ಉದ್ದೇಶಿಸಿದ್ದರು. ಆದರೆ ಪೊಲೀಸರು ಕಾರ್ಯಕರ್ತರನ್ನು ತಡೆದಿದ್ದರಿಂದ ಸಂಸದ ಪ್ರತಾಪ್ ಸಿಂಹ ಅವರು ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಾಜಿ ಸಚಿ ರಾಮದಾಸ್ ಅವರನ್ನೂ ಸಹ ಪೊಲೀಸರು ತಡೆದು ಜಾಥಾ ನಡೆಸದಂತೆ ಸೂಚಿಸಿದರು. ಪೊಲೀಸರು ಅನುಮತಿ ನಿರಾಕರಿಸಿದ್ದನ್ನು ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಘೋಷಣೆ ಕೂಡಿ ಪ್ರತಿಭಟಿಸಿದರು.
ಪ್ರತಿಭಟನೆಯಲ್ಲಿ ಟಿಪ್ಪು ಜಯಂತಿ ವಿರುದ್ಧವೂ ಸಹ ಘೋಷಣೆಗಳನ್ನು ಕೂಗಿ ಬಿಜೆಪಿ ಕಾರ್ಯಕರ್ತರು ಜಯಂತಿಗೆ ವಿರೋಧ ವ್ಯಕ್ತಪಡಿಸಿದರು.

ಟಿಪ್ಪು ಜಯಂತಿ ವಿರೋಧಿಸಿದ್ದಕ್ಕೆ ಈ ವರ್ಷ ರವಿ ಮೊದಲ ಬಲಿಯಾಗಿದ್ದಾರೆ ಎಂದು ಆರೋಪಿಸಿದ ಬಿಜೆಪಿ ನಾಯಕರು ಇನ್ನೆಷ್ಟು ಬಲಿಗಾಗಿ ಸರ್ಕಾರ ಕಾದಿದೆ. ಕೂಡಲೇ ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸಬೇಕು ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಶುಕ್ರವಾರ ಮೈಸೂರಿನಲ್ಲಿ ನಡೆದ ಸಭೆಯೊಂದರಲ್ಲಿ ಭಾಗವಹಿಸಿ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಮಾರ್ಗ ಮಧ್ಯೆ ರವಿ ಅನುಮಾನಸ್ಪಾದವಾಗಿ ಸಾವಿಗೀಡಾಗಿದ್ದರು.
ಕಳೆದ ಎರಡು ವರ್ಷಗಳಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರ ಹತ್ಯೆ ಖಂಡಿಸಿ ಮತ್ತು ಟಿಪ್ಪು ಜಯಂತಿ ವಿರೋಧಿಸಿ (ಮಂಗಳವಾರ) ನ. 8ರಂದು ರಾಜ್ಯದಾದ್ಯಂತ ಬಿಜೆಪಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ.












Click it and Unblock the Notifications