ಶುಕ್ರವಾರ ಖಾಸಗಿ ಆಸ್ಪತ್ರೆಗೆ ಹೋಗುವ ಮುನ್ನ ಎಚ್ಚರ
ಮೈಸೂರು, ಡಿಸೆಂಬರ್ 09: ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಖಾಸಗಿ ಆಸ್ಪತ್ರೆಗಳ ಹೊರ ರೋಗಿ ವಿಭಾಗ ಶುಕ್ರವಾರ ಬಂದ್ ಆಗಲಿದೆ. ತುರ್ತು ಚಿಕಿತ್ಸೆಗಳನ್ನು ಮಾತ್ರ ಖಾಸಗಿ ಆಸ್ಪತ್ರೆಯಲ್ಲಿ ನೀಡಲಾಗುತ್ತದೆ.
ಮೈಸೂರು ನಗರದಲ್ಲಿ ಬುಧವಾರದಿಂದಲೇ ವೈದ್ಯರು ಕಪ್ಪುಪಟ್ಟಿ ಧರಿಸಿ ಕೆಲಸ ಮಾಡುವ ಮೂಲಕ ಮುಷ್ಕರ ಆರಂಭಿಸಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮೈಸೂರು ಭಾರತೀಯ ವೈದ್ಯಕೀಯ ಸಂಘದ ಸದಸ್ಯರು ಈ ಕುರಿತು ಮಾಹಿತಿ ನೀಡಿದರು.
ಕೇಂದ್ರ ಸರ್ಕಾರ ಅಲೋಪತಿ ಮತ್ತು ಆಯುರ್ವೇದ ಪದ್ಧತಿಯನ್ನು ವಿಲೀನ ಮಾಡಿದೆ. ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆಯನ್ನು ಮಾಡಲು ಅನುಮತಿ ನೀಡಿದೆ. ಇದಕ್ಕೆ ಐಎಂಎ ಸದಸ್ಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಭಾರತೀಯ ವೈದ್ಯಕೀಯ ಸಂಘ (ಐಎಂಎ) ಇದನ್ನು ವಿರೋಧಿಸಿ ಮುಷ್ಕರಕ್ಕೆ ಕರೆ ನೀಡಿದೆ. ಇದರ ಅಂಗವಾಗಿ ಬುಧವಾರ ಮತ್ತು ಗುರುವಾರ ವೈದ್ಯರು ಕಪ್ಪುಪಟ್ಟಿ ಧರಿಸಿ ಕೆಲಸ ಮಾಡಲಿದ್ದಾರೆ. ಶುಕ್ರವಾರ ಓಪಿಡಿ ಬಂದ್ ಮಾಡಲಿದ್ದಾರೆ.
"ಬುಧವಾರ ಮೈಸೂರು ನಗರ, ಗ್ರಾಮಾಂತರ ಪ್ರದೇಶದಲ್ಲಿರುವ ವೈದ್ಯರು ಕಪ್ಪುಪಟ್ಟಿ ಧರಿಸಿ ಕೆಲಸ ನಿರ್ವಹಿಸುತ್ತೇವೆ. ಗುರುವಾರ ಜೆಕೆ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದೇವೆ. ಶುಕ್ರವಾರ ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲಾ ಸೇವೆಗಳು ಬಂದ್" ಆಗಲಿದೆ ಎಂದು ಐಎಂಎ ಅಧ್ಯಕ್ಷ ಡಾ. ಬಿ. ಎನ್ ಆನಂದ ರವಿ ಹೇಳಿದರು.
ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆಯನ್ನು ಮಾಡಲು ಅವಕಾಶ ನೀಡಿರುವುದು ಡ್ರೈವರ್ ವಿಮಾನ ಓಡಿಸಿದಂತೆ. ಇದರಿಂದ ಆಗುವ ಅನಾಹುತಗಳನ್ನು ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕು. ತಕ್ಷಣ ಈ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಲಾಗಿದೆ.












Click it and Unblock the Notifications