ಯಾರನ್ನೂ ನಂಬಲು ಆಗುತ್ತಿಲ್ಲ: ಡಿ.ಕೆ.ಶಿವಕುಮಾರ್
ಬೆಂಗಳೂರು, ಮಾರ್ಚ್ 01: ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ನನ್ನ ನೆರಳನ್ನೇ ನಾನು ನಂಬಲು ಆಗುತ್ತಿಲ್ಲ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಮಾರ್ಮಿಕವಾಗಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, 20-30 ವರ್ಷ ರಾಜಕೀಯದಲ್ಲಿದ್ದವರೇ ಪಕ್ಷ ಬಿಟ್ಟು ಬೇರೆ ಪಕ್ಷ ಸೇರುತ್ತಿದ್ದಾರೆ, ಯಾರನ್ನು ನಂಬುವುದು, ಯಾರನ್ನು ಬಿಡುವುದು ಗೊತ್ತಾಗುತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
'ಮೈಸೂರು ರಾಜಕೀಯ ನಾಯಕರನ್ನೇ ನೋಡಿ, ಹಿಂದೆ ಅವರು ಹೇಗೆ ಮಾತನಾಡುತ್ತಿದ್ದರು, ಈಗ ಹೇಗೆ ಮಾತನಾಡುತ್ತಿದ್ದಾರೆ ಗಮನಿಸಿ' ಎಂದು ಜಿ.ಟಿ.ದೇವೇಗೌಡ, ಎಚ್.ವಿಶ್ವನಾಥ್ ಹೆಸರು ಹೇಳದೆ ಡಿ.ಕೆ.ಶಿವಕುಮಾರ್ ಹೇಳಿದರು.

ಬಿಜೆಪಿ ಬಗ್ಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಹೊಸಬರು ಆಡಳಿತ ನಡೆಸುತ್ತಿದ್ದಾರೆ, ಅರ್ಹರಾಗಿದ್ದ ಹಳಬರು ನಿಂತು ನೋಡುತ್ತಿದ್ದಾರೆ, ಮತ್ತೆ ಸಂಪುಟ ಪುನರ್ರಚನೆ ಆಗುತ್ತದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಹಿರಿಯ ಗುಲಾಂ ನಬಿ ಆಜಾದ್ ಅವರನ್ನು ಭೇಟಿಯಾದ ಬಗ್ಗೆ ಮಾತನಾಡಿದ ಅವರು, ನಾನೊಬ್ಬ ಕಾಂಗ್ರೆಸ್ ಕಾರ್ಯಕರ್ತ, ಕೆಪಿಸಿಸಿ ಅಧ್ಯಕ್ಷ ಆಯ್ಕೆ ತಡವಾಗುತ್ತಿರುವುದಕ್ಕೆ ಕಾರಣ ಗೊತ್ತಿಲ್ಲ, ನನಗೂ ಅದಕ್ಕೂ ಸಂಬಂಧವಿಲ್ಲ ಎಂದರು.
ಕೆಪಿಸಿಸಿ ಅಧ್ಯಕ್ಷ ಆಯ್ಕೆ ವಿಚಾರವಾಗಿ ನೀವು ಪ್ರಸ್ತುತ ಕೆಪಿಸಿಸಿ ಅಧ್ಯಕ್ಷ, ವಿರೋಧ ಪಕ್ಷ ನಾಯಕರನ್ನು ಕೇಳಿ ಎಂದು ಅಸಮಾಧಾನ ಹೊರಹಾಕಿದರು. ಮುಂದುವರೆದು, ಇಲ್ಲಿ ಮೂಲ ಕಾಂಗ್ರೆಸ್ಸಿಗ, ವಲಸಿಗ ಎಂಬುದೆಲ್ಲಾ ಇಲ್ಲ, ಇಲ್ಲಿ ಯಾರೂ ಹೊಸಬ-ಹಳಬ ಎಂದು ಬೋರ್ಡ್ ಹಾಕಿಕೊಂಡಿಲ್ಲ ಎಂದು ಸಿಟ್ಟಿನಿಂದಲೇ ಹೇಳಿದರು.











Click it and Unblock the Notifications