ಪರಿಷತ್ ಚುನಾವಣೆ: ಮೈಸೂರಿನಿಂದ ಕಣಕ್ಕಿಳಿದ ಮೂರು ಪಕ್ಷಗಳ ಅಭ್ಯರ್ಥಿಗಳಿವರು!
ಮೈಸೂರು, ನವೆಂಬರ್ 23: ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಗೆ ಕಾರಣವಾಗಿರುವ ವಿಧಾನ ಪರಿಷತ್ ಕದನಕ್ಕೆ ದಿನಗಣನೆ ಶುರುವಾಗಿದ್ದು, ಮೇಲ್ಮನೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು (ಮಂಗಳವಾರ) ಕೊನೆ ದಿನವಾಗಿದ್ದು, ಮೂರು ರಾಜಕೀಯ ಪಕ್ಷದ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.
ಮೈಸೂರು ಕ್ಷೇತ್ರದಿಂದ ಪರಿಷತ್ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ, ಕಾಂಗ್ರೆಸ್ ಅಭ್ಯರ್ಥಿ ಡಾ.ಡಿ. ತಿಮ್ಮಯ್ಯ ಹಾಗೂ ಕೊನೆ ಕ್ಷಣದಲ್ಲಿ ಜೆಡಿಎಸ್ನಿಂದ ಕಣಕ್ಕಿಳಿಯುವ ಅವಕಾಶ ಪಡೆದಿರುವ ಸಿ.ಎನ್. ಮಂಜೇಗೌಡ ಮಂಗಳವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಕಣಕ್ಕೆ
ಈ ನಡುವೆ ರಾಜಕೀಯ ಪಕ್ಷದ ಅಭ್ಯರ್ಥಿಗಳ ಜೊತೆಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿರುವ ಕನ್ನಡ ಚಳವಳಿ ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಕೂಡ ನಾಮಪತ್ರ ಸಲ್ಲಿಸಲಿದ್ದಾರೆ. ಈಗಾಗಲೇ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿರುವ ವಾಟಾಳ್ ನಾಗರಾಜ್, ತಮ್ಮ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಕಣದಿಂದ ಹಿಂದೆ ಸರಿದ ಸಂದೇಶ್ ನಾಗರಾಜ್
ಇನ್ನು ಜೆಡಿಎಸ್ ಪಕ್ಷದಿಂದ ಹೊರ ಬಂದು ಬಿಜೆಪಿ ಸೇರುವುದಾಗಿ ಘೋಷಿಸಿದ್ದ ಹಾಗೂ ನಂತರದಲ್ಲಿ ಬಿಜೆಪಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಜೆಡಿಎಸ್ ಟಿಕೆಟ್ ಪಡೆಯಲು ಕೊನೆ ಕ್ಷಣದವರೆಗೂ ಕಸರತ್ತು ನಡೆಸಿದ್ದ ಸಂದೇಶ್ ನಾಗರಾಜ್, ವಿಧಾನ ಪರಿಷತ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಹಾಲಿ ಜೆಡಿಎಸ್ ಎಂಎಲ್ಸಿ ಆಗಿರುವ ಸಂದೇಶ್ ನಾಗರಾಜ್, ಬಿಜೆಪಿ ಸೇರ್ಪಡೆಗೊಂಡು ಚುನಾವಣೆ ಸ್ಪರ್ಧಿಸಲು ಮುಂದಾಗಿದ್ದರು.
ಆದರೆ ವಯೋಮಿತಿ ಕಾರಣಕ್ಕೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಟಿಕೆಟ್ಗಾಗಿ ಅಂತಿಮ ಕ್ಷಣದಲ್ಲಿ ಜೆಡಿಎಸ್ ಕದ ತಟ್ಟಿದ್ದ ಸಂದೇಶ್ ನಾಗರಾಜ್ಗೆ ಜೆಡಿಎಸ್ನಲ್ಲೂ ಟಿಕೆಟ್ ಸಿಗಲಿಲ್ಲ. ಹೀಗಾಗಿ ಅಂತಿಮವಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ ಎಂಬ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿರುವ ಅವರು, ಇಷ್ಟು ವರ್ಷಗಳ ಕಾಲ ತಮಗೆ ಮತ ನೀಡಿದ ಮತದಾರರು, ಬಿಜೆಪಿ ನಾಯಕರು ಹಾಗೂ ಜೆಡಿಎಸ್ ವರಿಷ್ಠರಿಗೆ ಕೃತಜ್ಞತೆ ಸಲ್ಲಿಸಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
ಟಿಕೆಟ್ ನೀಡಲು ಕಾರ್ಯಕರ್ತರ ವಿರೋಧ
ಮೈಸೂರು ಕ್ಷೇತ್ರದಿಂದ ವಿಧಾನ ಪರಿಷತ್ ಟಿಕೆಟ್ ಪಡೆಯಲು ಕೊನೆ ಕ್ಷಣದಲ್ಲಿ ಜೆಡಿಎಸ್ ಬಾಗಿಲು ಬಡಿದಿದ್ದ ಸಂದೇಶ್ ನಾಗರಾಜ್ ಅವರಿಗೆ ಟಿಕೆಟ್ ಸಿಗದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, "ಸಂದೇಶ್ ನಾಗರಾಜ್ಗೆ ಟಿಕೆಟ್ ನೀಡಲು ಕಾರ್ಯಕರ್ತರ ತೀವ್ರ ವಿರೋಧವಿದೆ. ನಾನು ಕಾರ್ಯಕರ್ತರ ಅಭಿಪ್ರಾಯವನ್ನು ಗೌರವಿಸಬೇಕು. ಪಕ್ಷದಲ್ಲಿ ಹಲವು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದರು. ಆದರೆ ಪಕ್ಷದ ಕಾರ್ಯಕರ್ತರ ಹಾಗೂ ಶಾಸಕರ ಅಭಿಪ್ರಾಯ ಪಡೆದು ಪಟ್ಟಿ ಬಿಡುಗಡೆ ಮಾಡಲಾಗಿದೆ,'' ಎಂದು ಮಾಹಿತಿ ನೀಡಿದರು.
ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ?
ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ ಅನ್ನುತ್ತಲೇ ಮಿತಿ ನಿಗದಿ ಮಾಡಿಕೊಂಡಿರುವ ಜೆಡಿಎಸ್ ಕೇವಲ ಆರು ಕ್ಷೇತ್ರಗಳಲ್ಲಿ ಮಾತ್ರವೇ ಸ್ಪರ್ಧೆ ಮಾಡುತ್ತಿದ್ದು, ಅದರಂತೆ ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಸನ, ಕೋಲಾರ, ಮೈಸೂರು, ತುಮಕೂರು, ಹಾಸನ ಕ್ಷೇತ್ರಗಳಲ್ಲಿ ಸ್ಪರ್ಧಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಸೋಮವಾರ ರಾತ್ರಿ ಮಾತನಾಡಿರುವ ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಮೈಸೂರು- ಚಾಮರಾಜನಗರ ಕ್ಷೇತ್ರದಲ್ಲಿ ಗೆಲ್ಲಲೇಬೇಕು ಅಂತ ತೀರ್ಮಾನಿಸಿದ್ದೇವೆ. ಈ ನಿಟ್ಟಿನಲ್ಲಿ ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು
Recommended Video