ಮೈಸೂರಿನಲ್ಲಿ ಪೂರ್ವ ಸಿದ್ಧತೆಗಳೊಂದಿಗೆ 26 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ
ಮೈಸೂರು, ಜುಲೈ 29: ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆಯು ಜು.30 ಮತ್ತು 31ರಂದು, ಅಂದರೆ ನಾಳೆ ಮತ್ತು ನಾಡಿದ್ದು ನಡೆಯಲಿದ್ದು, ಮೈಸೂರು ಜಿಲ್ಲೆಯಲ್ಲಿ 26 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದರು. ವಾರ್ತಾ ಮತ್ತು ಪ್ರಚಾರ ಇಲಾಖೆ ಮೂಲಕ ನೇರ ಸಂದೇಶ ನೀಡುವ ಮೂಲಕ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಕುರಿತು ಮಾಹಿತಿ ನೀಡಿದರು.
ಮೈಸೂರು ಜಿಲ್ಲೆಯಲ್ಲಿ 26 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, 20 ಕೇಂದ್ರಗಳು ಮೈಸೂರು ನಗರದಲ್ಲಿ ಮತ್ತು 6 ತಾಲೂಕುವಾರು ಕೇಂದ್ರಗಳು ಇರಲಿವೆ. 10,368 ವಿದ್ಯಾರ್ಥಿಗಳು ಸಿಇಟಿ ಬರೆಯುತ್ತಿದ್ದಾರೆ. ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ 144 ಸಿಆರ್ ಪಿಸಿ ಅಡಿಯಲ್ಲಿ ಜೆರಾಕ್ಸ್ ಅಂಗಡಿ ಮುಚ್ಚಲು, ಗುಂಪು ಗೂಡುವುದನ್ನು ತಪ್ಪಿಸಲು ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಕೊಠಡಿಗಳನ್ನು ಸ್ಯಾನಿಸೈಟ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸ್ಯಾನಿಟೈಸ್ ಮತ್ತು ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಇದೆ ಎಂದು ತಿಳಿಸಿದರು.
2 ಗಂಟೆಗಳ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಬರಬೇಕು. ಮೂವರು ಕೊರೊನಾ ಸೋಂಕಿತ ವಿದ್ಯಾರ್ಥಿಗಳಿದ್ದು, ಅವರಿಗೆ ಮಂಡಕಳ್ಳಿಯಲ್ಲಿರುವ ಕೋವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಇಬ್ಬರು ವೈದ್ಯರು, ಪ್ರಾಂಶುಪಾಲರು, ಉಪನ್ಯಾಸಕರು ಇರಲಿದ್ದಾರೆ. ಅವರ ಉತ್ತರ ಪತ್ರಿಕೆಗಳನ್ನು ಪ್ರತ್ಯೇಕವಾಗಿಟ್ಟು ವಾರದ ನಂತರ ತೆರೆಯಲು ಸೂಚನೆ ನೀಡಲಾಗಿದೆ ಎಂದರು.

ಕೆಮ್ಮು, ನೆಗಡಿ, ಜ್ವರ, ಗಂಟಲು ಕೆರೆತದಿಂದ ಬಳಲುತ್ತಿರುವ ಅಥವಾ ಕಂಟೈನ್ ಮೆಂಟ್ ವಲಯದಿಂದ ಬರುವ ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿ ಕಾಯ್ದಿರಿಸಲಾಗಿದೆ. ಜಿಲ್ಲಾ ಪರೀಕ್ಷಾ ಕೇಂದ್ರದಲ್ಲಿ ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಆರೋಗ್ಯ ಇಲಾಖೆಯಿಂದ ಇಬ್ಬರು ಅರೆ ವೈದ್ಯಕೀಯ ಸಿಬ್ಬಂದಿ ಇರಲಿದ್ದಾರೆ ಎಂದು ಮಾಹಿತಿ ನೀಡಿದರು.












Click it and Unblock the Notifications