ಚಾಮುಂಡೇಶ್ವರಿ ವರ್ಧಂತಿ ಸಂಭ್ರಮ: ಚಿನ್ನದ ಪಲ್ಲಕ್ಕಿ ಉತ್ಸವ ಕಣ್ತುಂಬಿಕೊಂಡ ಭಕ್ತರು
ಮೈಸೂರು: ಚಾಮುಂಡಿಬೆಟ್ಟದಲ್ಲಿ ಶನಿವಾರ ತಾಯಿ ಚಾಮುಂಡೇಶ್ವರಿ ವರ್ಧಂತಿ ಸಂಭ್ರಮದಿಂದ ನಡೆಯಿತು. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ ಭಕ್ತರು ಚಿನ್ನದ ಪಲ್ಲಕ್ಕಿ ಉತ್ಸವವನ್ನು ಕಣ್ತುಂಬಿಕೊಂಡರು.
ಮೊದಲಿಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಉತ್ಸವ ಮೂರ್ತಿಯನ್ನು ಬೆಳ್ಳಿ ಪಲ್ಲಕ್ಕಿಯಲ್ಲಿ ಕೂರಿಸಿ ದೇವಸ್ಥಾನದ ಆವರಣದಲ್ಲಿ ಪ್ರದಕ್ಷಿಣೆ ಹಾಕಲಾಯಿತು. ಯದುವೀರ್, ಪ್ರಮೋದಾದೇವಿ ಒಡೆಯರ್, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಪಲ್ಲಕ್ಕಿಯನ್ನು ಎಳೆದು ಉತ್ಸವಕ್ಕೆ ಚಾಲನೆ ನೀಡಿದರು

ಮೆರವಣಿಗೆ ಸಾಗುತ್ತಿದ್ದಂತೆ ಸಹಸ್ರಾರು ಭಕ್ತರು ಜೈ ದುರ್ಗೆ, ಜೈ ಚಾಮುಂಡೇಶ್ವರಿ ಎಂಬ ಘೋಷಣೆಗಳನ್ನು ಕೂಗಿದರು. ಪೊಲೀಸ್ ಬ್ಯಾಂಡ್, ಮಂಗಳವಾದ್ಯ ಸೇರಿದಂತೆ ಛತ್ರಿ, ಚಾಮರಗಳೊಂದಿಗೆ ಉತ್ಸವ ಯಶಸ್ವಿಯಾಗಿ ನಡೆಯಿತು. ಉತ್ಸವದ ವೇಳೆ ಯಾವುದೇ ಅಹಿತಕರ ಘಟನೆ ನಡೆುಂದಂತೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು.
ವಿಶೇಷ ಅಲಂಕಾರ
ಚಾಮುಂಡಿ ತಾಯಿ ವರ್ಧಂತಿ ಉತ್ಸವದ ಹಿನ್ನಲೆಯಲ್ಲಿ ದೇವಸ್ಥಾನದ ಒಳಾವರಣವನ್ನು ಗುಲಾಬಿ, ಸೇವಂತಿಗೆ, ಚೆಂಡು ಹೂ ಸೇರಿದಂತೆ ಬಗೆ ಬಗೆಯ ಹೂಗಳಿಂದ ವಿಶೇಷವಾಗಿ ಅಲಂಕಾರ ವಾಡಲಾಗಿತ್ತು. ದೇವಾಲಯದ ಗರ್ಭಗುಡಿ, ಪ್ರವೇಶದ್ವಾರ, ಹೊರಭಾಗವನ್ನೂ ವಿಶೇಷವಾಗಿ ಅಲಂಕರಿಸಲಾಗಿತ್ತು. ಬೆಳಗ್ಗೆ 4 ಗಂಟೆಯಿಂದ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾದವು.
ತಾಯಿಯ ವರ್ಧಂತಿ ಉತ್ಸವದ ವಿಶೇಷ ದಿನವಾದ್ದರಿಂದ ಮೊದಲು ಅಮ್ಮನಿಗೆ ಅಭ್ಯಂಜನ ಸ್ನಾನ ವಾಡಿಸಿ, ಬಳಿಕ ಅಲಂಕಾರ ವಾಡಿ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು.
ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ ನಗರದ ವಿವಿಧ ದೇಗುಲಗಳಲ್ಲಿ ಶನಿವಾರ ವಿಶೇಷ ಪೂಜೆಗಳು ನಡೆದವು. ವಿವಿಧೆಡೆ ಭಕ್ತರಿಂದ ಪ್ರಸಾದ ವಿನಿಯೋಗ ನಡೆಯಿತು. ನಗರದ ಬಸ್ ನಿಲ್ದಾಣ, ಅಗ್ರಹಾರ ವೃತ್ತ, ಚಾಮುಂಡಿಪುರಂ, ಕೆ.ಜಿ. ಕೊಪ್ಪಲು, ಚಾಮರಾಜ ಮೊಹಲ್ಲಾ, ವಿದ್ಯಾರಣ್ಯಪುರಂ, ಕುವೆಂಪುನಗರ, ಕಲ್ಯಾಣಗಿರಿ, ದಟ್ಟಗಳ್ಳಿ, ಜೆ.ಪಿ. ನಗರ, ಶಾರದಾದೇವಿ ನಗರ ಸೇರಿದಂತೆ ಅಲ್ಲಲ್ಲಿ ಪ್ರಸಾದ ವಿತರಣೆ ನಡೆಯಿತು.












Click it and Unblock the Notifications