ಇಂದಿನಿಂದ ಚಾಮುಂಡೇಶ್ವರಿ, ನಂಜನಗೂಡು ದೇಗುಲ ಜನರಿಗೆ ಮುಕ್ತ
ಮೈಸೂರು, ಸೆಪ್ಟೆಂಬರ್ 5: ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇಗುಲ ಮತ್ತು ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಯಮ ಸಡಿಲಿಕೆ ಮಾಡಿ ಮೈಸೂರು ಜಿಲ್ಲಾಧಿಕಾರಿ ಬಿ.ಶರತ್ ಆದೇಶ ಹೊರಡಿಸಿದ್ದಾರೆ.
ಇಂದಿನಿಂದ ಚಾಮುಂಡೇಶ್ವರಿ ಮತ್ತು ನಂಜನಗೂಡಿನ ನಂಜುಂಡೇಶ್ವರ ದೇವಾಲಯ ಎರಡು ದೇವಾಲಯಗಳಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ಭಾನುವಾರ ಹಾಗೂ ಸರ್ಕಾರಿ ರಜಾ ದಿನಗಳಂದು ಪ್ರವೇಶ ನಿರ್ಬಂಧ ಮುಂದುವರಿಯಲಿದೆ.
ಉಳಿದ ದಿನಗಳಂದು ದೇವರ ದರ್ಶನಕ್ಕೆ ಸಮಯ ನಿಗದಿ ಮಾಡಲಾಗಿದೆ. ಚಾಮುಂಡೇಶ್ವರಿ ದರ್ಶನಕ್ಕೆ ಸೋಮವಾರದಿಂದ ಗುರುವಾರದವರೆಗೆ ಬೆಳಗ್ಗೆ 7.30ರಿಂದ ಮಧ್ಯಾಹ್ನ 2 ಗಂಟೆ, ಮಧ್ಯಾಹ್ನ 3.30ರಿಂದ ಸಂಜೆ 6 ಗಂಟೆ, ರಾತ್ರಿ 7.30ರಿಂದ 8 ಗಂಟೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ ಶುಕ್ರವಾರ ಹಾಗೂ ಶನಿವಾರ ಬೆಳಗ್ಗೆ 7.30ರಿಂದ ಮಧ್ಯಾಹ್ನ 2 ಗಂಟೆ ಮಧ್ಯಾಹ್ನ 3.30ರಿಂದ 6 ಗಂಟೆವರೆಗೆ ಮಾತ್ರ ಪ್ರವೇಶ. ಶುಕ್ರವಾರ ಶನಿವಾರ ರಾತ್ರಿ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.

ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 6 ಗಂಟೆಯಿಂದ 1 ಗಂಟೆ, ಸಂಜೆ 4 ಗಂಟೆಯಿಂದ ರಾತ್ರಿ 8.30ರವೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು ಈ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ಬಿ ಶರತ್ ಆದೇಶ ಹೊರಡಿಸಿದ್ದಾರೆ.












Click it and Unblock the Notifications