ಮೈಸೂರಿನಲ್ಲಿ ಸಿಎಂ- ಎಚ್.ಸಿ. ಮಹದೇವಪ್ಪ ರಹಸ್ಯ ಮಾತುಕತೆ
ವಿ.ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರುವುದಾಗಿ ಅಧಿಕೃತ ಘೋಷಣೆ ಮಾಡಿದ ಬೆನ್ನಲ್ಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕೋಪಯೋಗಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರನ್ನ ಮೈಸೂರಿನಲ್ಲಿ ದಿಢೀರ್ ಭೇಟಿ ಮಾಡಿ ರಹಸ್ಯವಾಗಿ ಚರ್ಚೆ ನಡೆಸಿದ್ದಾರೆ.
ಮೈಸೂರು, ಡಿಸೆಂಬರ್ 24 : ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರುವುದಾಗಿ ಅಧಿಕೃತ ಘೋಷಣೆ ಮಾಡಿದ ಬೆನ್ನಲ್ಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕೋಪಯೋಗಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರನ್ನ ಮೈಸೂರಿನಲ್ಲಿ ದಿಢೀರ್ ಭೇಟಿ ಮಾಡಿ ರಹಸ್ಯವಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್, ಜನವರಿ 2 ರಂದು ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ ತಕ್ಷಣ ಸಿಎಂ ಸಿದ್ದರಾಮಯ್ಯ ಮಹದೇವಪ್ಪ ನಿವಾಸಕ್ಕೆ ತೆರಳಿ ಸುಮಾರು 20 ನಿಮಿಷ ಗುಪ್ತ ಮಾತುಕತೆ ನಡೆಸಿದ್ದಾರೆ. ಮುಂದಿನ ರಾಜಕೀಯ ನಡೆಗಳ ಬಗ್ಗೆ ಮಹದೇವಪ್ಪ ಅವರೊಂದಿಗೆ ಚರ್ಚಿಸಲಾಗಿದೆ, ಮೈಸೂರಿನಲ್ಲಿ ಚುನಾವಣೆ ಸಂಬಂಧ ಮಾತನಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.[ದಲಿತ ಸಮುದಾಯದ ಅಭಿವೃದ್ದಿಗೆ 19852 ಕೋಟಿ: ಸಿಎಂ]
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿರುವ ಸಿಎಂ ಸಿದ್ದರಾಮಯ್ಯ ಇಂದು ನಿಧನರಾದ ಹಿರಿಯ ನಟ ಚೇತನ್ ರಾಮ್ ಅವರ ಅಂತಿಮ ದರ್ಶನ ಪಡೆದರು. ಬಳಿಕ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರ್ಪಡೆ ಬಗ್ಗೆ ಪ್ರಕಟಿಸಿದ ನಂತರ ಕಾರಿನಲ್ಲಿ ವಿಜಯನಗರದಲ್ಲಿರುವ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅವರ ಮನೆಗೆ ತೆರಳಿ ಸಚಿವ ಮಹದೇವಪ್ಪ ಅವರ ಜೊತೆ ರಹಸ್ಯ ಮಾತುಕತೆ ನಡೆಸಿದ್ದಾರೆ.