ಐದು ವರ್ಷ ನಮ್ಮದೇ ಸರ್ಕಾರ; ಸಿಎಂ ಸಿದ್ದರಾಮಯ್ಯ
ಬಣ್ಣದ ಮಾತುಗಳಿಂದ ಜನರ ಹೊಟ್ಟೆ ತುಂಬಲ್ಲ, ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ, ಜನಪರ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇವೆ. ನಮ್ಮ ಯೋಜನೆಗಳಿಂದ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಪ್ರಯತ್ನ ಮಾಡಿದ್ದೇವೆ. ಜನ ನಮಗೆ ಆಶೀರ್ವಾದ ಮಾಡಿದ್ದು, ಐದು ವರ್ಷಗಳವರೆಗೆ ನಾವೇ ಆಡಳಿತ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗುರುವಾರ ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಚುನಾವಣೆ ವೇಳೆ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ನಾನು ಮತ್ತು ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದೆವು, ಜನ ನಮಗೆ ಆಶೀರ್ವಾದ ಮಾಡಿದರು, ನಾವು ಅಧಿಕಾರಕ್ಕೆ ಬಂದ ಎಂಟು ತಿಂಗಳಲ್ಲೇ ಎಲ್ಲಾ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ ಎಂದು ಹೇಳಿದರು.

ಪ್ರತಿ ಕುಟುಂಬಕ್ಕೆ 40-50 ಸಾವಿರ ಆರ್ಥಿಕ ನೆರವು
ನಾವು ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳು ಸಂವಿಧಾನದ ಆಶಯದಂತೆ ದುರ್ಬಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬುತ್ತಿವೆ. ಐದು ಗ್ಯಾರಂಟಿ ಯೋಜನೆಗಿಂದ ಪ್ರತಿ ಫಲಾನುಭವಿ ಕುಟುಂಬಕ್ಕೆ ವರ್ಷಕ್ಕೆ 40 ರಿಂದ 50 ಸಾವಿರ ರೂಪಾಯಿ ಆರ್ಥಿಕ ನೆರವು ದೊರೆಯುತ್ತಿದೆ ಎಂದರು.
ಗೃಹಲಕ್ಷ್ಮಿ ಯೋಜನೆಯಡಿ 1.21 ಕೋಟಿ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು 2000 ರೂಪಾಯಿ ಪಡೆಯುತ್ತಿದ್ದಾರೆ. 1.40 ಕುಟುಂಬಗಳು ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿವೆ. 1.82 ಲಕ್ಷ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾದಾರರು ಯುವ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಉತ್ತಮ ಮಳೆ
ರಾಜ್ಯದಲ್ಲಿ ಈ ವರ್ಷ ಉತ್ತಮ ಮಳೆಯಾಗಿದ್ದು, ರೈತರು ಸಂತೋಷದಿಂದ ಇದ್ದಾರೆ. 99% ರಷ್ಟು ಮುಂಗಾರು ಬಿತ್ತನೆಯಾಗಿದೆ. ಸಮೃದ್ಧಿಯಾಗಿ ಮಳೆಯಾಗಲಿ, ಉತ್ತಮ ಬೆಳೆ ಬೆಳೆದು, ಹಚ್ಚಿನ ಇಳುವರಿ ಸಿಗಲಿ ಎಂದು ತಾಯಿ ಚಾಮುಂಡೇಶ್ವರಿ ತಾಯಿಯನ್ನು ಪ್ರಾರ್ಥನೆ ಮಾಡುತ್ತೇನೆ ಎಂದರು.
ದಸರಾ ಜನರ ಹಬ್ಬವಾಗಬೇಕು
ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗುತ್ತಿರುವ ಕಾರಣ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಮಾಡಲು ಸೂಚನೆ ನೀಡಲಾಗಿತ್ತು. ದಸರಾ ಎನ್ನುವುದು ನಾಡಹಬ್ಬ, ಅದು ಜನರ ಹಬ್ಬವಾಗಬೇಕು, ದಸರಾ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನ ಭಾಗವಹಿಸಬೇಕು ಎಂದರು. ಹಂ.ಪ. ನಾಗರಾಜಯ್ಯ ಈ ಬಾರಿ ದಸರಾ ಮಹೋತ್ಸವವನ್ನು ಉದ್ಘಾಟಿಸಿದ್ದಾರೆ, ಕನ್ನಡ ಸಾಹಿತ್ಯ ಹಾಗೂ ಜೈನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ, ಅವರಿಗೆ ಮೊದಲೇ ಅವಕಾಶ ಸಿಗಬೇಕಿತ್ತು ಎಂದರು.
ಐದು ವರ್ಷ ನಮ್ಮದೇ ಆಡಳಿತ
ಜನರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ಆಡಳಿತ ನಡೆಸಲು ನಮಗೆ ಅವಕಾಶ ಕೊಟ್ಟಿದ್ದಾರೆ. ಎಷ್ಟೇ ತೊಡಕು ಬಂದರೂ ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ, ಐದು ವರ್ಷಗಳ ಕಾಲ ನಾವು ಆಡಳಿತ ನಡೆಸುತ್ತೇವೆ ಎಂದು ಹೇಳಿದರು.
ನಿಮ್ಮೆಲ್ಲರ ಆಶೀರ್ವಾದ, ಈ ರಾಜ್ಯದ ಜನರ ಆಶೀರ್ವಾದ ಈ ಸರ್ಕಾರದ ಮೇಲೆ ಇರುವ ತನಕ ಯಾರಿಗೂ ಏನೂ ಮಾಡಲು ಸಾಧ್ಯವಿಲ್ಲ. ಚಾಮುಂಡೇಶ್ವರಿ ತಾಯಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಇಲ್ಲಿಯವರೆಗೆ ಯಾವುದೇ ತಪ್ಪು ಮಾಡಿಲ್ಲ, ತಪ್ಪು ಮಾಡಿದರೆ ದೀರ್ಘಕಾಲದ ರಾಜಕಾರಣದಲ್ಲಿ ಇರಲು ಸಾಧ್ಯವಿಲ್ಲ ಎಂದರು.
ನ್ಯಾಯಾಲಯದ ಮೇಲೆ ನನಗೆ ನಂಬಿಕೆಯಿದೆ. ಗಾಂಧೀಜಿ ಅವರು ಹೇಳಿದಂತೆ ಆತ್ಮಸಾಕ್ಷಿ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದುದು. ಆತ್ಮಸಾಕ್ಷಿಗೆ ತಕ್ಕಂತೆ ನಡೆದಿದ್ದೇನೆ ಎನ್ನುವ ನಂಬಿಕೆ ಇದೆ ಎಂದರು.












Click it and Unblock the Notifications