Mysuru Dasara: ಅದ್ದೂರಿ ದೀಪಾಲಂಕಾರಕ್ಕೆ ಮನಸೋತ ಸಿಎಂ ಸಿದ್ದರಾಮಯ್ಯ
ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣಗೆ ಆರಂಭವಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗುತ್ತಿದೆ. ದಸರಾ ಅಂಗವಾಗಿ ಈ ಬಾರಿ ವಿಶೇಷವಾಗಿ ನಗರದ ತುಂಬೆಲ್ಲಾ ವಿದ್ಯುತ್ ದೀಪಾಲಂಕಾರ ಮಾಡಿದ್ದು, ಶುಕ್ರವಾರ ರಾತ್ರಿ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯಮೈಸೂರು ಸುತ್ತಾಡಿ, ದೀಪಾಲಂಕಾರವನ್ನು ಕಣ್ತುಂಬಿಕೊಂಡಿದ್ದಾರೆ.
ಇಂಧನ ಸಚಿವ ಕೆ.ಜೆ. ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ ಸುಧಾಕರ್, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷ ಎ.ಬಿ. ರಮೇಶ್ ಬಂಡಿಸಿದ್ದೇಗೌಡ, ಮುಡಾ ಅಧ್ಯಕ್ಷ ಮರಿಗೌಡ ಸೇರಿದಂತೆ ಇತರ ಶಾಸಕರು, ಅಧಿಕಾರಿಗಳ ಜೊತೆ ಅಂಬಾರಿ ಬಸ್ ಏರಿದ ಸಿಎಂ ಸಿದ್ದರಾಮಯ್ಯ ದಸರಾ ವೈಭವದ ದೀಪಾಲಂಕಾರವನ್ನು ಕಣ್ತುಂಬಿಕೊಂಡರು.

ಅಂಬಾರಿ ಬಸ್ ಸಂಚರಿಸುವ ಮಾರ್ಗದುದ್ದಕ್ಕೂ ಮುಖ್ಯಮಂತ್ರಿಗಳನ್ನು ನೋಡಲು ಜನರು ಕಿಕ್ಕಿರಿದು ನಿಂತಿದ್ದರು. ತಮ್ಮನ್ನು ನೋಡಲು ಬಂದಿದ್ದ ಜನತೆಗೆ ನಾಡಹಬ್ಬ ದಸರಾ ಮಹೋತ್ಸವದ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ, ಕೈ ಬೀಸಿ ಸಂಭ್ರಮಿಸಿದರು. ಅಂಬಾರಿ ಬಸ್ನಲ್ಲಿಯೇ ಕುಳಿತು ಬನ್ನಿಮಂಟಪದಲ್ಲಿ ನಡೆದ ಡ್ರೋನ್ ಶೋ ಅನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ರಾಮಸ್ವಾಮಿ ವೃತ್ತದಿಂದ ಆರಂಭವಾದ ದೀಪಾಲಂಕಾರ ವೀಕ್ಷಣೆ ಬಸವೇಶ್ವರ ವೃತ್ತ, ವಿದ್ಯಾಪೀಠ ವೃತ್ತ, ಹಾರ್ಡಿಂಜ್ ಸರ್ಕಲ್, ಕೆ.ಆರ್.ಸರ್ಕಲ್, ಆಯುರ್ವೇದಿಕ್ ವೃತ್ತ, ಹೈವೆ ವೃತ್ತದ ಮೂಲಕ ಸಾಗಿ ಎಲ್ಐಸಿ ವೃತ್ತದಲ್ಲಿ ಮುಕ್ತಾಯಗೊಂಡಿತು.
ಲೈಟಿಂಗ್ಸ್ ನೋಡಲು ತಮ್ಮ ಜೊತೆ ಆಗಮಿಸಿದಂತಹ ಸಚಿವರಿಗೆ ಮೈಸೂರಿನ ಅರಮನೆ ಹಾಗೂ ಮಾರ್ಗ ಮಧ್ಯದಲ್ಲಿ ಬರುವಂತಹ ಸ್ಥಳಗಳ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ವಿವರಿಸಿ, ಅದರ ಹಿನ್ನೆಲೆ ಹಾಗೂ ಮಹತ್ವವನ್ನು ತಿಳಿಸಿದ್ದು ಇನ್ನೂ ವಿಶೇಷವಾಗಿತ್ತು.
ಜಂಬೂ ಸವಾರಿಗೆ ಕ್ಷಣಗಣನೆ
ಮೈಸೂರು ದಸರಾ ಹಬ್ಬದ ಪ್ರಮುಖ ಆಕರ್ಷಣೆಯಾದ ವಿಶ್ವ ವಿಖ್ಯಾತ ಜಂಬೂ ಸವಾರಿ ಶನಿವಾರ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಸಿಎಂ ಸಿದ್ದರಾಮಯ್ಯನವರು ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಮಾಡಲಿದ್ದು, ಸಂಜೆ 4 ಗಂಟೆಯಿಂದ 4-30 ಗಂಟೆಯ ನಡುವೆ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. 1 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದ್ದು, ಅರಮನೆ ಮುಂಭಾಗ 30 ಸಾವಿರ ಆಸನ ವ್ಯವಸ್ಥೆ ಮಾಡಿದ್ದು, 5 ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. 750 ಕೆಜಿ ತೂಕದ ಚಿನ್ನದ ಹೊಂಬಾರಿಯನ್ನು ಅಭಿಮನ್ಯು ಹೊತ್ತು ಸಾಗಲಿದ್ದಾನೆ.












Click it and Unblock the Notifications