ತುಂಬಿದ ಕಬಿನಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ
ಮೈಸೂರು, ಜೂ. 28: ಮೈಸೂರು ಜಿಲ್ಲ ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯ ಮಳೆಯಿಂದ ಭರ್ತಿಯಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಬಾಗಿನ ಅರ್ಪಿಸಿದರು.
ಕಳೆದ ಕೆಲ ದಿನಗಳಿಂದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ 2284 ಅಡಿಯ ಜಲಾಶಯ ಭರ್ತಿಯಾಗಿದೆ. ಈ ವರ್ಷ ಭರ್ತಿಯಾದ ಮೊದಲ ಜಲಾಶಯ ಎನ್ನುವ ಗೌರವಕ್ಕೂ ಪಾತ್ರವಾಗಿದೆ.

ಕಬಿನಿ ಜಲಾಶಯದಿಂದ 30ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದ ಕೆಳಗಿನ 15 ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇದರಿಂದ ಬಿದರಳ್ಳಿ, ಸರಗೂರು, ಎನ್.ಬೇಗೂರು, ಹೊಸೂರು ಸೇರಿದಂತೆ ವಿವಿಧೆಡೆ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ.
ಮಂಡ್ಯದಲ್ಲಿರುವ ಕೆಆರ್ಎಸ್ ಕೂಡ 100 ಅಡಿ ತಲುಪಿದ್ದು, ಅದು ತುಂಬಲು ಕೇವಲ 24 ಅಡಿ ಬಾಕಿ ಅಷ್ಟೇ. ಅತ್ತ ಕೊಡಗಿನಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ತ್ರಿವೇಣಿ ಸಂಗಮ ಭರ್ತಿಯಾಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ರಾಜ್ಯದ ಹಲವೆಡೆ ವರುಣನ ಆರ್ಭಟ ಮುಂದುವರಿದಿದೆ. ಬಹುತೇಕ ಎಲ್ಲ ಜಲಾಶಯಗಳು ಭರ್ತಿಯಾಗತೊಡಗಿವೆ. ಮುಂದಿನ 24 ಗಂಟೆಗಳಲ್ಲಿ ಮಲೆನಾಡು ಮತ್ತು ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳು ಭಾರೀ ಮಳೆ ಪಡೆದುಕೊಳ್ಳಲಿವೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications