ಬೊಮ್ಮಾಯಿ ಹೇಳಿದ್ರೆ ವರುಣಾ ಕ್ಷೇತ್ರವನ್ನು ತಾಲೂಕು ಕೇಂದ್ರ ಮಾಡಲು ಆಗಲ್ಲ, ಜನ ಕೇಳಿದ್ರೆ ಮಾತ್ರ ಮಾಡ್ತೇನೆ: ಸಿಎಂ
ಮೈಸೂರು, ಜೂನ್ 10: ವರುಣಾ ತಾಲೂಕು ಕೇಂದ್ರವಾಗಬೇಕು ಎಂದು ಜನ ಕೇಳಿಲ್ಲ. ಒಂದು ವೇಳೆ ಜನರು ಕೇಳಿದರೆ ಈ ಕಾರ್ಯವನ್ನು ಖಂಡಿತವಾಗಿಯೂ ನೆರವೇರಿಸುತ್ತೇನೆ. ಬೊಮ್ಮಾಯಿ ಹೇಳಿದರೆ ಮಾಡುವುದಕ್ಕೆ ಆಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದರು.
ಮೈಸೂರು ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾವು ಅಧಿಕಾರಕ್ಕೆ ಬಂದರೆ ವರುಣಾ ಕ್ಷೇತ್ರವನ್ನು ತಾಲೂಕು ಮಾಡುತ್ತೇವೆ ಎಂದು ಹೇಳಿದ್ದರು. ಇದನ್ನು ಜನ ಕೇಳಿಲ್ಲ. ವರುಣಾ ಕ್ಷೇತ್ರದಲ್ಲಿ ನಾನು ಮೂರು ದಿನ ಪ್ರಚಾರ ಮಾಡಿದ್ದೇನೆ. ಆಗಲೂ ಎಲ್ಲಿಯೂ ಜನ ಕೇಳಿಲ್ಲ. ಬಸವರಾಜ ಬೊಮ್ಮಾಯಿ ಕೇಳಿದ ತಕ್ಷಣ ಇದನ್ನು ತಾಲೂಕು ಕೇಂದ್ರ ಮಾಡುವುದಿಲ್ಲ. ವರುಣಾ ಕ್ಷೇತ್ರದ ಜನ ಕೇಳಿದರೆ ಮಾಡುತ್ತೇವೆ ಎಂದರು.

ತನಿಖೆ ನಡೆಯುತ್ತಿದೆ:
ಇನ್ನು ಪಿ.ಎಸ್.ಐ ಹಾಗೂ 40% ಆರೋಪದ ಬಗ್ಗೆ ಸರ್ಕಾರ ತನಿಖೆ ಮಾಡಲಿ ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾರನ್ನು ಕೇಳಿ ನಾವು ತನಿಖೆ ಮಾಡಬೇಕಿಲ್ಲ. ಸಾಕ್ಷಿಗಳ ಆಧಾರದ ಮೇಲೆ ಖಂಡಿತವಾಗಿಯೂ ತನಿಖೆ ನಡೆಸುತ್ತೇವೆ. ಪಿ.ಎಸ್.ಐ ಹಗರಣದ ಪ್ರಕರಣ ತನಿಖೆ ಈಗಾಗಲೇ ನಡೆಯುತ್ತಿದ್ದು, ಎಡಿಜಿಪಿ ಪೌಲ್ ಈಗಾಗಲೇ ಜೈಲಿನಲ್ಲಿದ್ದಾರೆ. ಇನ್ನು ಹಲವರ ಮೇಲೆ ತನಿಖೆ ನಡೆಯುತ್ತಿದೆ ಎಂದರು.
ಸುಳ್ಳು ಹೇಳುವುದಿಲ್ಲ. ನುಡಿದಂತೆ ನಡೆವ ಸರ್ಕಾರ ನಮ್ಮದು. ಬಿಜೆಪಿಯಂತೆ ಸುಳ್ಳು ಹೇಳುವುದಿಲ್ಲ. ಹಾಗೆಯೆ ಬಿಜೆಪಿ ಅಧಿಕಾರದಲ್ಲಿದ್ದಾಗ ತಮಗೆ ಬೇಕಾದವರಿಗೆ ಭೂಮಿ ನೀಡಿರುವ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಮಾಹಿತಿ ಸಂಗ್ರಹಿಸಲು ತಿಳಿಸಲಾಗಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮಹಿಳೆಯರಿಗೆ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣ
ನಾಳೆಯಿಂದ (ಜೂನ್ 11) ಮಹಿಳೆಯರ ಉಚಿತ ಸಾರಿಗೆ ಪ್ರಯಾಣ ಯೋಜನೆ ಜಾರಿ ಆಗುತ್ತದೆ. ಹಾಗೂ ರಾಜ್ಯದ ಎಲ್ಲ ಮಹಿಳೆಯರಿಗೆ ವೋಲ್ವೋ, ಎಸಿ ಬಸ್ ಬಿಟ್ಟು ಇತರೆ ಬಸ್ಗಳಲ್ಲಿ ಉಚಿತ ಪ್ರಯಾಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ತಿಳಿಸಿದರು.
ಭಾನುವಾರ ಮಧ್ಯಾಹ್ನ 1 ಗಂಟೆಯಿಂದ ಉಚಿತ ಬಸ್ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಈ ಸಂದರ್ಭದಲ್ಲಿ ವಿಧಾನಸೌಧದ ಬಳಿ ನಾನು, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಾರಿಗೆ ಸಚಿವರು ಸೇರಿ ಈ ಯೋಜನೆಯನ್ನು ಜಾರಿ ಮಾಡುತ್ತೇವೆ. ಅಲ್ಲದೆ ಜಿಲ್ಲಾ ಕೇಂದ್ರದಲ್ಲಿ ಏಕಕಾಲಕ್ಕೆ ಜಾರಿಯಾಗುತ್ತದೆ ಎಂದು ತಿಳಿಸಿದರು. ಇನ್ನು ರಾಜ್ಯದ ಜಿಎಸ್ಟಿ ಪಾಲಿಗೆ ಒತ್ತಾಯದ ವಿಚಾರವಾಗಿ ಮಾತನಾಡಿದ ಅವರು, ನ್ಯಾಯಯುತವಾಗಿ ಕೇಂದ್ರದಿಂದ ನಮಗೆ ಬೇಕಾದ ಹಣವನ್ನು ಒತ್ತಾಯ ಪೂರ್ವಕವಾಗಿ ಕೇಳುತ್ತೇವೆ ಎಂದರು.
ಹಾಗೆಯೆ ರಾಜ್ಯದಲ್ಲಿ ಮಳೆ ಕೊರತೆ ಆತಂಕ ವಿಚಾರವಾಗಿ ಸೋಮವಾರ ಕುಡಿಯುವ ನೀರಿನ ಸಂಬಂಧ ಅಧಿಕಾರಿಗಳ ಸಭೆ ಕರೆಯಲಾಗಿದೆ.
ಮಳೆ ಸಮಸ್ಯೆ ಇರುವ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಕೂಡ ವಿಡಿಯೋ ಕಾನ್ಫರೆನ್ಸ್ ಮಾಡಿ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಚಾಲನೆ ಆಗಲಿರುವ ಯೋಜನೆಗಳು
1. ಜುಲೈ 1 ರಿಂದ ಗುಲ್ಬರ್ಗದಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ.
2. ಜುಲೈ 1ರಂದೇ 10 ಕೆ.ಜಿ. ಆಹಾರ ಧಾನ್ಯ ಕೊಡುವ ಯೋಜನೆಗೆ ಮೈಸೂರಿನಲ್ಲಿ ಚಾಲನೆ.
3. ಜುಲೈ 16ರಿಂದ ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ.
2022-23ರಲ್ಲಿ ಪಾಸ್ ಆದ ಪದವಿ, ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳು 24 ತಿಂಗಳಲ್ಲಿ ಕೆಲಸ ಸಿಗದಿದ್ದರೆ ಹಣ ಸಿಗಲಿದೆ. ಒಂದು ವೇಳೆ ಮಧ್ಯೆ ಸರ್ಕಾರಿ ಅಥವಾ ಖಾಸಗಿ ಕೆಲಸ ಸಿಕ್ಕರೆ ಹಣ ಸಿಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ.ಮಹದೇವಪ್ಪ, ಪಶು ಸಂಗೋಪನೆ ಸಚಿವರಾದ ಕೆ.ವೆಂಕಟೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications