CM Siddaramaih: ರಾಜ್ಯಪಾಲರ ಶೋಕಾಸ್ ನೋಟಿಸ್; ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು?
ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಶೋಕಾಸ್ ಕೊಟ್ಟಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇದಕ್ಕೆ ಸರ್ಕಾರದ ಸಚಿವರು ವಿರೋಧ ವ್ಯಕ್ತಪಡಿಸಿದ್ದರೆ, ಬಿಜೆಪಿ-ಜೆಡಿಎಸ್ ನಾಯಕರು ಸ್ವಾಗತಿಸಿದ್ದಾರೆ.
ತಮ್ಮ ವಿರುದ್ಧ ಶೋಕಾಸ್ ನೋಟಿಸ್ ಕೊಟ್ಟಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಇದಿರಂದ ನಾನು ಹೆದರಲ್ಲ, ಇದನ್ನೆಲ್ಲ ಎದುರಿಸಲು ಸಾವು ಸಜ್ಜಾಗಿದ್ದೇವೆ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ತಪ್ಪು ಮಾಡಿದ್ದರೆ ಹೆದರಬೇಕು, ನಾನು ಯಾವ ತಪ್ಪು ಮಾಡಿಲ್ಲ, ಇದಕ್ಕೆಲ್ಲ ಹೆದರುವ ಮಾತೇ ಇಲ್ಲ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ಕೈಗೊಂಬೆಯಾಗಿ ವರ್ತಿಸಿದ್ದಾರೆ. ನಾನು 136 ಶಾಸಕರ ಬೆಂಬಲ ಪಡೆದು ಮುಖ್ಯಮಂತ್ರಿಯಾಗಿದ್ದೇನೆ. ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲದೇ ಇದ್ದರೂ ಸರ್ಕಾರ ಅಸ್ಥಿರಗೊಳಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ!
ರಾಜ್ಯಪಾಲರಿಗೆ ಸಲಹೆ ನೀಡುವವರು ಯಾರು. ರಾಜಭವನ ಹಾಗೂ ರಾಜ್ಯಪಾಲರ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದ ಸಿದ್ದರಾಮಯ್ಯ, ರಾಜ್ಯಪಾಲರ ನೋಟಿಸ್ ಗೆ ನಾನ್ಯಾಕೆ ಹೆದರಲಿ. ಅಶೋಕ್ ಹೆದರಿರಬೇಕು, ಅವರಿಗೆ ಭಯ, ನನಗಲ್ಲ. ಟಿ.ಜೆ. ಅಹ್ರಾಂ ಒಬ್ಬ ಬ್ಲಾಕ್ ಮೇಲರ್, ಜುಲೈ 26 ಕ್ಕೆ ಬೆಳಗ್ಗೆ 11:30 ಕ್ಕೆ ದೂರು ಕೊಡ್ತಾನೆ, ಆ ದೂರಿನ ಪರಾಮರ್ಶೆ ಮಾಡದೇ ಆ ದಿನ ಸಂಜೆಯೇ, ಶೋಕಾಸ್ ನೋಟಿಸ್ ರೆಡಿ ಇದೆ ಬಂದು ಪಡೆದುಕೊಳ್ಳಿ ಎಂದು ನಮ್ಮ ಅಧಿಕಾರಿ ಎಲ್. ಕೆ. ಅತೀಕ್ ಗೆ ಹೇಳಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರದ ಅವದಿಯಲ್ಲಿ ಸಚಿವರಾಗಿದ್ದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜರ್ನಾರ್ಧನ ರೆಡ್ಡಿ ವಿರುದ್ಧದ ದೂರು ಇನ್ನೂ ಹಾಗೆಯೇ ಇವೆ. ಅವರಿಗೆ ಶೋಕಾಸ್ ನೋಟಿಸ್ ಕೊಟ್ಟಿಲ್ಲ. ನನಗೆ ಯಾಕೆ ತರಾತುರಿಯಲ್ಲಿ ನೋಟಿಸ್ ಕೊಟ್ಟಿದ್ದಾರೆ ಎಂದು ಪ್ರಶ್ನೆ ಮಾಡಿದರು.
ಬಿಜೆಪಿ ಪಾದಯಾತ್ರೆಗೆ ಹೆಚ್ ಡಿ ಕುಮಾರಸ್ವಾಮಿ ಬೆಂಬಲ ನೀಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಕೇಂದ್ರದ ಮಂತ್ರಿ, ಜೆಡಿಎಸ್ ನಾಯಕ. ಈ ಕೇಸ್ನಲ್ಲಿ ಏನು ಇಲ್ಲ, ಪಾದಯಾತ್ರೆ ಬೇಡ ಅಂದಿದ್ದರು.ಮಳೆ ಜಾಸ್ತಿಯಾಗಿ ಪ್ರವಾಹ ಬಂದಿದೆ. ಅದರ ಕಡೆ ಗಮನ ಕೊಡಬೇಕು ಅಂದರು. ಈಗ ಪ್ರವಾಹ ಎಲ್ಲಾ ಹೋಗಿದ್ಯಾ? ಕುಮಾರಸ್ವಾಮಿ ಇದನ್ನು ಸ್ವ ಇಚ್ಛೆಯಿಂದ ಮಾಡ್ತಾ ಇಲ್ಲ. ಇದನ್ನೆಲ್ಲಾ ನಾವು ಎದುರಿಸಲು ಸಿದ್ಧರಿದ್ದೇವೆ ಎಂದರು.












Click it and Unblock the Notifications