'ಸಮಾಜದಲ್ಲಿ ಒಡಕು ಮೂಡಿಸುವುದನ್ನು ಸಿಎಂ ನಿಲ್ಲಿಸಲಿ'
ಮೈಸೂರು, ಜುಲೈ 25: ಜಾತಿ ರಾಜಕೀಯ ಮಾಡಿ, ಸಮಾಜದಲ್ಲಿ ಒಡಕು ಮೂಡಿಸುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಬಿಡಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ಸಿದ್ದರಾಮಯ್ಯರಿಂದ ಹಿಂದೂ-ಮುಸ್ಲಿಮರ ಮಧ್ಯೆ ಬೆಂಕಿ ಹಚ್ಚುವ ಕೆಲಸ'
ಇಲ್ಲಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಮಂಗಳವಾರ ಭೇಟಿ ನೀಡಿದ ಅವರು, ನಾಡದೇವತೆಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರ ಜತೆ ಮಾತನಾಡಿದರು. ಲಿಂಗಾಯತ ಸ್ವತಂತ್ರ ಧರ್ಮ ಎಂದು ಘೋಷಿಸಲು ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಭರವಸೆ ನೀಡುವ ಮೂಲಕ ಒಡಕು ಮೂಡಲು ಕಾರಣವಾಗಿರುವುದು ಆತಂಕ ಮೂಡಿಸುವಂತಿದೆ.
ಸರಕಾರವೇ ಈ ಚಿತಾವಣೆಗೆ ನಿಂತಿದ್ದು, ಬಡತನ ನಿರ್ಮೂಲನೆ ಮತ್ತು ಅಭಿವೃದ್ಧಿ ಬಗ್ಗೆ ಮೊದಲು ಕಾಳಜಿ ವಹಿಸಲಿ. ರಾಜಕೀಯ ಲಾಭಕ್ಕಾಗಿ ಜಾತಿ, ಧರ್ಮದಲ್ಲಿ ಒಡಕು ತರುವುದನ್ನು ನಿಲ್ಲಿಸಲಿ ಎಂದು ಸಲಹೆ ನೀಡಿದರು.
ಈ ವೇಳೆ ಮೇಯರ್ ಎಂ.ಜೆ.ರವಿಕುಮಾರ್ ಸೇರಿದಂತೆ ಜೆಡಿಎಸ್ ನ ಪ್ರಮುಖರು ಕುಮಾರಸ್ವಾಮಿ ಅವರ ಜೊತೆಗಿದ್ದರು.
ವೀರಶೈವ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಬೇಕು ಎಂಬುದು ಪ್ರಬಲವಾಗಿ ಕೇಳಿಬರುತ್ತಿರುವ ಒತ್ತಾಯವಾಗಿದೆ. ಈ ವಿಚಾರದಲ್ಲಿ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.